ETV Bharat / state

ಘನತ್ಯಾಜ್ಯ ನಿರ್ವಹಣೆ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಎನ್‌ಜಿಟಿ ಅಧ್ಯಕ್ಷರಿಂದ ಅಧಿಕಾರಿಗಳಿಗೆ ನಿರ್ದೇಶನ

author img

By

Published : Feb 28, 2020, 12:30 PM IST

ಮೈಸೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಕೆಲಸ ಸುಲಲಿತವಾಗಿ ಜರುಗಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಚ್ಚರಗೊಂಡು ಅಗತ್ಯ ಕ್ರಮಗಳನ್ನು ಅನುಸರಿಸಿ ಕಾರ್ಯೋನ್ಮುಖರಾಗಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ಅಧ್ಯಕ್ಷ ನ್ಯಾ.ಸುಭಾಷ್ ಬಿ. ಅಡಿ ನಿರ್ದೇಶನ ನೀಡಿದರು.

Mysore: Progress Review Meeting on Implementation of Waste Management
ಮೈಸೂರು: ಘನತ್ಯಾಜ್ಯ ನಿರ್ವಹಣೆ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆ

ಮೈಸೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಕೆಲಸ ಸುಲಲಿತವಾಗಿ ಜರುಗಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಚ್ಚರಗೊಂಡು ಅಗತ್ಯ ಕ್ರಮಗಳನ್ನು ಅನುಸರಿಸಿ ಕಾರ್ಯೋನ್ಮುಖರಾಗಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ನಿರ್ದೇಶನ ನೀಡಿದರು.

ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಘನತ್ಯಾಜ್ಯ ನಿರ್ವಹಣೆ ಅನುಷ್ಠಾನ ಕುರಿತಂತೆ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಮರ್ಪಕ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು 2016ರಲ್ಲಿ ಸೂಚಿಸಲಾಗಿತ್ತು. ಆದರೆ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳು ಕ್ರಮವನ್ನು ಅನುಷ್ಠಾನಕ್ಕೆ ತಂದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ. ಸರ್ಕಾರದ ಪರಿಸರ ಕಾಯ್ದೆ ಅನ್ವಯ ಅಧಿಕಾರ ಚಲಾಯಿಸಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳದ ಕಾರಣ ಪ್ಲಾಸ್ಟಿಕ್ ದಿನನಿತ್ಯದ ಬಳಕೆಯ ವಸ್ತುವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಪರಿಸರ ಹಾಗೂ ಜೀವಿಗಳಿಗೆ ಸಂಚಕಾರವಾಗಿರುವ ಪ್ಲಾಸ್ಟಿಕ್ ನಿಷೇಧಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಆಗಾಗ ಮಾರಾಟ ಅಂಗಡಿಗಳ ಮೇಲೆ ದಾಳಿ ಮಾಡಿ, ಕಠಿಣ ಕ್ರಮಗಳನ್ನು ಅನುಸರಿಸುವ ಮೂಲಕ ಪ್ಲಾಸ್ಟಿಕ್ ನಿಷೇಧಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ನಗರ ಪ್ರದೇಶ ಸೇರಿದಂತೆ ಇತರೆ ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಗೆ ಸೇರಿದ ಸ್ಥಳಗಳಲ್ಲಿ ಕಟ್ಟಡದ ಅವಶೇಷಗಳನ್ನು ಎಲ್ಲೆಂದರಲ್ಲಿ ಸುರಿಯಲಾಗುತ್ತಿದೆ. ಹಳೆ ಕಟ್ಟಡಗಳ ತ್ಯಾಜ್ಯ ವಿಲೇವಾರಿ ನಗರದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿದೆ. ಆದ್ದರಿಂದ ಕಟ್ಟಡ ಮಾಲೀಕರಿಗೆ ತ್ಯಾಜ್ಯ ವಿಲೇವಾರಿ ಮಾಡಲು ಪಾಲಿಕೆ ಅಧಿಕಾರಿಗಳ ಅನುಮತಿ ಪಡೆದು ನಂತರ ತೆರಿಗೆ ಪಾವತಿಸಿ ಪಾಲಿಕೆ ತೋರಿಸಿದ ನಿಗದಿತ ಜಾಗದಲ್ಲಿಯೇ ಹಾಕಬೇಕು. ಈ ಹಿನ್ನೆಲೆಯಲ್ಲಿ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತ್ಯಾಜ್ಯವಿಂಗಡಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಅಳವಡಿಸಿಕೊಂಡು ಹಸಿ ಕಸ, ಒಣ ಕಸಗಳನ್ನು ಕಡ್ಡಾಯವಾಗಿ ಬೇರ್ಪಡಿಸಬೇಕು. ಉತ್ಪಾದನೆಯಾಗುವ ಕಸದಲ್ಲಿ ಬಹುತೇಕ ಹಸಿತ್ಯಾಜ್ಯವಿದ್ದರೆ ಅದನ್ನು ಸಮರ್ಪಕವಾಗಿ ಮರುಬಳಕೆ ಮಾಡುವ ಮೂಲಕ ಕಸದ ಸಮಸ್ಯೆ ತಗ್ಗಿಸಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.