ETV Bharat / state

ಕೋಲಾರದಿಂದ ಸ್ಪರ್ಧಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

author img

By

Published : Apr 1, 2023, 9:18 PM IST

ಕೋಲಾರದಿಂದ ಸ್ಫರ್ಧೆ ಮಾಡಲು ನಾನು ಸಿದ್ಧನಿದ್ದೇನೆ. ಈ ಬಗ್ಗೆ ಹೈಕಮಾಂಡ್​​ ತೀರ್ಮಾನ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Etv i-am-ready-to-contest-from-kolar-constituency-says-siddaramaih
ನಾನು ಮಾನಸಿಕವಾಗಿ ಕೋಲಾರದಿಂದ ಸ್ಫರ್ಧೆ ಮಾಡಲು ಸಿದ್ಧನಿದ್ದೇನೆ : ಸಿದ್ದರಾಮಯ್ಯ

ಸಿದ್ದರಾಮಯ್ಯ ಭಾಷಣ

ಕೋಲಾರ: ನಾನು ಮಾನಸಿಕವಾಗಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ. ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಹೊರವಲಯದಲ್ಲಿರುವ ನಂದಿನಿ ಪ್ಯಾಲೇಸ್​ನಲ್ಲಿ ನಡೆದ ರಾಹುಲ್​ ಗಾಂಧಿ ಜೈ ಭಾರತ್ ಸಮಾವೇಶದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸುವ ಜೊತೆಗೆ ಸಂವಿಧಾನ ರಕ್ಷಿಸಲು ಮಾಡುತ್ತಿರುವ ಹೋರಾಟ ಇದಾಗಿದೆ. ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿರುವ ಈ ಸಂದರ್ಭದಲ್ಲಿ ದೇಶವನ್ನು ಉಳಿಸಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ‌ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ತಮ್ಮ ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿಲ್ಲ. ದೇಶದ ಜನತೆ ನೆಮ್ಮದಿ, ಐಕ್ಯತೆಯಿಂದ ಇರಬೇಕೆಂದು ಹೋರಾಟ ಪ್ರಾರಂಭ ಮಾಡಿದ್ದಾರೆ. ಬಿಜೆಪಿ ದ್ವೇಷದ ರಾಜಕಾರಣ, ಸೇಡಿನ ರಾಜಕಾರಣ ಮಾಡಿ ದೇಶದಲ್ಲಿ ಸಾಮರಸ್ಯವನ್ನು ಹಾಳು ಮಾಡುತ್ತಿದೆ. ರಾಹುಲ್ ಸದಸ್ಯತ್ವ ರದ್ದು ಮಾಡಿ, ಈ ಮೂಲಕ ಬೇರೆಯವರನ್ನು ಬೆದರಿಸಲು ಯತ್ನಿಸುತ್ತಿದ್ದಾರೆ. ದೇಶದ ಜನರ ಸಂಪತ್ತನ್ನು ಕೊಳ್ಳೆ ಹೊಡೆದು ಹೋದವರ‌ ಬಗ್ಗೆ ರಾಹುಲ್ ಮಾತನಾಡಿದ್ದು ತಪ್ಪಾ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಜ್ಯ ಉಸ್ತುವಾರಿ ಸುರ್ಜೇವಾಲ ಮಾತನಾಡಿ,‌ ನಿಮ್ಮ‌ ಭಾವನೆಗಳು ನಮಗೆ‌ ಅರ್ಥವಾಗುತ್ತದೆ. ಆದರೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್, ಕಾಂಗ್ರೆಸ್​ ಮುಖಂಡರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಎಪ್ರಿಲ್​ 9 ರಂದು ಕೋಲಾರದಲ್ಲಿ ಜೈ ಭಾರತ್​ ಬೃಹತ್​ ಸಮಾವೇಶವನ್ನು ಕಾಂಗ್ರೆಸ್​ ಹಮ್ಮಿಕೊಂಡಿದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಇಂದು ನಗರದ ಹೊರವಲಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಗೆ ರಾಜ್ಯ ಉಸ್ತುವಾರಿ ಸುರ್ಜೇವಾಲ,‌ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ‌‌ ಅಹಮದ್, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್​ ನಾಯಕರು ಭಾಗವಹಿಸಿದ್ದರು. ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುತ್ತಿದ್ದಂತೆ ಕೆಲ ಕಾಂಗ್ರೆಸ್​ ಕಾರ್ಯಕರ್ತರು ಸಿದ್ದರಾಮಯ್ಯ ಪರ ಘೋಷಣೆಗಳು ಕೂಗಿದರು. ಇನ್ನು ಇದೇ ವೇಳೆ ಸುರ್ಜೇವಾಲ ಅವರ ಭಾಷಣಕ್ಕೆ‌ ಅಡ್ಡಪಡಿಸಿದ ಘಟನೆಯೂ ನಡೆಯಿತು. ಸಿದ್ದರಾಮಯ್ಯ ಅವರನ್ನು ಕೋಲಾರದಲ್ಲಿ ಸ್ಪರ್ಧೆ ಮಾಡುವ ಕುರಿತು ಘೋಷಣೆ ಮಾಡಲು ಕಾರ್ಯಕರ್ತರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಸ್ವತಃ ಮೈಕ್​ ಪಡೆದು, ಸಭೆಯ ಗೌರವ ಕಾಪಾಡಿ, ಸುರ್ಜೆವಾಲ ಅವರ ಭಾಷಣಕ್ಕೆ ಅನುವು ಮಾಡಿಕೊಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಇದಕ್ಕೆ ಜಗ್ಗದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸುಮ್ಮನಿರುವಂತೆ ಗದರಿಸಿದರು. ಕೆಲ ಕಾಂಗ್ರೆಸ್​​ ಮುಖಂಡರು ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು. ಇನ್ನು ಕಾಂಗ್ರೆಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಆದರೆ ಸಿದ್ದರಾಮಯ್ಯ ಕೋಲಾರದಿಂದಲೂ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್​​ನಲ್ಲಿ ಇಂಗಿತ ವ್ಯಕ್ತಪಡಿಸಿದ್ದು ಈ ಬಗ್ಗೆ ಇನ್ನೂ ತೀರ್ಮಾನ ಮಾಡಲಾಗಿಲ್ಲ.

ಇದನ್ನೂ ಓದಿ : ತಂದೆ ಸಿಎಂ ಆಗಬೇಕು, ವರುಣಾ ಕ್ಷೇತ್ರದಲ್ಲಿ ಗೆಲುವು ಖಚಿತ: ಯತೀಂದ್ರ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.