ETV Bharat / state

ತಮಿಳುನಾಡಿಗೆ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ: ಮಂಡ್ಯದಲ್ಲಿ ರೈತರ ಆಕ್ರೋಶ

author img

By ETV Bharat Karnataka Team

Published : Nov 23, 2023, 4:01 PM IST

Updated : Nov 23, 2023, 7:19 PM IST

Cauvery water to Tamil Nadu: ಮತ್ತೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವಂತೆ ಸೂಚಿಸಿರುವ CWRC ಶಿಫಾರಸಿನ ವಿರುದ್ಧ ರೈತರು ಕಿಡಿಕಾರಿದ್ದಾರೆ.

Kaveri protest
ಮಂಡ್ಯದಲ್ಲಿ ರೈತರ ಆಕ್ರೋಶ

ಮಂಡ್ಯದಲ್ಲಿ ರೈತರ ಆಕ್ರೋಶ

ನವದೆಹಲಿ/ಮಂಡ್ಯ: ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದೆ ತೀವ್ರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಮೈಸೂರು ಭಾಗದ ಜೀವನಾಡಿ ಕಾವೇರಿಯಲ್ಲೂ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ನಡುವೆ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಆಘಾತ ಎದುರಾಗಿದೆ. ತಮಿಳುನಾಡಿಗೆ ಪುನಃ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC) ಶಿಫಾರಸು ಮಾಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಇಂದು ನವದೆಹಲಿಯಲ್ಲಿ ಸಭೆ ನಡೆಸಿದ್ದು, ನ್ಯಾಯಾಧಿಕರಣ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ಪಾಲನೆ ಮಾಡುವಂತೆ ತಿಳಿಸಿದೆ. ತಮಿಳುನಾಡಿಗೆ ನವೆಂಬರ್ 23 ರಿಂದ ಡಿಸೆಂಬರ್ 23ರ ವರೆಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಒಂದು ತಿಂಗಳ ಕಾಲ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಶಿಫಾರಸ್ಸು ಮಾಡಿರುವುದನ್ನು ಕಾವೇರಿ ಹೋರಾಟಗಾರರು ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಿರಂತರ ಧರಣಿ ನಡೆಸುತ್ತಿರುವ ರೈತರು ಸಮಿತಿಯ ಶಿಫಾರಸು ವಿರುದ್ಧ ಕಿಡಿಕಾರಿದ್ದಾರೆ.

ಧರಣಿಯಲ್ಲಿ ನಿರತರಾಗಿರುವ ಹೋರಾಟಗಾರರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಹೆದ್ದಾರಿ ತಡೆ ನಡೆಸಿದರು. ಡಿ.23ರ ವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಮಾಡಿರುವುದು ಕರ್ನಾಟಕದ ರೈತ ಸಮೂಹಕ್ಕೆ ಮಾಡಿದ ದ್ರೋಹವಾಗಿದೆ. ಅದೇ ರೀತಿ ನಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್​ನ ಅಂತಿಮ ತೀರ್ಪು ಪಾಲಿಸುವಂತೆ ಸೂಚಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಮತ್ತೆ ಮತ್ತೆ ನೀರು ಬಿಡಲು ಏಕಪಕ್ಷೀಯವಾಗಿ ಆದೇಶ ಮಾಡುತ್ತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಜಲಾಶಯಗಳಲ್ಲಿನ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸದೆ ಕಳೆದ ಮೂರು ತಿಂಗಳಿಂದ ನೀರು ಬಿಡಿ ಎನ್ನುತ್ತಿರುವುದು ಕರ್ನಾಟಕದ ಮೇಲಿನ ಗದಾ ಪ್ರಹಾರವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಶಿಫಾರಸಿಗೆ ಮಾನ್ಯತೆ ನೀಡಬಾರದು. ಕೆಆರ್​ಎಸ್ ಸೇರಿದಂತೆ ಇತರೆ ಜಲಾಶಯಗಳಿಂದ ನೀರು ಹರಿಸಬಾರದು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದ್ದರೂ ಸಹ ನ್ಯಾಯ ದೊರಕಿಸಿಕೊಡಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ಕಾವೇರಿ ಚಳವಳಿಯನ್ನು ಮುಂದುವರಿಸುವ ಬಗ್ಗೆ ಸಮಿತಿಯ ಸದಸ್ಯರು, ಹೋರಾಟ ಸಂಘಟನೆಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯ ಗರಿಷ್ಠ 124.80 ಅಡಿ ಸಾಮರ್ಥ್ಯ ಹೊಂದಿದೆ. ಸದ್ಯ 99.10 ಅಡಿ ನೀರು ಮಾತ್ರ ಇದೆ. ಟಿಎಂಸಿ ಲೆಕ್ಕದಲ್ಲಿ 49.452 ಟಿಎಂಸಿ ಸಾಮರ್ಥ್ಯವಿದ್ದು, 13.734 ಟಿಎಂಸಿ ನೀರಿದೆ. ಇನ್ನು ಒಳ ಹರಿವು 1450 ಕ್ಯೂಸೆಕ್ ಇದ್ದು, 3840 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇನ್ನು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಕಳೆದ 80 ದಿನಗಳಿಂದ ನಿರಂತರ ಹೋರಾಟ ಮಾಡುತ್ತಿದ್ದು, ಪದೇ ಪದೆ ಕಾವೇರಿ ನೀರಿನ ವಿಚಾರದಲ್ಲಿ ವ್ಯತಿರಿಕ್ತ ಆದೇಶ ಬರುತ್ತಿದೆ. ಹೀಗಾಗಿ ತಮ್ಮ ಹೋರಾಟವನ್ನು ಮುಂದುವರೆಸಲು ಹೋರಾಟಗಾರರು ತೀರ್ಮಾನ ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರ: ಅರ್ಜಿ ವಿಚಾರಣೆಗೆ ಹೈಕೋರ್ಟ್ ನಿರಾಕರಣೆ

Last Updated : Nov 23, 2023, 7:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.