ETV Bharat / state

ಕಾಂತರಾಜು ಆಯೋಗದ ವರದಿ ಒಪ್ಪಿಕೊಳ್ಳದೆ ವೈಜ್ಞಾನಿಕ ಜಾತಿ ಜನಗಣತಿ ಮಾಡಿ: ವೀರಶೈವ-ಲಿಂಗಾಯತ ಮಹಾಸಭಾ ನಿರ್ಣಯ

author img

By ETV Bharat Karnataka Team

Published : Dec 24, 2023, 5:19 PM IST

Updated : Dec 24, 2023, 10:16 PM IST

Resolutions of Veerashaiva Lingayat Mahasabha: ಪ್ರಸ್ತುತ ಚರ್ಚೆಯ ವಸ್ತುವಾಗಿರುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷಾ ವರದಿ/ಜಾತಿ ವರದಿ ಅಧಿಕೃತವಾಗಿ ಅಂಗೀಕಾರವಾಗುವ ಮೊದಲೇ ಅದರಲ್ಲಿನ ಅಂಶಗಳು ಸೋರಿಕೆಯಾಗಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

Resolutions of Veerashaiva Lingayat Mahasabha 24th Convention
ಕಾಂತರಾಜು ಆಯೋಗದ ವರದಿ ಒಪ್ಪಿಕೊಳ್ಳದೆ, ವೈಜ್ಞಾನಿಕ ಜಾತಿಗಣತಿ ಮಾಡಿ: ವೀರಶೈವ-ಲಿಂಗಾಯತ ಮಹಾಸಭಾ ಮಹಾಧಿವೇಶನದ ನಿರ್ಣಯ

ದಾವಣಗೆರೆ: ಎರಡು ದಿನಗಳ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾಧಿವೇಶನಕ್ಕೆ ಇಂದು ತೆರೆ ಬಿತ್ತು. ಸಮಾರೋಪ ಸಮಾರಂಭಕ್ಕೂ ಮೊದಲು ಮಹಾಸಭಾದ ವತಿಯಿಂದ ಪ್ರಮುಖ ನಿರ್ಣಯಗಳನ್ನು ಹೊರಡಿಸಲಾಯಿತು. ಜಾತಿ ಗಣತಿ ಕುರಿತ ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಳ್ಳದೆ, ವೈಜ್ಞಾನಿಕವಾಗಿ ಜಾತಿ ಜನಗಣತಿ ಮಾಡಬೇಕು ಎಂದು ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅಧಿವೇಶನದ ಪ್ರಮುಖ ನಿರ್ಣಯಗಳನ್ನು ಸಮಾಜ ಬಾಂಧವರ ಮುಂದೆ ಪ್ರಸ್ತುತಪಡಿಸಿದರು.‌ ಉಜ್ಜಯಿನಿ ಪೀಠದ ಶ್ರೀ, ಸಾಣೇಹಳ್ಳಿ ಶಾಖಾ ಮಠದ ಪಂಡಿತಾರಾಧ್ಯ ಶ್ರೀ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಿರ್ಣಯಗಳು:

  • ದೇಶದ ಅಖಂಡತೆ, ಏಕತೆ, ಸಮಗ್ರತೆ, ಭದ್ರತೆಯ ರಕ್ಷಣೆಗೆ ಮಹಾಸಭೆ ಹಾಗೂ ನಮ್ಮ ಸಮಾಜ ಸದಾ ಕಟಿಬದ್ಧವಾಗಿದ್ದು, ಅಂತಹ ಯಾವುದೇ ಹೋರಾಟ, ಪ್ರಯತ್ನಗಳಿಗೆ ಈ ಹಿಂದಿನಂತೆಯೇ ಪ್ರೋತ್ಸಾಹ, ಬೆಂಬಲ ನೀಡುತ್ತದೆ.
  • 12ನೇ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಸಂಸತ್ತಿನ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ, ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಚಿಂತನೆ, ಅನುಭಾವ ಸಾರ್ವಕಾಲಿಕವಾಗಿದ್ದು, ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಬಸವತತ್ವ ಪರಿಪಾಲನೆ ಪರಮಾನ್ನವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಗುರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು.
  • ವೀರಶೈವ-ಲಿಂಗಾಯಿತ ಸಮುದಾಯದಲ್ಲಿ ಲಕ್ಷಾಂತರ ಕಡು ಬಡವರಿದ್ದು, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿದ್ದಾರೆ. ಹೀಗಾಗಿ ವೀರಶೈವ–ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಮತ್ತು ಕೇಂದ್ರ ಸರ್ಕಾರ ಈ ಶಿಫಾರಸನ್ನು ಅಂಗೀಕರಿಸಬೇಕು.
  • ಪ್ರಸ್ತುತ ಚರ್ಚೆಯ ವಸ್ತುವಾಗಿರುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ಅಂದರೆ ಜಾತಿ ಜನಗಣತಿ ಸುಮಾರು 8 ವರ್ಷಗಳಷ್ಟು ಹಳೆಯದಾಗಿದ್ದು, ಅಧಿಕೃತವಾಗಿ ಅಂಗೀಕಾರವಾಗುವ ಮೊದಲೇ ಅದರಲ್ಲಿನ ಅಂಶಗಳು ಸೋರಿಕೆಯಾಗಿವೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಳ್ಳದೆ, ವೀರಶೈವ–ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆಯ ಮತ್ತು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಬೇಕು.
  • ಸಮಾಜದ ಒಳಿತಿಗಾಗಿ ಮತ್ತು ನಮ್ಮ ಸಮುದಾಯದ ನಿಖರ ಜನಸಂಖ್ಯೆಯ ಬಗ್ಗೆ ಜಗತ್ತಿಗೆ ತಿಳಿಸಲು, ಸರ್ಕಾರ ಮುಂದಿನ ದಿನಗಳಲ್ಲಿ ನಡೆಸುವ ಜನ ಗಣತಿಯ ವೇಳೆ ನಮ್ಮ ಸಮಾಜದ ಬಾಂಧವರು ಹಿಂದು ಮತ್ತು ತಮ್ಮ ಉಪ ಜಾತಿಯ ಹೆಸರುಗಳನ್ನು ಬರೆಸದೆ, ಧರ್ಮದ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಸಬೇಕು.
  • ಎಲ್ಲ ರೈತರಿಗೆ ಅನುಕೂಲ ಆಗುವಂತೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಈ ಮಹಾಧಿವೇಶನ ಸರ್ಕಾರವನ್ನು ಒತ್ತಾಯಿಸುತ್ತದೆ.
  • ನಮ್ಮ ಸಮುದಾಯದಿಂದ ಪ್ರಥಮ ಮುಖ್ಯಮಂತ್ರಿ ನಿಜಲಿಂಗಪ್ಪನವರು ನಮ್ಮ ಸಮುದಾಯದ ಹೆಮ್ಮೆ. ಮಹಾಸಭಾ ಸಾಂಕೇತಿಕವಾಗಿ ಈ ಮಹಾ ಅಧಿವೇಶನದ ಮುಖ್ಯ ವೇದಿಕೆಗೆ ಅವರ ಹೆಸರಿಟ್ಟು ಗೌರವ ಸಲ್ಲಿಸಿದೆ. ನಿಜಲಿಂಗಪ್ಪನವರು ವಾಸವಿದ್ದ ಚಿತ್ರದುರ್ಗದ ಅವರ ನಿವಾಸವನ್ನು ಸರ್ಕಾರ ಖರೀದಿಸಿ, ಸಂರಕ್ಷಿಸಿ, ಅಭಿವೃದ್ಧಿಪಡಿಸಿ ನಿಜಲಿಂಗಪ್ಪನವರ ಸರಳತೆ, ಉದಾತ್ತ ಚಿಂತನೆ, ದಕ್ಷ ಆಡಳಿತದ ಸಮ್ಯಕ್ ಚಿತ್ರಣವನ್ನು ನಾಡಿನ ಜನತೆಗೆ ಕಟ್ಟಿಕೊಡುವಂತೆ ಅರ್ಥಪೂರ್ಣವಾಗಿ ಶಾಶ್ವತ ಸ್ಮಾರಕ ನಿರ್ಮಾಣ ಮಾಡಲು, ಆ ಮನೆಯನ್ನು ಖರೀದಿಸಿ ಕಾರ್ಯಪ್ರವೃತ್ತವಾಗಿ ಅವರ ಪುಣ್ಯ ಸ್ಮರಣೆಯ ದಿನವಾದ ಆಗಸ್ಟ್ 8, 2024ರೊಳಗೆ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸಬೇಕು.

ಇದನ್ನೂ ಓದಿ: ಬಸವಣ್ಣ ಪ್ರತಿಪಾದಿಸಿದ್ದು ಮೀಸಲಾತಿಯನ್ನಲ್ಲ, ಸಮಾನತೆ: ಸಿರಿಗೆರೆ ಶ್ರೀ

Last Updated : Dec 24, 2023, 10:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.