150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಜಯಭೇರಿ ಬಾರಿಸುತ್ತದೆ : ನಳಿನ್​ ಕುಮಾರ್ ಕಟೀಲ್​

author img

By

Published : Mar 11, 2023, 11:04 PM IST

bjp-definitely-wins-150-seats-in-assembly-elections-says-nalinkumar-kateel

150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತದೆ .. ಕಟೀಲ್​ ವಿಶ್ವಾಸ - ಹಾವೇರಿಯಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶ - ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ ಕಟೀಲ್​, ಅರುಣ್​ ಸಿಂಗ್, ​ವಿಜಯೇಂದ್ರ

150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಜಯಭೇರಿ ಬಾರಿಸುತ್ತದೆ : ನಳಿನ್​ ಕುಮಾರ್ ಕಟೀಲ್​

ಹಾವೇರಿ : ವಿಧಾನಸಭೆಯಲ್ಲಿ ರಾಮನ ಪೂಜೆಯಾಗಬೇಕೆಂದರೆ, ವಿಧಾನಸಭೆಯಲ್ಲಿ ಆಂಜನೇಯನ ಮಂತ್ರ ಮೊಳಗಬೇಕೆಂದರೆ, ವಿಧಾನಸಭೆಯಲ್ಲಿ ಮಹರ್ಷಿ ವಾಲ್ಮೀಕಿಗೆ ಗೌರವ ದೊರೆಯಬೇಕೆಂದರೆ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್​ ಹೇಳಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಬಿಜೆಪಿ ಎಸ್ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀರಾಮನ ಪೂಜೆ ಮಾಡಿ ಹೇಳುತ್ತೇನೆ. ಬಿಜೆಪಿ ರಾಜ್ಯದಲ್ಲಿ 150 ಕ್ಕೂ ಅಧಿಕ ಸ್ಥಾನಗಳಲ್ಲಿ ಗೆದ್ದು ಜಯಭೇರಿ ಬಾರಿಸುತ್ತದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಾವು ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಚುನಾವಣೆಯನ್ನು ಗೆಲ್ಲುತ್ತೇವೆ. ಹಾವೇರಿ ಜಿಲ್ಲೆಯ ಎಲ್ಲಾ ಆರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಅವರು ಹೇಳಿದರು.

ಮಹರ್ಷಿ ವಾಲ್ಮೀಕಿ ಶ್ರೀರಾಮನ ಆದರ್ಶ ಹೇಳಿದರೆ ಕಾಂಗ್ರೆಸ್ ಶ್ರೀರಾಮ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿತ್ತು. ಆದರೆ ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ಪ್ರಥಮ ಪ್ರಧಾನಿ ನರೇಂದ್ರ ಮೋದಿಯವರು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಕಟ್ಟಿದರೆ ಇತ್ತ ಸಿಎಂ ಬೊಮ್ಮಾಯಿ ಅಂಜನಾದ್ರಿಯಲ್ಲಿ ಆಂಜನೇಯನ ಸ್ಥಳವನ್ನು ಅಭಿವೃದ್ದಿ ಮಾಡುತ್ತಿದ್ದಾರೆ. ಶ್ರೀರಾಮನಿಗೆ ಆಂಜನೇಯನಿಗೆ ಮಂದಿರ ಕಟ್ಟುವ ಮೂಲಕ ಬಿಜೆಪಿ ಮಹರ್ಷಿ ವಾಲ್ಮಿಕಿಗೆ ಗೌರವ ಸಲ್ಲಿಸುವ ಕೆಲಸವನ್ನು ಮಾಡುತ್ತಿದೆ ಎಂದು ಕಟೀಲ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು. ವಿಜಯಸಂಕಲ್ಪ ಯಾತ್ರೆಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯಲ್ಲಿ ಅವರ ಧ್ವನಿ ಅಡಗುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಬಿಜೆಪಿ ಅತ್ಯಧಿಕ ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಅರುಣಸಿಂಗ್ ಹೇಳಿದರು.

ನಾವು ಅಪ್ರತಿಮ ನಾಯಕ ಬಿ.ಎಸ್.ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ. ಕರ್ನಾಟಕದಲ್ಲಿ ಎಷ್ಟು ರಾಜಕೀಯ ಪಕ್ಷಗಳಿವೆ. ಅವುಗಳಲ್ಲಿ ಅತ್ಯಂತ ಜನಪ್ರಿಯ ನಾಯಕ ಯಡಿಯೂರಪ್ಪ. ಪ್ರಧಾನಿ ನರೇಂದ್ರ ಮೋದಿಯವರೇ ಯಡಿಯೂರಪ್ಪ ಅವರ ಜನ್ಮದಿನದಂದು ಅವರನ್ನು ಸತ್ಕರಿಸಿದ್ದಾರೆ. ಯಡಿಯೂರಪ್ಪ ಅವರು ಈ ಬಾರಿ 150 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯ ಗಳಿಸುವದಾಗಿ ಮೋದಿಗೆ ಭರವಸೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್‌ನವರು ನಿಂತಲ್ಲಿ ಕುಳಿತಲ್ಲಿ ಬಿಜೆಪಿ ವಿರುದ್ಧ ಟೀಕೆ
ಮಾಡುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನ ಕಿತ್ತು ಬಿಸಾಕಿದ್ದಾರೆ. ಕಾಂಗ್ರೆಸ್ ಅಸ್ಥಿತ್ವ ಕಳೆದುಕೊಳ್ಳುವ ದಾರುಣ ಸ್ಥಿತಿಯಲ್ಲಿದೆ ಎಂದು ವಿಜಯೇಂದ್ರ ಟೀಕಾಪ್ರಹಾರ ನಡೆಸಿದರು. ಕಾಂಗ್ರೆಸ್​ನ ರಾಹುಲ್ ಗಾಂಧಿ ದೇಶದಲ್ಲಿ ಭಾರತ ಜೋಡೋ ಎನ್ನುತ್ತಿದ್ದಾರೆ. ಆದರೆ ಹೊರ ದೇಶದಲ್ಲಿ ಕುಳಿತುಕೊಂಡು ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ರಾಜ್ಯ ಮುಖಂಡರು ಬಹಳ ಹಾರಾಡುತ್ತಿದ್ದಾರೆ ಚೀರಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎನ್ನುವ ಹಾಗೆ ಹಗಲುಗನಸು ಕಾಣುತ್ತಿದ್ದಾರೆ. ದೀಪ ನಂದುವ ಮುನ್ನ ಜೋರಾಗಿ ಉರಿಯುತ್ತದೆ. ಅಂತಹ ಪರಿಸ್ಥಿತಿ ಕಾಂಗ್ರೆಸ್ಸಿನದಾಗಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ : ದೇವಸ್ಥಾನ ಮಠಗಳನ್ನು ಬಿಟ್ಟು ಸಿದ್ದರಾಮಯ್ಯ ಬದುಕುತ್ತಿಲ್ಲ: ಈಶ್ವರಪ್ಪ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.