ಹುಬ್ಬಳ್ಳಿ: ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಪ್ರಮುಖ ಎರಡು ಯೋಜನೆಗಳಿಗೆ ಒತ್ತು ನೀಡಲಾಗಿದೆ. ಅದರಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕಾರ್ಯಕ್ಕೂ ಮುಂದಾಗಿದ್ದೇವೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ 20 ಲಕ್ಷ ರೂ ಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಬೀದರ್ ಜಿಲ್ಲೆಯನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. 185 ಗ್ರಾಮ ಪಂಚಾಯತ್ ಪಿಡಿಒ ಮತ್ತು ಗ್ರಾಂ. ಪಂ. ಅಧ್ಯಕ್ಷರಿಗೆ ತರಬೇತಿ ನೀಡಲಾಗುವುದು. ನಂತರ ಹಂತ ಹಂತವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದ ಅವರು, ರಾಜ್ಯದ 6023 ಗ್ರಾಮಗಳಲ್ಲಿ ಸೋಲಾರ್ ವಿದ್ಯುತ್ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಡಾಟಾ ಆಪರೇಟರ್ ನೇಮಕಾತಿ:
ಗ್ರಾಮ ಪಂಚಾಯತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು. ಇದರ ಬಗ್ಗೆ ಪಿಡಿಒ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗುವುದು. ಅಲ್ಲದೇ ಪಿಡಿಒ ಕಚೇರಿಗೆ ಗೈರಾದ ಹಿನ್ನೆಲೆ ಕುಂಟು ನೆಪ ಹೇಳಿದರೆ ಅದನ್ನು ಪರಿಗಣಿಸುವುದಿಲ್ಲ. ಇದು ರಾಜ್ಯದ ಪಿಡಿಒಗಳಿಗೆ ಮೊದಲ ಎಚ್ಚರಿಕೆ ಎಂದರು.