ETV Bharat / state

ತಹಶೀಲ್ದಾರ್ ಚಂದ್ರಮೌಳೇಶ್ವರ್ ಹತ್ಯೆಗೆ ಖಂಡನೆ: ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

author img

By

Published : Jul 10, 2020, 9:39 PM IST

ಕೋಲಾರದ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಅವರ ಕೊಲೆ ಖಂಡಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Protests by government employees
ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಅವರನ್ನು ಕ್ರೂರವಾಗಿ ಕೊಂದ ಹಿನ್ನೆಲೆ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಕೋಲಾರ ನಗರದ ತಹಸೀಲ್ದಾರ್ ಕಚೇರಿ ಸಿಬ್ಬಂದಿ ತಮ್ಮ ಕಚೇರಿಗೆ ಬೀಗ ಜಡಿಯುವುದರ ಮೂಲಕ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು. ಇದಕ್ಕೂ ಮುನ್ನ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ, ತಹಸೀಲ್ದಾರ್ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿದ್ರು.

ಬಂಗಾರಪೇಟೆ ತಹಶೀಲ್ದಾರ್ ಹತ್ಯೆ ಅರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯಲ್ಲೂ ಕೂಡ ತಹಶೀಲ್ದಾರ್​​ ಕೊಲೆ ಖಂಡಿಸಿ ತೀವ್ರ ಆಕ್ರೋಶ ಹೊರ ಹಾಕಲಾಯಿತು. ಈ ವೇಳೆ ಮನವಿ ಸ್ವೀಕರಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ಮಹಮದ್ ಜುಬೇರ್, ನಿವೃತ್ತ ಕರ್ತವ್ಯ ನಿರತರಾಗಿದ್ದ ತಹಶೀಲ್ದಾರರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಘೋರ ಅಪರಾಧವಾಗಿದೆ. ಇದೊಂದು ಅಮಾನವೀಯ ಘಟನೆ ಎಂದರು.

ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದ ವತಿಯಿಂದ ಕೊಲೆ ಆರೋಪಿ ವಿರುದ್ಧ ಹೋರಾಟಗಾರರು ತೀವ್ರ ಆಕ್ರೋಶ ಹೊರ ಹಾಕಿದರು. ಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸಿ, ಕೂಡಲೇ ಶಿಕ್ಷೆ ನೀಡಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು. ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ, ಕಠಿಣ ಕಾನೂನು ರೂಪಿಸಿ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಅಗತ್ಯ ರಕ್ಷಣೆ ನೀಡಿ ಎಂದು ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.

ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಕಾರ್ಯಕರ್ಯರು ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೌಕಕರ ಸಂಘದ ಕಾರ್ಯಕರ್ತರು, ಕೃತ್ಯಕ್ಕೆ ಕಾರಣವಾದ ವ್ಯಕ್ತಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ರು.

ಇನ್ನು ಸುಳ್ಯ ತಾಲೂಕು ಸಂಘದ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನಂತರ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಅನಂತ ಶಂಕರ್, ಸರ್ಕಾರಿ ಅಧಿಕಾರಿಯೋರ್ವರು ಕರ್ತವ್ಯದಲ್ಲಿರುವ ಸಂದರ್ಭ ಈ ರೀತಿಯ ಹತ್ಯೆಯಾಗಿರುವುದು ಖಂಡನೀಯ. ಈ ರೀತಿಯ ಘಟನೆ ಮುಂದೆ ಮರುಕಳಿಸಬಾರದು ಎಂದರು.

ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

ಪುತ್ತೂರು ಕಂದಾಯ ಇಲಾಖೆಯ ನೌಕರರು ಕಪ್ಪು ಪಟ್ಟಿ ಧರಿಸಿ ಮಿನಿ ವಿಧಾನಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಮತ್ತು ತಹಶೀಲ್ದಾರ್ ರಮೇಶ್ ಬಾಬು ಟಿ. ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಅಲ್ಲದೆ ತಹಶೀಲ್ದಾರ್​ ಸಾವಿಗೆ ಸಂತಾಪ ಸೂಚಿಸಲಾಯಿತು.

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿಯೂ ಪ್ರತಿಭಟನೆಯ ಕಾವು ಜೋರಾಗಿತ್ತು. ಈ ತರಹದ ಹಲ್ಲೆಗಳು, ಕೊಲೆ ಪದೇ ಪದೆ ನಡೆಯುತ್ತಿರುವುದರಿಂದ ನೌಕರರು ಆತಂಕದಿಂದ ಕಾರ್ಯನಿರ್ವಹಿಸುವಂತಾಗಿದ್ದು, ಭಯ ಮುಕ್ತ ವಾತಾವರಣ ಕಲ್ಪಿಸಿ ನಿಯಾಮನುಸಾರ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಿ ನೌಕರರಿಗೆ ಸೂಕ್ತ ರಕ್ಷಣೆ ಹಾಗೂ ಸೇವಾ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು.

ಬಂಟ್ವಾಳದಲ್ಲಿನ ತಾಲೂಕು ಕಂದಾಯ ನೌಕರರ ಸಂಘದ ವತಿಯಿಂದ ಮಿನಿ ವಿಧಾನಸೌಧದ ಮುಂಭಾಗ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಂಟ್ವಾಳ ತಾಲೂಕು ತಹಸೀಲ್ದಾರ್ ರಶ್ಮಿ ಎಸ್.ಆರ್. ಮುಖಾಂತರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಸುರಪುರದಲ್ಲಿ ಕೂಡ ಪ್ರತಿಭಟನೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹ ಮಾಡಲಾಯಿತು. ತಹಶೀಲ್ದಾರ್ ಹತ್ಯೆ ಖಂಡಿಸಿ ಸುರಪುರ ತಾಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು ತೀವ್ರ ಆಕ್ರೋಶ ಹೊರ ಹಾಕಿದರು.

ಚಿತ್ರದುರ್ಗದಲ್ಲಿ ಕೂಡ ಸರ್ಕಾರಿ ನೌಕರರು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಗರದ ಡಿಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಸರ್ಕಾರಿ ನೌಕರರು ಭಾಗಿಯಾಗಿ ಮೌನ ಪ್ರತಿಭಟನೆ ನಡೆಸಿದರು.

ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

ಧಾರವಾಡದ ನೌಕರ ಭವನದಿಂದ ನಡಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೌಕರರ ಸಂಘದ ಪದಾಧಿಕಾರಿಗಳು ಮೌನ ಪ್ರತಿಭಟನೆ ನಡೆಸಿ ನಂತರ ಮೌನಾಚರಣೆ ಮಾಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಹಾಗೆಯೇ ಕಲಬುರಗಿಯಲ್ಲೂ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೌಕರರು, ಘಟನೆಯನ್ನು ತೀವ್ರವಾಗಿ ಖಂಡಿಸಿದರು.

ಇನ್ನು ತುಮಕೂರಿನಲ್ಲಿಯೂ ಕೂಡ ಕೋಲಾರ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿದವರಿಗೆ ಕಾನೂನಾತ್ಮಕ ಕಠಿಣ ಶಿಕ್ಷೆ ನೀಡಿ, ಸರ್ಕಾರಿ ಅಧಿಕಾರಿ ಹಾಗೂ ನೌಕರರಿಗೆ ಅಗತ್ಯ ರಕ್ಷಣೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

ಮೃತರ ಕುಟುಂಬಕ್ಕೆ ಸರ್ಕಾರದಿಂದ ಗರಿಷ್ಠ ಮಟ್ಟದ ಪರಿಹಾರವನ್ನು ನೀಡಬೇಕು, ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ನೇಮಕಾತಿ ನೀಡಬೇಕು ಹಾಗೂ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ನಿರ್ಭೀತಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಿಸಲು ಒತ್ತಾಯಿಸಲಾಯಿತು.

ರಾಯಚೂರ ಜಿಲ್ಲೆ ಲಿಂಗಸುಗೂರಲ್ಲಿ ಕಂದಾಯ ನೌಕರರು ಪ್ರತಿಭಟನೆ ನಡೆಸಿದರು. ಮೃತರ ಕುಟುಂಬಕ್ಕೆ ಸರ್ಕಾರ ರೂ. 50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ನೌಕರಿ ನೀಡುವ ಜೊತೆಗೆ ಕುಟುಂಬಸ್ಥರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗದಲ್ಲೂ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಹತ್ಯೆ ನಡೆಸಿದ ವೆಂಟಕಾಚಲಪತಿಗೆ ಸೂಕ್ತ ಕಾನೂನಿನಡಿ ಶಿಕ್ಷೆಯಾಗಬೇಕು ಎಂದು ಆಗ್ರಹಿಸಲಾಯಿತು.

ಕೊಳ್ಳೇಗಾಲದಲ್ಲಿ ಬಂಗಾರ ಪೇಟೆ ತಹಶೀಲ್ದಾರ್ ಚಂದ್ರಮೌಳೀಶ್ವರ ಹತ್ಯೆ ಖಂಡಿಸಿ ಕರ್ನಾಟಕ ಸರ್ಕಾರಿ‌ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಹತ್ಯೆ ಮಾಡಿದ ತಪಿತಸ್ಥರ ಮೇಲೆ ಕಠಿಣ ಕಾನೂನು ‌ಕ್ರಮ ಜರಗಿಸಬೇಕು‌ ಎಂದು ಆಗ್ರಹಿಸಿದರು. ಇದೇ ವೇಳೆ ಮೃತರ ಆತ್ಮಕ್ಕೆ‌ ಶಾಂತಿ ದೊರಕಲಿ ಎಂದು ಎರಡು ನಿಮಿಷ ಕಾಲ ಮೌನಾಚರಣೆ ಆಚರಿಸಲಾಯಿತು.

ಕುಷ್ಟಗಿಯಲ್ಲಿಯು ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಉಪ ತಹಶೀಲ್ದಾರ ವಿಜಯಾ ಮುಂಡರಗಿ ಅವರಿಗೆ ಮನವಿ ಸಲ್ಲಿಸಿದರು. ನೌಕರ ಸಂಘದ ಅಮರೇಶ್ವರ ಪಾಟೀಲ ನಾಗೂರು ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲೂ ಸರ್ಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಇಂತಹ ವಿಷಮ ಸ್ಥಿತಿಯಲ್ಲಿ ಸೇವೆಯಲ್ಲಿರುವ ನೌಕರ ಬಂಧುಗಳ ಮೇಲೆ ಗುಂಡಾ ಪ್ರವೃತ್ತಿ ಪ್ರಕರಣಗಳು ನಡೆಯುತ್ತಿದ್ದು, ನೌಕರ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಜಮೀನು ಸರ್ವೆ ವಿಷಯವಾಗಿ ನಿವೃತ್ತ ಶಿಕ್ಷಕ ಚಾಕುವಿನಿಂದ ಇರಿದು ಕೊಂದಿರುವ ಪ್ರಕರಣ ಖಂಡನಾರ್ಹವಾಗಿದೆ ಎಂದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಎಂ.ಬಿ.ನಾಯಕ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಹುಕ್ಕೇರಿ ತಹಶೀಲ್ದಾರ್​ ಅಶೋಕ‌ ಗುರಾಣಿ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು.

ಬಸವಕಲ್ಯಾಣದಲ್ಲಿಯೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರವಾಗಿ ಖಂಡಿಸಿದವು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಂದಾಯ ಇಲಾಖೆ ನೌಕರರ ಸಂಘ, ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಹಾಗೂ ಸರ್ಕಾರಿ ಪ್ರೌಢ ಶಾಲೆ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳ ನಿಯೋಗ ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಸಂಗಯ್ಯ ಸ್ವಾಮಿ ಅವರಿಗೆ ಸಲ್ಲಿಸಿದ್ದು, ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.