ETV Bharat / state

ಗ್ರಾಮಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಪ್ರಧಾನಿ ಮೋದಿಗೆ ಪತ್ರ: ಪಿಎಂ ಕಚೇರಿಯಿಂದ ಮರುಪತ್ರ

author img

By

Published : Aug 19, 2023, 11:14 PM IST

ಮೂಲಸೌಕರ್ಯ ಕಲ್ಪಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಕುಂಬಳಡಿಕೆ ಗ್ರಾಮದ ಜನರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಪ್ರಧಾನಿ ಕಚೇರಿಯಿಂದ ಸಮಸ್ಯೆ ಬಗೆಹರಿಸುವ ಕುರಿತು ಮರುಪತ್ರ ಬಂದಿದೆ.

letter-to-prime-minister-modi-to-provide-infrastructure-response-from-prime-ministers-office-within-24-hours
ಮೂಲ ಸೌಕರ್ಯ ಕಲ್ಪಿಸುವಂತೆ ಪ್ರಧಾನಿ ಮೋದಿಗೆ ಪತ್ರ : ಪ್ರಧಾನಿ ಕಚೇರಿಯಿಂದ ಮರುಪತ್ರ

ಮೂಲ ಸೌಕರ್ಯ ಕಲ್ಪಿಸುವಂತೆ ಪ್ರಧಾನಿ ಮೋದಿಗೆ ಪತ್ರ : ಪ್ರಧಾನಿ ಕಚೇರಿಯಿಂದ ಮರುಪತ್ರ

ಚಿಕ್ಕಮಗಳೂರು : ಇಲ್ಲಿನ ಗ್ರಾಮವೊಂದರಲ್ಲಿ ಜನರಿಗೆ ಓಡಾಡಲು ಸರಿಯಾದ ರಸ್ತೆ ಇಲ್ಲ. ಕುಡಿಯಲು ನೀರಿನ ವ್ಯವಸ್ಥೆ, ವಿದ್ಯುತ್​ ಸಂಪರ್ಕವೂ ಇಲ್ಲ. ಹೀಗೆ ಕನಿಷ್ಠ ಮೂಲ ಸೌಕರ್ಯಗಳು ಇಲ್ಲದೆ ಪರದಾಡುತ್ತಿರುವ ಜಿಲ್ಲೆಯ ಕಳಸ ತಾಲೂಕಿನ ಕುಂಬಳಡಿಕೆ ಗ್ರಾಮದ ಜನರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿದ್ದಾರೆ. ಇದಕ್ಕೆ ಪ್ರಧಾನಿ ಕಚೇರಿಯಿಂದ ಪೂರಕ ಪ್ರತಿಕ್ರಿಯೆ ದೊರೆತಿದ್ದು, ಗ್ರಾಮಸ್ಥರು ಸಂತಸಗೊಂಡಿದ್ದಾರೆ.

ಜಿಲ್ಲೆಯ ಕಳಸ ತಾಲೂಕಿನ ಕುಂಬಳಡಿಕೆ ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಈ ಗ್ರಾಮದಲ್ಲಿ ಬರೋಬ್ಬರಿ 70ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಕನಿಷ್ಠ ಮೂಲ ಸೌಕರ್ಯ ಇಲ್ಲದೆ ದಿನ ದೂಡುವಂತಾಗಿದೆ. ಕಳೆದ ಮೂರು ದಶಕಗಳಿಂದ ಇಲ್ಲಿನ ಜನರು ಇದೇ ರೀತಿ ಜೀವನ ಸಾಗಿಸುತ್ತಿದ್ದಾರೆ. ಮೂಲ ಸೌಕರ್ಯ ಕಲ್ಪಿಸುವಂತೆ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಹಾಗಾಗಿ ತಮ್ಮ ಸಮಸ್ಯೆಗಳನ್ನು ಪರಿಹಾರಕೊಳ್ಳಲು ಗ್ರಾಮಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖುದ್ದಾಗಿ ಪತ್ರ ಬರೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಕಚೇರಿಯು ಪರಿಹಾರ ಒದಗಿಸುವ ಭರವಸೆ ನೀಡಿರುವುದಲ್ಲದೆ, ಮುಂದಿನ ಹತ್ತು ದಿನಗಳಲ್ಲಿ ಪ್ರಧಾನಿ ಮೋದಿ ಅವರೇ ಕರೆ ಮಾಡಿ ಗ್ರಾಮಸ್ಥರ ಸಮಸ್ಯೆ ಆಲಿಸುತ್ತಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಗ್ರಾಮಸ್ಥ ಸಂಜೀವ್​, ಕಳೆದ 10 ವರ್ಷಗಳಿಂದ ನಾವು ಇಲ್ಲಿ ವಾಸ ಮಾಡುತ್ತಿದ್ದೇವೆ. ಮೂಲ ಸೌಕರ್ಯದ ಕೊರತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಹಾಗಾಗಿ ಇಲ್ಲಿನ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದೆ. 24 ದಿನದೊಳಗೆ ಗ್ರಾಮದಲ್ಲಿಗೆ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಪ್ರಧಾನಿ ಕಚೇರಿಯಿಂದ ಪತ್ರ ಬಂದಿದೆ. ಇದರ ಜೊತೆಗೆ ರಾಷ್ಟ್ರಪತಿಗಳಿಗೂ ಪತ್ರ ಬರೆದು ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.

ಇನ್ನು, ಇದು ಹೆಚ್ಚು ಮಳೆ ಬೀಳುವ ಪ್ರದೇಶವಾಗಿದೆ. ಇಲ್ಲಿನ ಜನರು ಜೋಪಡಿ ರೀತಿಯ ಗುಡಿಸಲಿನಲ್ಲಿ ವಾಸವಿದ್ದು, ಧಾರಾಕಾರ ಮಳೆ ಬಂದರೆ ಮಳೆ ನೀರು ಮನೆಗಳಿಗೆ ನುಗ್ಗುತ್ತದೆ. ಅಲ್ಲದೆ ಗ್ರಾಮದಲ್ಲಿ ವಿದ್ಯುತ್​ ಸಂಪರ್ಕ ಇಲ್ಲದೆ ಜನರು ದಿನನಿತ್ಯ ಕತ್ತಲಲ್ಲಿ ಜೀವನ ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಿಗೂ ಓದಲು ಸಮಸ್ಯೆಗಳಾಗುತ್ತಿದೆ. ಸದ್ಯ ಪ್ರಧಾನಿ ಕಚೇರಿಯಿಂದ ಸಮಸ್ಯೆ ಬಗೆಹರಿಸುವ ಬಗ್ಗೆ ಪತ್ರ ಬಂದಿದ್ದು, ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆ ಈ ಸಂಬಂಧ ಸೂಕ್ತ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಜೋಯಿಡಾ ಕುಗ್ರಾಮದಲ್ಲಿ ವೃದ್ಧೆ ಅಸ್ವಸ್ಥ: 2.5 ಕಿಮೀ ಜೋಳಿಗೆಯಲ್ಲೇ ಹೊತ್ತೊಯ್ದು ಚಿಕಿತ್ಸೆ ಕೊಡಿಸಿದ ಗ್ರಾಮಸ್ಥರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.