ರಾಷ್ಟ್ರಪತಿಗಳಿಗೆ ಚಾಮುಂಡೇಶ್ವರಿ ದೇವಿ ಮೂರ್ತಿ ಉಡುಗೊರೆ; ದಸರಾ ಮೆರಗು ಹೆಚ್ಚಿಸಿದ ಸಚಿವ

author img

By

Published : Sep 26, 2022, 5:41 PM IST

draupadi-murmu
ರಾಷ್ಟ್ರಪತಿಗಳಿಗೆ ಚಾಮುಂಡೇಶ್ವರಿ ದೇವಿ ಮೂರ್ತಿ ಉಡುಗೊರೆ ()

ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ರಾಷ್ಟ್ರಪತಿಗಳ ಭವನಕ್ಕೆ ಸಚಿವರು ತೆರಳಿದ ಸಂದರ್ಭದಲ್ಲಿ ಮೈಸೂರು ಸಿಲ್ಕ್ ಸೀರೆಯನ್ನು ಉಡುಗೊರೆಯನ್ನಾಗಿ ನೀಡಲಾಗಿತ್ತು. 70 ಸಾವಿರ ರೂ. ಬೆಲೆಯ ಆ ಸೀರೆಯನ್ನೇ ಉಟ್ಟು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದರು.

ಮೈಸೂರು: ದಸರಾ ಮಹೋತ್ಸವ ಉದ್ಘಾಟನೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನು ಉಡುಗೊರೆಯಾಗಿ ನೀಡುವ ಮೂಲಕ ಮೈಸೂರಿನ ದಸರಾ ಆಚರಣೆಯ ಮೆರಗನ್ನು ಹೆಚ್ಚಿಸುವಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರೋಕ್ಷವಾಗಿ ಕಾರಣೀಭೂತರಾಗಿದ್ದಾರೆ.

92.5% ಪರಿಶುದ್ಧ ಬೆಳ್ಳಿಯಿಂದ ಕೂಡಿರುವ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ರಾಜಸ್ಥಾನದ ಜೈಪುರ್​ನ ಕರಕುಶಲಕಾರರಿಂದ ವಿನ್ಯಾಸಗೊಳಿಸಲಾಗಿದೆ. ಚಾಮುಂಡೇಶ್ವರಿ ದೇವಿಯ ಉಡುಗೊರೆ 4.25 ಕೆಜಿ ತೂಕವನ್ನು ಹೊಂದಿದೆ. ಚಾಮುಂಡೇಶ್ವರಿ ದೇವಿಯ ಮೂರ್ತಿ ಜೊತೆಗೆ ಮೈಸೂರು ರೇಷ್ಮೆ ಸೀರೆಯನ್ನೂ ಸಹ ರಾಷ್ಟ್ರಪತಿಗಳಿಗೆ ಉಡುಗೊರೆಯಾಗಿ ನೀಡಲಾಗಿತ್ತು.

ಉಡುಗೊರೆಯಾಗಿ ನೀಡಿದ ಸೀರೆಯುಟ್ಟಿದ್ದ ರಾಷ್ಟ್ರಪತಿ : ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ರಾಷ್ಟ್ರಪತಿಗಳ ಭವನಕ್ಕೆ ಸಚಿವರು ತೆರಳಿದ ಸಂದರ್ಭದಲ್ಲಿ ಮೈಸೂರು ಸಿಲ್ಕ್ ಸೀರೆಯನ್ನು ಉಡುಗೊರೆಯನ್ನಾಗಿ ನೀಡಿ ಮೈಸೂರು ನೆಲದ ವಿಶೇಷತೆಯನ್ನು ರಾಷ್ಟ್ರಪತಿ ಭವನಕ್ಕೆ ತಲುಪಿಸಿದ್ದಾರೆ. ವಿಶೇಷವೆಂದರೆ ಉಡುಗೊರೆ ನೀಡಿದ್ದ ಸುಮಾರು 70 ಸಾವಿರ ರೂ. ಬೆಲೆಯ ಮೈಸೂರು ರೇಷ್ಮೆ ಸೀರೆಯನ್ನುಟ್ಟುಕೊಂಡೇ ಸಾಂಸ್ಕೃತಿಕ ನಗರಿಗೆ ಆಗಮಿಸಿದ ರಾಷ್ಟ್ರಪತಿಗಳು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದಸರಾ ಮಹೋತ್ಸವ ಉದ್ಘಾಟಿಸಿದರು.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಲು ಸೂಚಿಸಿದ್ದರು. ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.

ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಷ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

ದಸರಾ ಚಲನಚಿತ್ರೋತ್ಸವದಲ್ಲಿ ಪುನೀತ್​ಗೆ ಒಂದು ದಿನ ಮೀಸಲು : ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ ನಟಿಸಿರುವ ಚಲನಚಿತ್ರಗಳ ಪ್ರದರ್ಶನಕ್ಕೆ ಮೀಸಲಿಟ್ಟಿರುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದಸರಾ ಚಲನಚಿತ್ರೋತ್ಸವವನ್ನು ಉದ್ಘಾಟನೆ ಮಾಡಿ ಹೇಳಿಕೆ ನೀಡಿದರು.

Gift of Goddess Chamundeshwari idol to the President
ಮೈಸೂರು ದಸರಾ ಚಲನಚಿತ್ರೋತ್ಸವ ಉದ್ಘಾಟನೆ

ದಸರಾ ಚಲನಚಿತ್ರೋತ್ಸವ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಸಚಿವ, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ದೂರಿ ಕಾರ್ಯಕ್ರಮ ಮಾಡಲಾಗುತ್ತಿದೆ. ಸುಮಾರು 124 ಕಿ.ಮಿ. ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ "ಅಪ್ಪು ನಮನ" ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.

Gift of Goddess Chamundeshwari idol to the President
ದಸರಾ ಚಲನಚಿತ್ರೋತ್ಸವದಲ್ಲಿ ಪುನೀತ್​ಗೆ ಒಂದು ದಿನ ಮೀಸಲು

ನಟಿ ಅನುಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್‍ಕುಮಾರ್ ಹಾಗೂ ಎಂ.ಪಿ.ಶಂಕರ್ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿಯರಾದ ಕಾವ್ಯಶೆಟ್ಟಿ, ಅಮೃತ ಅಯ್ಯಂಗಾರ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಪೌರ ಸನ್ಮಾನ ದೇಶದ ಸಮಸ್ತ ಮಹಿಳೆಯರಿಗೆ ಸಂದ ಗೌರವ: ರಾಷ್ಟ್ರಪತಿ ದ್ರೌಪದಿ ಮುರ್ಮು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.