ETV Bharat / state

ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆಗೆ ಎಲ್ಲ ಸಿದ್ಧತೆ: ಸಚಿವ ರಾಮಲಿಂಗಾರೆಡ್ಡಿ

author img

By ETV Bharat Karnataka Team

Published : Dec 19, 2023, 10:01 PM IST

ಕಳೆದ ವರ್ಷಕ್ಕಿಂತ ಈ ಬಾರಿ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆಗೆ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದರು.

ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ

ಗಂಗಾವತಿ (ಕೊಪ್ಪಳ) : ಹನುಮ ಜಯಂತಿ ನಿಮಿತ್ತ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್​ 23 ಮತ್ತು 24 ರಂದು ನಡೆಯುವ ಹನುಮಮಾಲೆ ವಿಸರ್ಜನೆಗೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಮಾಡಿದ್ದ ಸಿದ್ಧತೆಗಳಿಗಿಂತ ಈ ಬಾರಿ ಚೆನ್ನಾಗಿ ಮಾಡುತ್ತೇವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಹಸ್ತಲಾಘವ ಮಾಡಿದ ಶಾಸಕ ಜರ್ನಾಧನ ಮತ್ತು ಸಚಿವ ರಾಮಲಿಂಗಾರೆಡ್ಡಿ
ಹಸ್ತಲಾಘವ ಮಾಡಿದ ಶಾಸಕ ಜರ್ನಾಧನ ಮತ್ತು ಸಚಿವ ರಾಮಲಿಂಗಾರೆಡ್ಡಿ

ತಾಲೂಕಿನ ಚಿಕ್ಕರಾಂಪೂರದಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲೆ ವಿಸರ್ಜನೆ ನಿಮಿತ್ತ ನಡೆಯುತ್ತಿರುವ ಸಿದ್ಧತೆಗಳನ್ನು ಮಂಗಳವಾರ ಶಾಸಕ ಜಿ. ಜನಾರ್ದನ ರೆಡ್ಡಿ, ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಪರಿಶೀಲಿಸಿದ ಸಚಿವ ರಾಮಲಿಂಗಾರೆಡ್ಡಿ ಬಳಿಕ ವಿರುಪಾಪುರಗಡ್ಡೆ ಅರಣ್ಯ ಇಲಾಖೆಯ ಅತಿಥಿ ಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಅಂಜನಾದ್ರಿಯಲ್ಲಿ ಹನುಮಮಾಲಾಧಾರಿಗಳಿಗೆ ಎಲ್ಲಿಯೂ ಅಸೌಕರ್ಯ ಉಂಟಾಗದಂತೆ ಸಕಲ ವ್ಯವಸ್ಥೆ ಜಿಲ್ಲಾಡಳಿತದಿಂದ ಮಾಡಲಾಗಿದೆ. ಹನುಮಮಾಲೆ ವಿಸರ್ಜನೆಯನ್ನು ಕಳೆದ ಬಾರಿಗಿಂತಲೂ ಈ ಬಾರಿ ಚೆನ್ನಾಗಿ ಮಾಡಲಾಗುವುದು. ಇದಕ್ಕಾಗಿ ಭಕ್ತರ ದಟ್ಟಣೆ ನಿಯಂತ್ರಣಕ್ಕಾಗಿ ನಾಲ್ಕು ಕಂಟ್ರೋಲ್ ರೂಮ್ ಮಾಡಲಾಗಿದೆ. ವಿದ್ಯುತ್ ಅಲಂಕಾರ, ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಜನ ಮತ್ತು ಸಂಚಾರ ದಟ್ಟಣೆ ನಿಯಂತ್ರಣಕ್ಕೆ 1500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ನೇಮಿಸಲಾಗಿದೆ. ಬೆಟ್ಟ ಹತ್ತುವ ಸಂದರ್ಭದಲ್ಲಿ ಯಾರಿಗಾದರೂ ಸಮಸ್ಯೆಯಾದರೆ ಅಗತ್ಯ ತುರ್ತ ಆರೋಗ್ಯ ಸೇವೆಗಾಗಿ ವೈದ್ಯರು, ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಂಜನಾದ್ರಿ ಬೆಟ್ಟದಲ್ಲಿ ರಾಜಕೀಯ ನಾಯಕರು
ಅಂಜನಾದ್ರಿ ಬೆಟ್ಟದಲ್ಲಿ ರಾಜಕೀಯ ನಾಯಕರು

ಬಿಜೆಪಿಯವರು ಪ್ರತಿಯೊಂದರಲ್ಲೂ ರಾಜಕೀಯ ಹುಡುಕುತ್ತಾರೆ. ಅವರಿಗೆ ಹಿಂದು ಧರ್ಮ, ಆಚರಣೆಯ ವಾರಸುದಾರರಂತೆ ವರ್ತಿಸುತ್ತಾರೆ. ಆದರೆ ನಾವು ದೇವರನ್ನು ರಾಜಕೀಯ ಕಾರಣ ಕ್ಕೆ ಬಳಸುವುದಿಲ್ಲ. ನಮ್ಮದು ಜಾತ್ಯತೀತ ರಾಷ್ಟ್ರ ಎಂದು ಸಂವಿಧಾನದಲ್ಲಿಯೇ ಉಲ್ಲೇಖಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ನಾವು ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ಮೊದಲ ದಿನವೇ ಮಹಿಳೆಯರು ಸಾರಿಗೆ ವಾಹನಗಳಲ್ಲಿ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಶಕ್ತಿ ಯೋಜನೆಯನ್ನು ಜಾರಿ ಮಾಡಿದ್ದೇವೆ. ಇದಕ್ಕೆ ವಾರ್ಷಿಕ 4500 ಕೋಟಿ ರೂ. ಮೊತ್ತದ ಹಣ ಬೇಕಾಗುತ್ತದೆ. ಮುಂದಿನ ಬಜೆಟ್​ನಲ್ಲಿ ಅಷ್ಟೂ ಹಣವನ್ನು ಮೀಸಲಿಡುತ್ತೇವೆ. ಶಕ್ತಿ ಯೋಜನೆ ಜಾರಿಯಿಂದ ಶಾಲಾ-ಕಾಲೇಜಿನ ಮಕ್ಕಳಿಗೆ ಹಾಗೂ ಪುರುಷರಿಗೆ ಕೊಂಚ ತೊಂದರೆಯಾಗಿದೆ ಎಂದು ಒಪ್ಪಿಕೊಂಡ ಸಚಿವ ರಾಮಲಿಂಗಾರೆಡ್ಡಿ, ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಸಾರಿಗೆ ಇಲಾಖೆಯಿಂದ ಒಂದೂ ಬಸ್ ಖರೀದಿಸಿರಲಿಲ್ಲ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದರೂ ನೇಮಕಾತಿಯನ್ನೂ ಮಾಡಿರಲಿಲ್ಲ. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಇದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಆತಂಕ: ಕೇರಳ ಪ್ರವಾಸಿಗರ ತಡೆಗೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.