ETV Bharat / state

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರಿಂದ ಉರುಳು ಸೇವೆ

author img

By ETV Bharat Karnataka Team

Published : Sep 6, 2023, 3:58 PM IST

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದ್ದಾರೆ. ಅಲ್ಲದೇ ಕಾವೇರಿ ವಿಚಾರಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರಿಂದ ಉರುಳು ಸೇವೆ
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರಿಂದ ಉರುಳು ಸೇವೆ

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರಿಂದ ಉರುಳು ಸೇವೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು.

ನಗರದ ಸಂಜಯ ವೃತ್ತದಿಂದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಉರುಳು ಸೇವೆ ಆರಂಭಿಸಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಯೋಗೇಶ್ ಗೌಡ, ಬೆಂಕಿ ಶ್ರೀಧರ್, ನಾಗಲಕ್ಷ್ಮಿ, ರೋಸಿ, ನಿರ್ಮಲ, ತಸ್ನಿಯ ಬಾನು, ಸೋಮಶೇಖರ್, ಗೋವಿಂದನಾಯಕ್, ಜಯಸಿಂಹ, ಯೇಸು, ರಂಜಿತ್ ಗೌಡ, ಕೃಷ್ಣೇಗೌಡ, ದೇವರಾಜ್ ಉರುಳು ಸೇವೆ ಮಾಡಿದರು. ಸುಮಾರು ಎರಡು ತಾಸುಗಳ ಕಾಲ ಸರ್​ಎಂವಿ ಪ್ರತಿಮೆವರೆಗೆ ಉರುಳುವ ಮೂಲಕ ಕಾವೇರಿ ವಿಚಾರದಲ್ಲಿ ನ್ಯಾಯಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು, ಬೇಕೇ ಬೇಕು ನ್ಯಾಯ ಬೇಕು, ಕಾವೇರಿ ನಮ್ಮದು, ತಕ್ಷಣ ನೀರು ನಿಲ್ಲಿಸಿ, ಸುಪ್ರೀಂ ಕೋರ್ಟ್​ನಲ್ಲಿ ನ್ಯಾಯ ದೊರಕಲಿ ಎಂದು ಘೋಷಣೆ ಕೂಗಿದರು.

ಹೋರಾಟಗಾರ ಚಾ.ರಂ. ಶ್ರೀನಿವಾಸಗೌಡ

ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ: ಕೆಆರ್​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು. ನಗರದ ಸಂಜಯ ವೃತ್ತದಲ್ಲಿ ಪಟಾಪಟಿ ಚಡ್ಡಿ ದರಿಸಿ ಖಾಲಿ ಬಿಂದಿಗೆ ಪ್ರದರ್ಶಿಸಿ, ಮೆರವಣಿಗೆ ಹೊರಟ ಜಿಲ್ಲೆಯ ಶಾಸಕ – ಸಂಸದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಜಿಲ್ಲಾ ರೈತರ ಹಿತರಕ್ಷಣಾ ಸಮಿತಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ತೆರಳಿ ಕಾವೇರಿ ಹೋರಾಟ ಬೆಂಬಲಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ
ಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾವೇರಿ ಕಣಿವೆ ಜಿಲ್ಲೆಗಳ ರೈತರ ಹಿತ ಕಾಪಾಡಲು ಒತ್ತಾಯಿಸಿದರು.

ದಿಢೀರ್ ರಸ್ತೆ ತಡೆ : ಸುಪ್ರೀಂಕೋರ್ಟ್​ನಲ್ಲಿ ಕಾವೇರಿ ನದಿ ನೀರಿನ ವಿಚಾರಣೆ ಮುಂದೂಡಿಕೆಯಾಗಿರುವ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾವೇರಿಕೊಳ್ಳದ ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ಸ್ಥಗಿತ ಮಾಡುವಂತೆ ಒತ್ತಾಯಿಸಿ, ಮಂಡ್ಯದಲ್ಲಿ ದಿಢೀರ್ ರಸ್ತೆ ತಡೆ ನಡೆಸಿತು.

ನಗರದ ಸರ್​ಎಂವಿ ಪ್ರತಿಮೆ ಬಳಿ ಧರಣಿ ನಿರತರಾಗಿದ್ದ ರೈತರು, ಕನ್ನಡಪರ, ಪ್ರಗತಿಪರ ಹೋರಾಟಗಾರರು ವಿಚಾರಣೆ ಮುಂದೂಡಿಕೆಯಾಗಿರುವ ವಿಚಾರ ತಿಳಿದು ಬೆಂಗಳೂರು -ಮೈಸೂರು ಹೆದ್ದಾರಿಗೆ ಇಳಿದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು.

ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಸಿದ್ದು, ಡಿಕೆಶಿ ವಿರುದ್ಧ ಆಕ್ರೋಶ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಇಂದು ಚಾಮರಾಜನಗರದಲ್ಲಿ 7 ನೇ ದಿನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಹೋರಾಟಗಾರರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಇದುವರೆಗೆ ಸಿಎಂ ಸಿದ್ದರಾಮಯ್ಯ ಕಾವೇರಿ ಅನ್ಯಾಯದ ಬಗ್ಗೆ ತುಟಿ ಬಿಚ್ಚುತ್ತಿಲ್ಲ, ಡಿಕೆಶಿ ಹೋರಾಟಗಾರರ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಧಿಕ್ಕಾರದ ಘೋಷಣೆ ಕೂಗಿ ಅನ್ನದಾತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕಾವೇರಿ ಹೋರಾಟ: ತಮಿಳುನಾಡಿಗೆ ನೀರು ನಿಲ್ಲಿಸಲು ರಕ್ತದಲ್ಲಿ ಸಹಿ ಮಾಡಿದ ಪತ್ರ ರಾಜ್ಯಪಾಲರಿಗೆ ರವಾನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.