ETV Bharat / state

ಟ್ರೆಕ್ಕಿಂಗ್ ಪ್ರಿಯರ ಸ್ವರ್ಗ ಸುಬ್ರಹ್ಮಣ್ಯದ ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ

author img

By ETV Bharat Karnataka Team

Published : Oct 7, 2023, 11:04 PM IST

subrahmanyas-kumara-parvata-trekking-started-again
ಟ್ರೆಕ್ಕಿಂಗ್ ಪ್ರಿಯರ ಸ್ವರ್ಗ ಸುಬ್ರಹ್ಮಣ್ಯದ ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ..!

ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತದ ಚಾರಣಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ) : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತದ ಚಾರಣಕ್ಕೆ ಮತ್ತೆ ಅವಕಾಶ ಒದಗಿಸಲಾಗಿದೆ. ಸದ್ಯ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆಯ ಕುಮಾರಪರ್ವತದ ಚಾರಣವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಇದೀಗ ನಿರ್ಬಂಧಗಳನ್ನು ತೆರವುಗೊಳಿಸಿ ಕೆಲವು ಷರತ್ತುಗಳೊಂದಿಗೆ ಮತ್ತೆ ಚಾರಣಕ್ಕೆ ಅವಕಾಶ ನೀಡಲಾಗಿದೆ. ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ನೀಡುವಂತೆ ಮತ್ತು ಸುರಕ್ಷತೆ ಮತ್ತು ಕಾಡುಪ್ರಾಣಿಗಳಿಗೆ ತೊಂದರೆ ನೀಡದಂತೆ ಚಾರಣಿಗರಿಗೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕುಮಾರಪರ್ವತ ಚಾರಣ ಮತ್ತೆ ಆರಂಭಗೊಂಡಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ವ್ಯವಸ್ಥೆಯನ್ನು ಇಲಾಖೆ ಮಾಡಿದೆ. ಕುಮಾರಪರ್ವತ, ಗಿರಿಗದ್ದೆ, ಕಲ್ಲಚಪ್ಪರ ಸೇರಿದಂತೆ ಪರ್ವತಾರೋಹಣದ ಹಾದಿಯಲ್ಲಿ ಸ್ವಚ್ಛತೆ ಕಾಪಾಡಲು ಬೇಕಾದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸೂಚನಾ ಫಲಕಗಳನ್ನು ಅಲ್ಲಲ್ಲಿ ಅಳವಡಿಸಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗಿದೆ. ಪ್ಲಾಸ್ಟಿಕ್‌ ಬಾಟಲಿ, ಕವರ್‌‌ಗಳು, ಇತರ ಪ್ಲಾಸ್ಟಿಕ್, ಬಾಟಲಿ ವಸ್ತುಗಳನ್ನು ಕೊಂಡೊಯ್ಯದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಲ್ಲಿ ಕಸದ ತೊಟ್ಟಿಗಳ ವ್ಯವಸ್ಥೆಯನ್ನೂ ಇಲಾಖೆ ಕಲ್ಪಿಸಿದೆ. ಪ್ರವಾಸಿಗರು ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದೂ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ : ಪರಿಶುದ್ಧ ಗಾಳಿ ಇರುವ ದೇಶದ ಟಾಪ್ 10 ಸಿಟಿ ಪಟ್ಟಿ ಬಿಡುಗಡೆ.. ಚಿಕ್ಕಮಗಳೂರು ಸೇರಿ ರಾಜ್ಯದ 8 ನಗರಗಳಿಗೆ ಸ್ಥಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.