ಕೊಡಗು(ಮಡಿಕೇರಿ): ಭಾರತ-ಪಾಕ್ ನಡುವೆ 1965ರಲ್ಲಿ ನಡೆದಿದ್ದ ಯುದ್ಧದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಕೊಡಗಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆ ಇಂದು ಮಂಜಿನ ನಗರಿ ಮಡಿಕೇರಿಯಲ್ಲಿ ಅನಾವರಣಗೊಳಿಸಲಾಯಿತು.
ಮಡಿಕೇರಿಯ ಹಳೆ ಖಾಸಗಿ ಬಸ್ ನಿಲ್ದಾಣದ ವೃತ್ತದಲ್ಲಿ ವೀರ ಯೋಧನ ಪ್ರತಿಮೆಯನ್ನು ಮೇಜರ್ ಕೆ.ಸಿ. ನಂದ ಅವರು ಅನಾವರಣಗೊಳಿಸಿದರು. ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ತಮ್ಮ ಹಳೆಯ ವಿಮಾನದ ಮೂಲಕ ಹೊಡೆದುರುಳಿಸುವ ಮೂಲಕ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರು ವೀರಮರಣವನ್ನಪ್ಪಿದ್ದರು. ಈ ವಿಚಾರವನ್ನು ಪಾಕ್ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿದ್ದ ಅಮ್ಜದ್ ಹುಸೇನ್ ಅವರು ಆನಂತರದ ದಿನಗಳಲ್ಲಿ ತಿಳಿಸಿದ್ದರು.
ವಿಮಾನದ ಎರಡೂ ರೆಕ್ಕೆಗಳಿಗೆ ಬೆಂಕಿ ತಗುಲಿದ್ದರೂ ಅದರ ಮೂಲಕವೇ ಯುದ್ಧ ಮಾಡಿದ್ದ ಸ್ಕ್ವಾ.ಲೀ. ದೇವಯ್ಯ ಅವರ ಸಾಹಸವನ್ನು ದೇಶ ವಿದೇಶಗಳಿಂದ ಕೊಡಗು ಜಿಲ್ಲೆಗೆ ಆಗಮಿಸುವವರಿಗೆ ತಿಳಿಸಲು ಮತ್ತು ವೀರಯೋಧನಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಗರದ ಹೃದಯ ಭಾಗದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸ್ಮಾರಕ ಟ್ರಸ್ಟ್ ಪ್ರಮುಖರಾದ ಅಜ್ಜಮಾಡ ಕಟ್ಟಿ ಮಂದಯ್ಯ ಅವರ ನೇತೃತ್ವದಲ್ಲಿ ಯೋಧನ ಪ್ರತಿಮೆಯನ್ನು ನಿರ್ಮಿಸಲಾಗಿದೆ.