ETV Bharat / state

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ ಪ್ರಧಾನಿಗೆ ಪತ್ರ ಬರೆದ ಹೋರಾಟಗಾರು

author img

By ETV Bharat Karnataka Team

Published : Dec 18, 2023, 5:14 PM IST

ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಕಳಸಾ ಬಂಡೂರಿ ಹೋರಾಟಗಾರ ವಿರೇಶ್​ ಸೊಬರದಮಠ ಹೇಳಿದರು.

ಪ್ರಧಾನಿಗೆ ಪತ್ರ ಬರೆದ ಹೋರಾಟಗಾರರು
ಪ್ರಧಾನಿಗೆ ಪತ್ರ ಬರೆದ ಹೋರಾಟಗಾರರು

ಕಳಸಾ ಬಂಡೂರಿ ಹೋರಾಟಗಾರ ವಿರೇಶ್​ ಸೊಬರದಮಠ ಪ್ರತಿಕ್ರಿಯೆ

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಾಕಷ್ಟು ಹೋರಾಟಗಳು ನಡೆದುಕೊಂಡು ಬರುತ್ತಿವೆ. ಇದರ ಬೆನ್ನಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶೀಘ್ರದಲ್ಲೇ ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳಿಸುವಂತೆ ಕಳಸಾ ಬಂಡೂರಿ ಹೋರಾಟಗಾರು ಪತ್ರ ಬರೆದು ಒತ್ತಾಯಿಸಿದ್ದಾರೆ.

ಈ ಕುರಿತು ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಳಸಾ ಬಂಡೂರಿ ಹೋರಾಟಗಾರ ವಿರೇಶ್​ ಸೊಬರದಮಠ ಅವರು, ಕಳೆದ ಹಲವಾರು ವರ್ಷಗಳಿಂದ ಮಹದಾಯಿ ಮತ್ತು ಕಳಸಾ ಬಂಡೂರಿ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ಕಾನೂನು ತೊಡಕು ನಿವಾರಿಸಿ ಯೋಜನೆ ಜಾರಿಗೊಳಿಸಿದರೆ ಜನರಿಗೆ ಅನುಕೂಲವಾಗಲಿದೆ. ಆದರೇ, ಕೇಂದ್ರ ಸರ್ಕಾರ ಯೋಜನೆ ಜಾರಿಗೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಯೋಜನೆ ಜಾರಿಗೊಳಿಸುವಂತೆ ಈಗಾಗಲೇ ಕನ್ನಡ, ಇಂಗ್ಲಿಷ್, ಹಿಂದಿ ಮೂರು ಭಾಷೆಯಲ್ಲೂ​ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗಿದೆ. ಅವರ ವೆಬ್ ಸೈಟಿಗೂ ಕಳುಹಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿಯವರಿಗೆ ಗೌರವವಿದೆ. ಅಂತಾರಾಷ್ಟ್ರೀಯ ಸಮಸ್ಯೆ ಬಗೆಹರಿಸುವ ಮೋದಿಯವರು ಮಧ್ಯಪ್ರವೇಶ ಮಾಡಿ ಈ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ವಿರೇಶ್​ ಸೊಬರದಮಠ ಆಗ್ರಹಿಸಿದರು.

ಈಗಾಗಲೇ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಎಸ್ ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ತೀರ್ಪು ನೀಡಿ ಆಗಿದೆ. ಕರ್ನಾಟಕಕ್ಕೆ ಒಟ್ಟು 13. 42 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಕಾಮಗಾರಿ ಆಗುತ್ತಿಲ್ಲ. ಮಹದಾಯಿ ಜಲವಿವಾದ ನ್ಯಾಯಮಂಡಳಿಯು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಸೇರಬೇಕಾದ ನೀರನ್ನು ಹಂಚಿಕೆ ಮಾಡಿದೆ. ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಕೇವಲ 5.5 ಟಿಎಂಸಿ ಹಂಚಿಕೆ ಮಾಡಿದೆ. ಈ ಪೈಕಿ ಮಲಪ್ರಭಾ ಡ್ಯಾಂಗೆ 4 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದೆ.

ಕಳಸಾ ನಾಲೆಯಿಂದ 1.72 ಟಿಎಂಸಿ, ಬಂಡೂರಿ ನಾಲೆಯಿಂದ 2.18 ಟಿಎಂಸಿ, ಮಹದಾಯಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಬಳಕೆ ಮಾಡಲು 1.50 ಟಿಎಂಸಿ ನೀರು ಹಾಗೂ ವಿದ್ಯುಚ್ಛಕ್ತಿಗೆ ಉತ್ಪಾದನೆಗೆ 8.02 ಟಿಎಂ ನೀರು ಹಂಚಿಕೆ ಮಾಡಲಾಗಿದೆ. ಇನ್ನು ಹುಬ್ಬಳ್ಳಿ - ಧಾರವಾಡ ನಗರದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿ ನದಿಯಿಂದ ಮಲಪ್ರಭಾ ಜಲಾಶಯಕ್ಕೆ ನೀರು ತಿರುಗಿಸುವ ಕರ್ನಾಟಕದ ಪ್ರಸ್ತಾಪಕ್ಕೆ ನ್ಯಾಯ ಮಂಡಳಿ ಸಹ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಕುಡಿಯುವ ಉದ್ದೇಶಕ್ಕಾಗಿ 7.5 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ, ನ್ಯಾಯಮಂಡಳಿಗೆ ಮನವಿ ಮಾಡಿತ್ತು. ಮಹದಾಯಿಯಲ್ಲಿ 200 ಟಿಎಂಸಿ ನೀರಿನಲ್ಲಿ ಕೇವಲ 9 ಟಿಎಂಸಿ ನೀರನ್ನು ಗೋವಾ ಬಳಸಿಕೊಳ್ಳುತ್ತಿದೆ. ಇನ್ನುಳಿದ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಕರ್ನಾಟಕದಲ್ಲಿ ಹರಿಯುವ 45 ಟಿಎಂಸಿ ಅಡಿ ನೀರಿನ ಪೈಕಿ ನಾವು 14.98 ಟಿಎಂಸಿ ಅಡಿ ನೀರನ್ನು ಕೇಳುತ್ತಿದ್ದೇವೆ ಎಂದು ಕರ್ನಾಟಕ ವಾದ ಮಂಡಿಸಿತ್ತು. ಆದರೆ ಇದುವರೆಗೆ ಯಾವುದೇ ರೀತಿಯ ಯೋಜನೆ ಬಗ್ಗೆ ಉಭಯ ಸರ್ಕಾರ ಗಮನ ಹರಿಸುತ್ತಿಲ್ಲ. ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿರೇಶ್​ ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಉದ್ಘಾಟನೆಗೆ ಕಾಯುತ್ತಿರುವ ಹಾವೇರಿ ಮೆಡಿಕಲ್ ಕಾಲೇಜು; ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಜನರ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.