ETV Bharat / state

ದಸರಾ ಯಶಸ್ಸಿಗೆ ಶ್ರಮಿಸಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Nov 5, 2023, 4:12 PM IST

Etv Bharatcm-siddaramaiah-felicitations-to-the-officials-who-worked-hard-to-make-dasara-successful
ದಸರಾ ಯಶಸ್ವಿಗೆ ಶ್ರಮಿಸಿದ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಬಾರಿ ಜನರ ಜತೆ ಪೂರ್ವಭಾವಿ ಸಭೆಗಳನ್ನು ನಡೆಸಿ ದಸರಾವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಮೈಸೂರು: ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ. ಜನರ ನಡುವೆ ಇದ್ದರೆ ಅಧಿಕಾರಿಗಳ ಜನಪ್ರಿಯತೆಯೂ ಹೆಚ್ಚುತ್ತದೆ. ಜನರ ಸಮಸ್ಯೆಗಳೂ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿ ಪರಿಹಾರ ಒದಗಿಸಲು ಸಾಧ್ಯ. ದಸರಾ ಜನರ ಹಬ್ಬ. ಆದ್ದರಿಂದ ಜನರ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯ. ಇದು ಈ ಬಾರಿಯೂ ಯಶಸ್ವಿಯಾಗಿದೆ. ಮುಂದಿನ ಬಾರಿ ಜನರ ಜತೆ ಪೂರ್ವಭಾವಿ ಸಭೆಗಳನ್ನು ನಡೆಸಿ ದಸರಾವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಲಹೆ ನೀಡಿದರು.

ಅಧಿಕಾರಿಗಳಿಗೆ ಜನಪರವಾದ ಮನಸ್ಸು, ಕಾಳಜಿ, ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ. ಕಳೆದ ಐದು ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ಇಡೀ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ ಎಂದು ಸೂಚನೆ ನೀಡಿದರು.

ನಾಲ್ವಡಿ ಅರಸರು ಮಾದರಿ: ಗತಕಾಲದ ಅಭಿವೃದ್ಧಿಯ ವೈಭವ ಮೈಸೂರಿನಲ್ಲಿ ಮರುಕಳಿಸಬೇಕು. ನಾಲ್ವಡಿ ಕೃಷ್ಣರಾಜ ಅರಸರು ಮಾಡಿದ ನೀರಾವರಿ, ಕೃಷಿ, ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಅಭಿವೃದ್ಧಿ ಕಾರ್ಯಗಳು ನಮಗೆ ಮಾದರಿಯಾಗಲಿ. ಅವರ ಕಾಲದ ಅಭಿವೃದ್ಧಿಯ ವೈಭವ ಜಿಲ್ಲೆಯಲ್ಲಿ ಮರುಕಳಿಸಬೇಕು ಎಂದರು.

ಮೈಸೂರು ನಂಬರ್ ಒನ್ ಆಗಬೇಕು: ಮೈಸೂರನ್ನು ಅಭಿವೃದ್ಧಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಕರೆದೊಯ್ಯಿರಿ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಟಾರ್ಗೆಟ್ ನೀಡಿದರು. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯಲ್ಲಿ ಮೈಸೂರು ನಂಬರ್ ಒನ್ ಆಗಬೇಕು. ಇದು ನಿಮ್ಮಿಂದ ಸಾಧ್ಯವಿದೆ. ಸಾಧಿಸಿ ತೋರಿಸೋಣ ಎಂದು ಎಲ್ಲರ ಸಹಕಾರ ಕೋರಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಮಾತನಾಡಿ, ಯಾವುದೇ ಟೀಕೆ ವ್ಯಕ್ತವಾಗದೇ ಇರುವ ಹಾಗೆ ದಸರಾ ಯಶಸ್ಸಿಗೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಕಾರ್ಯ ನಿರ್ವಹಿಸುವ ಮೂಲಕ ಶ್ರಮಿಸಿದ್ದಾರೆ. ಸರ್ಕಾರದ ಪರವಾಗಿ ಅಧಿಕಾರಿಗಳಿಗೆ ಅಭಿನಂದನೆಗಳು ಹೇಳುತ್ತೇನೆ ಎಂದರು. ಇದೇ ರೀತಿ ಮುಖ್ಯಮಂತ್ರಿಗಳ ಜಿಲ್ಲೆಯಾಗಿರುವುದರಿಂದ ಅಭಿವೃದ್ಧಿ ಪರವಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.

ಈ ವೇಳೆ ರಾಜ್ಯಸಭಾ ಸದಸ್ಯರಾದ ರೆಹಮಾನ್ ಖಾನ್, ಮಹಾಪೌರರಾದ ಶಿವಕುಮಾರ್, ಶಾಸಕರಾದ ಕೆ. ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ, ಸೂಕ್ತ ತನಿಖೆಗೆ ಸೂಚಿಸಿದ್ದೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.