ಧಾರವಾಡ: ಭಾರತ ಕೃಷಿ ಪ್ರಧಾನ ರಾಷ್ಟ್ರ. ಕೃಷಿ ಕ್ಷೇತ್ರವು ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇಂದಿನ ಯುವ ಪೀಳಿಗೆ ಕೃಷಿಗೆ ಸಂಬಂಧಿಸಿದ ಅಧ್ಯಯನಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ರಾಜ್ಯಪಾಲರು ನಿನ್ನೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ವಿದ್ಯಾನಿಲಯದ ಕಾರ್ಯವೈಖರಿ ಮತ್ತು ಸಾಧನೆ ಬಗ್ಗೆ ಚರ್ಚಿಸಿದರು. ಜೊತೆಗೆ ವಿವಿ ಅಭಿವೃದ್ಧಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ನಂತರ ನಗರದ ನಾವೀನ್ಯತೆ ಕೇಂದ್ರ, ಗ್ರಂಥಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಜೈವಿಕ ಯಂತ್ರ ಗ್ಯಾಲರಿ ಮತ್ತು ಸಂಶೋಧನೆ ಕೇಂದ್ರಕ್ಕೆ ಭೇಟಿ ನೀಡಿದರು.
ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ರೈತರು ಆರ್ಥಿಕವಾಗಿ ಸದೃಢರಾಗಲು ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಯಾಗಬೇಕಿದೆ, ಕೃಷಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪ್ರಾಯೋಗಿಕ ಜ್ಞಾನ ಒದಗಿಸಿ ಕೊಡಲು ಕ್ರಮ ವಹಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ನಂತರ ಜೋಳ, ಬಕ್ವೀಟ್ , ಅರಿಶಿಣ, ಸೋಯಾ ಬೀನ್ , ಕಬ್ಬು, ಕಡಲೆಕಾಯಿ ಸೇರಿದಂತೆ ವಿವಿಧ ಸಾವಯವ ಬೆಳೆಗಳ ಬಗ್ಗೆ ಮಾಹಿತಿ ಪಡೆದರು. ಈ ವೇಳೆ, ಕರ್ನಾಟಕ ವಿವಿ ಕುಲಪತಿಗಳಾದ ಕೆ.ಗುಡಸಿ ಮತ್ತು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಬಿ ಚೆಟ್ಟಿ ಉಪಸ್ಥಿತರಿದ್ದರು.