ಮುಂದೆ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ

author img

By

Published : Dec 7, 2021, 9:55 PM IST

siddaramaiah

ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದತ್ತ ಬಂದಿದ್ದಾರೆ. ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮಂಡ್ಯ: ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದತ್ತ ಬಂದಿದ್ದಾರೆ. ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮಂಡ್ಯದ ಸುಮರವಿ ಮಂಟಪದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಷತ್ತಿನ ಚುನಾವಣೆಗೆ ನಿಂತಿರುವ ಕಾಂಗ್ರೆಸ್ ಪಕ್ಷವು ಈ ಬಾರಿ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು, ಬಿಜೆಪಿಯವರು ಸಹ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು, ಜೆಡಿಎಸ್ ಅವರು 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದಾರೆ. 20 ಸ್ಥಾನಗಳಲ್ಲಿ 15 ಸ್ಥಾನಗಳನ್ನಾದರೂ ಗೆಲ್ಲುತ್ತೇವೆ ಎಂದು ವಿಶ್ವಾ ವ್ಯಕ್ತಪಡಿಸಿದರು.

ನಾವು ಯಾರ ಮೇಲೂ ಅವಲಂಬನೆಯಾಗಿಲ್ಲ. ಸ್ವತಂತ್ರವಾಗಿ ಸ್ಪರ್ಧಿಸಿದ್ದೇವೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ನವರು ಪರೋಕ್ಷವಾಗಿ ಒಬ್ಬರಿಗೊಬ್ಬರು ಬೆಂಬಲ ಕೊಡುವುದಾಗಿ ಹೇಳಿದ್ದಾರೆ. ಇದರಿಂದ ಅವರು ಒಟ್ಟಿಗೆ ಚುನಾವಣೆ ನಡೆಸುತ್ತಿದ್ದಾರೆ ಎಂದರು.

ಜೆಡಿಎಸ್ ಅವರು 2005 ರಿಂದಲೂ ಬಿಜೆಪಿ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಂಡು ಬಂದಿದ್ದಾರೆ. ಈಗ ಮತ್ತೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಜಾತ್ಯತೀತ ತತ್ತ್ವದ ಮೇಲೆ ನಂಬಿಕೆ ಇಟ್ಟುಕೊಂಡಿರುವ ಎಲ್ಲ ಮತದಾರರು ಕೂಡ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ತಿರ್ಮಾನ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿಗೆ ನಿರಾಕರಣೆ: ಹೆಚ್​ಡಿಕೆ ನಿರ್ಧಾರಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಹೇಗಿದೆ ಅಂದ್ರೆ!

ಈ ಬಾರಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಇಲ್ಲದೆ ಚುನಾವಣೆ ನಡೆಯುತ್ತಿದೆ‌. ಕಾರಣ ಸೋಲುವ ಭಯದಿಂದ ಬಿಜೆಪಿ ಅವರು ಮುಂದೂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ವಿರುದ್ಧವಾಗಿ ಗಾಳಿ ಬೀಸಲು ಪ್ರಾರಂಭವಾಗಿದೆ. ಇದಕ್ಕೆ ಕಾರಣ ಬಿಜೆಪಿ ಆಡಳಿತದಿಂದ ಚುನಾಯಿತ ಪ್ರತಿನಿಧಿಗಳು ಹಾಗೂ ಸಾಮಾನ್ಯ ಮತದಾರರು ಬೇಸತ್ತಿದ್ದಾರೆ ಎಂದರು.

ಬಿಜೆಪಿ ಅವರ ಭ್ರಷ್ಟಾಚಾರದಿಂದ, ದುರಾಡಳಿತದಿಂದ, ಜನವಿರೋಧಿ, ರೈತ ವಿರೋಧಿ ನೀತಿ, ಅಭಿವೃದ್ಧಿ ಶೂನ್ಯದಿಂದ ಜನರು ಬೇಸತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಎರಡು ವರ್ಷ ಮೀರಿದೆ, ನರೇಂದ್ರ ಮೋದಿ ಬಂದು 8 ವರ್ಷ ಆಗಿದೆ. ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಬಿಜೆಪಿ ಹಾಗೂ ಜೆಡಿಎಸ್ ಕೊಡುಗೆ ಶೂನ್ಯ ಎಂದು ಹೇಳಿದರು.

ಈ ಬಾರಿ ಹೆಚ್ಚು ಮಳೆಯಿಂದ ಬೆಳೆ ನಾಶವಾಗಿದೆ. ಮನೆಗಳು ನೆಲಸಮವಾಗಿದೆ. ಕೋವಿಡ್ ಕಾಲದಲ್ಲಿ ದೇಶದಲ್ಲಿ 50 ಲಕ್ಷಕ್ಕೂ ಹೆಚ್ಚು ಜನ ನಿಧನರಾದರು. ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನರು ಸತ್ತರು. ಇದಕ್ಕೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಇಬ್ಬರು ಮಾತ್ರ ಸತ್ತಿದ್ದಾರೆಂದು ಸುಳ್ಳು ಹೇಳಿದರು ಎಂದು ಕಿಡಿಕಾರಿದರು. ಬಿಜೆಪಿ ಸರ್ಕಾರದ ಇಷ್ಟೆಲ್ಲಾ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಈ ಗೆಲುವಿನ ಮೂಲಕ 2023ರ ವಿಧಾನಸಭೆ ಚುನಾವಣೆ ಗೆದ್ದೇಗೆಲ್ಲುತ್ತೇವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.