ETV Bharat / state

ಚಳಿಗಾಲ ಅಧಿವೇಶನದ ಬಳಿಕ ಮೈಸೂರಿನ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನತಾದರ್ಶನ: ಸಚಿವ ಮಹದೇವಪ್ಪ

author img

By ETV Bharat Karnataka Team

Published : Nov 29, 2023, 5:56 PM IST

ಸ್ವ ಕ್ಷೇತ್ರ ಟಿ ನರಸೀಪುರದಲ್ಲಿ ಮೊದಲ ತಾಲೂಕುಮಟ್ಟದ ಜನತಾದರ್ಶನವನ್ನು ಸಚಿವ ಡಾ ಎಚ್ ಸಿ ಮಹದೇವಪ್ಪ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.

Janata darshan
ಟಿ ನರಸೀಪುರದಲ್ಲಿ ತಾಲೂಕುಮಟ್ಟದ ಜನತಾದರ್ಶನವನ್ನು ಸಚಿವ ಡಾ ಎಚ್ ಸಿ ಮಹದೇವಪ್ಪ ನಡೆಸಿದರು.

ಮೈಸೂರು: ಸ್ವ ಕ್ಷೇತ್ರ ಟಿ ನರಸೀಪುರದಲ್ಲಿ ಮೊದಲ ತಾಲೂಕುಮಟ್ಟದ ಜನತಾದರ್ಶನವನ್ನು ಸಚಿವ ಡಾ ಎಚ್ ಸಿ ಮಹದೇವಪ್ಪ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಜನರು ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಟಿ.ನರಸೀಪುರದ ಶಾಲಾ ಸಭಾಂಗಣದಲ್ಲಿ ನಡೆದ ಜನತಾ ದರ್ಶನದಲ್ಲಿ ತಾಲೂಕಿನ ವಿವಿಧ ಹೋಬಳಿ, ಇಲಾಖೆಗೆ ಸಂಬಂಧಿಸಿದ 167 ಅರ್ಜಿಗಳನ್ನು ಸಚಿವರು ಸ್ವೀಕರಿಸಿದರು‌. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಜಿಲ್ಲೆಗಳಲ್ಲಿ ಜನಸ್ಪಂದನ ಸಭೆ ನಡೆಸಬೇಕೆಂದು ಸೂಚನೆ ನೀಡಿದ್ದರು. ಅದರಂತೆ ಮೊದಲಿಗೆ ಮೈಸೂರಿನಲ್ಲಿ ನಡೆಸಿ ಸ್ವೀಕರಿಸಿದ್ದ ಅಹವಾಲುಗಳಲ್ಲಿ ಶೇ.98 ರಷ್ಟನ್ನು ಬಗೆಹರಿಸಲಾಗಿದೆ ಎಂದು ಹೇಳಿದರು.

ಸಮಸ್ಯೆಗೆ ಸ್ಪಂದನೆ: ಮೊನ್ನೆ ನಮ್ಮ ಮುಖ್ಯಮಂತ್ರಿಗಳು ನಡೆಸಿದ ಜನಸ್ಪಂದನ ಕಾರ್ಯಕ್ರದಲ್ಲಿ ಮುಗ್ಧ ಜನರು ತಮ್ಮ ನೋವನ್ನು ತೋಡಿಕೊಂಡ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿ ವರ್ಗಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಇದರ ಅಂಗವಾಗಿ ಟಿ. ನರಸೀಪುರ ತಾಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಕಷ್ಟವನ್ನು ಆಲಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಆಡಳಿತ ಚುರುಕುಗೊಂಡು ಜನಪರವಾದ ಆಡಳಿತದ ವಾತಾವರಣ ಸೃಷ್ಟಿಸಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಸಂಕಷ್ಟದಲ್ಲಿರುವ ಜನರು ನೇರವಾಗಿ ಬಂದು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನತಾದರ್ಶನ: ವಿಧಾನಸಭೆಯ ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 15 ನಂತರ ಮೈಸೂರು ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಿ ಜ‌ನರ ಸಮಸ್ಯೆ ಆಲಿಸಲಾಗುವುದು. ಜಿಲ್ಲಾಡಳಿತ, ತಾಲೂಕು ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರು ತಿಂಗಳುಗಟ್ಟಲೆ ತಮ್ಮ ಸಮಸ್ಯೆಗಳ ಅರ್ಜಿ ಹಿಡಿದು ಸರ್ಕಾರಿ ಕಚೇರಿಗೆ ಅಲೆದಾಡಬಾರದು ಎನ್ನುವುದು ಇದರ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜು ಎಂಬುವರು ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಗೆ ದೊರಕುವುದಿಲ್ಲ. ಇದರಿಂದ ಜನರು ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಲು ತೊಂದರೆ ಉಂಟಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೆಲವೊಮ್ಮೆ ಅಧಿಕಾರಿಗಳಿಗೆ ಸಭೆ ಸೇರಿದಂತೆ ಇನ್ನಿತರ ಕ್ಷೇತ್ರ ಭೇಟಿ ಇರುತ್ತದೆ. ಆದರೆ ಸುಳ್ಳು ಹೇಳಿ ಕಚೇರಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹೇಳಿದರು.

ಸಾಗುವಳಿ ಹಕ್ಕುಪತ್ರ: ಹಳೇಕೆಂಪಯ್ಯನ ಹುಂಡಿ ಗ್ರಾಮದ ರಾಚಯ್ಯ ಅವರು ಸಾಗುವಳಿ ಹಕ್ಕುಪತ್ರ ನೀಡುತ್ತಿಲ್ಲ. ಕಚೇರಿಗೆ ಅಲೆದಾಡಿ ಸಾಕಾಗಿದೆ ದಯವಿಟ್ಟು ಸಾಗುವಳಿ ಚೀಟಿ ಕೊಡಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಜಿಲ್ಲಾಧಿಕಾರಿ ಮಾತನಾಡಿ, ನೀವು ಅರ್ಹರಿದ್ದರೆ ಖಂಡಿತ ಹಕ್ಕುಪತ್ರ ದೊರಕಿಸಿಕೊಡಲಾಗುವುದು. ಈ ಸಂಬಂಧ ಮತ್ತೊಮ್ಮೆ ಅರ್ಜಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಕಬ್ಬಿನ ಬಿಲ್ ಬಾಕಿ: ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಮಾತನಾಡಿ, ಬಣ್ಣಾರಿ ಅಮ್ಮನ ಸಕ್ಕರೆ ಕಾರ್ಖಾನೆಯು ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರಿಗೆ ಬಾಕಿ ಹಣ ನೀಡಿಲ್ಲ. ಸರ್ಕಾರದ ವತಿಯಿಂದ 150 ರೂ. ಹೆಚ್ಚುವರಿ ಹಣವನ್ನು ನೀಡಿಲ್ಲ‌. ಬರಗಾಲದಲ್ಲಿ ರೈತರ ಬೆಳೆ ನಾಶವಾಗಿದ್ದು, ಕನಿಷ್ಠ 25 ಸಾವಿರ ಬರ ಪರಿಹಾರ ‌ನೀಡಬೇಕು. ವಿದ್ಯುತ್ ಸರಿಯಾಗಿ ಒದಗಿಸಬೇಕು ಎಂದು ಮ‌ನವಿ ಮಾಡಿದರು.
ಇದಕ್ಕೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿ, ರೈತರ ಎಲ್ಲಾ ಬೇಡಿಕೆಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಕಾರ್ಖಾನೆಯವರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಿಲ್ಲೆಯ ರೈತರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಈ ಎಲ್ಲ ವಿಚಾರಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸಮಸ್ಯೆ ಬಗೆಹರಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಗೃಹಲಕ್ಷ್ಮಿ ಯೋಜನೆ ವಂಚಿತರ ಖಾತೆಗೆ ಶೀಘ್ರ ಹಣ: ತಾಲೂಕಿನಲ್ಲಿ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪೈಕಿ 528 ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂಬ ಮಾಹಿತಿ ಇದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಈಗಾಗಲೇ ಚರ್ಚಿಸಿದ್ದೇನೆ. ಶೀಘ್ರದಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬರುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಬಸ್ ಸಂಚಾರಕ್ಕೆ ಕ್ರಮ: ತಾಲೂಕಿನ ಕೆಲವು ಗ್ರಾಮಗಳಿಗೆ ಕೆಎಸ್ಆರ್‌ಟಿಸಿ ಬಸ್ ಸೌಲಭ್ಯವಿಲ್ಲ ಎಂಬ ಸಮಸ್ಯೆ ಕುರಿತು ಮಾತನಾಡಿದ ಸಚಿವರು, ತಾಲೂಕಿನ ಹಳ್ಳಿಗಳಲ್ಲಿ ಬಸ್ ಸಂಚಾರಕ್ಕೆ ಈಗಾಗಲೇ ಕ್ರಮವಹಿಸಲಾಗಿದೆ. ಬಸ್ ಸಂಚಾರ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಕೆಲವೇ ದಿನಗಳಲ್ಲಿ ಬಸ್‌ಗಳ ನಿಗದಿತ ಸಮಯಕ್ಕೆ ಸಂಚರಿಸಲಿದ್ದು, ಶಾಲಾ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಕೆರೆಗಳಿಗೆ ನೀರು ತುಂಬಿಸಲು ಸೂಚನೆ: ತಾಲೂಕಿನಲ್ಲಿ ಬರ ಆವರಿಸಿದೆ. ಜಾನುವಾರುಗಳಿಗೆ ಕುಡಿಯಲು ನೀರಿನ ಕೊರತೆ ಉಂಟಾಗಬಾರದು ಎಂಬ ಉದ್ದೇಶದಿಂದ ಎಲ್ಲ ಕೆರೆಗಳನ್ನು ತುಂಬಿಸುವಂತೆ ನೀರಾವರಿ ಇಲಾಖೆಯ ಎಂಜಿನಿಯರ್‌ಗೆ ಈಗಾಗಲೇ ಸೂಚಿಸಿದ್ದು, ಅದರಂತೆ ಬಹುತೇಕ ಕೆರೆಗಳಿಗೆ ನೀರು ತುಂಬಿಸಲಾಗಿದೆ. ಬಾಕಿ ಉಳಿದಿರುವ ಕೆರೆಗಳಿಗೆ ಕೂಡಲೇ ನೀರು ತುಂಬಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ನಂದಿನಿ, ತಹಶಿಲ್ದಾರ್ ಸುರೇಶಾಚಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಇದನ್ನೂಓದಿ:ನಿಗಮ ಮಂಡಳಿಗೆ ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.