ಗದಗ: ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಿಲ್ಲೆಯ ಗದಗ ನಗರ ಸೇರಿದಂತೆ ಮುಂಡರಗಿ, ರೋಣ, ನರಗುಂದ, ಲಕ್ಷ್ಮೇಶ್ವರ, ಶಿರಹಟ್ಟಿ ತಾಲೂಕಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಮುಂಡರಗಿ ಭಾಗದಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲೆಲ್ಲಾ ನೀರು ತುಂಬಿ ಕೆರೆಯಂತಾಗಿವೆ. ರಸ್ತೆ ದಾಟಲು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ ಹಲವು ಮಣ್ಣಿನ ಮನೆಗಳು, ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದ್ರಹಳ್ಳಿಯಲ್ಲಿ ತಗ್ಗು ಪ್ರದೇಶದ ಸುಮಾರು 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡೀ ನೀರು ಹೊರ ಹಾಕಲು ಗ್ರಾಮಸ್ಥರು ಪರದಾಡಿದ್ದಾರೆ. ಅತ್ತ ಮನೆಯಲ್ಲಿನ ವಸ್ತುಗಳು ಸೇರಿದಂತೆ ದವಸ ಧಾನ್ಯಗಳು ನೀರುಪಾಲಾಗಿವೆ.