ETV Bharat / state

ಯಡಿಯೂರಪ್ಪ ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಬಿ ವೈ ವಿಜಯೇಂದ್ರ

author img

By

Published : Apr 22, 2023, 12:25 PM IST

ತಾನು ಶಿಕಾರಿಪುರದಿಂದ ಚುನಾವಣೆಗೆ ನಿಂತಿದ್ದರೂ ವರುಣಾದಲ್ಲಿ ಸೋಮಣ್ಣ ಪರ ಚುನಾವಣಾ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದಾರೆ ಬಿ ವೈ ವಿಜಯೇಂದ್ರ.

B Y Vijayendra talked in Pressmeet
ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಮೈಸೂರು: ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಅವರ ಜನಪ್ರಿಯತೆ ಈಗ ಮತ್ತಷ್ಟು ಹೆಚ್ಚಾಗಿದೆ. ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಯಡಿಯೂರಪ್ಪ ಅವರು ಒಂದು ಶಕ್ತಿ, ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರು ನಗರ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಬಿ ವೈ ವಿಜಯೇಂದ್ರ ಮಾತನಾಡಿದರು.

ವರುಣಾದಲ್ಲಿ ಯಾವುದೇ ಒಳ ಒಪ್ಪಂದ ಇಲ್ಲ: ವರುಣಾ ವಿಧಾನಸಭಾ ಕ್ಷೇತ್ರದ ಮತದಾರರು ಅಭಿವೃದ್ಧಿ ಹಾಗೂ ಬದಲಾವಣೆ ಬಯಸಿದ್ದಾರೆ. ವರುಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಒಳ ಒಪ್ಪಂದ ಆಗಿಲ್ಲ. ‌ನನ್ನನ್ನು ರಾಜ್ಯದ ಜನರು ವರುಣಾ ಕ್ಷೇತ್ರದಿಂದಲೇ ಗುರುತಿಸಿದ್ದರು. ಹೀಗಾಗಿ ವರುಣಾ ಕ್ಷೇತ್ರದ ಬಗ್ಗೆ ನನಗೆ ಆಪಾರ ಗೌರವ ಇದೆ‌. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದ ಶಿಕಾರಿಪುರದಿಂದಲೇ ನಾನು ಸ್ಪರ್ಧಿಸಬೇಕಾದ್ದರಿಂದ ವರುಣಾದಿಂದ ಸ್ಪರ್ಧೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ, ನಾನು ಮತ್ತೆ ವರುಣಾಗೆ ಆಗಮಿಸಿ ಸೋಮಣ್ಣ ಪರ ಪ್ರಚಾರ ನಡೆಸುತ್ತೇನೆ ಎಂದು ಬಿ ವೈ ವಿಜಯೇಂದ್ರ ಹೇಳಿದರು.

ಜಗದೀಶ್ ಶೆಟ್ಟರ್ ಸೋಲುತ್ತಾರೆ: ಜಗದೀಶ್ ಶೆಟ್ಟರ್ ಬಗ್ಗೆ ನಾನು ಟೀಕೆ ಮಾಡುವುದಿಲ್ಲ, ಅವರು ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಮುಂದಾದ ಕಾಂಗ್ರೆಸ್ ಪಕ್ಷ ಸೇರಿದ್ದು ಬೇಸರ ತರಿಸಿದೆ. ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡಬಹುದಿತ್ತು. ಆದರೆ, ಅವರು ಕಾಂಗ್ರೆಸ್​ಗೆ ಹೋಗಿ ತಪ್ಪು ಮಾಡಿದ್ದಾರೆ. ಲಿಂಗಾಯತ ಮುಖಂಡರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಂಡಿಲ್ಲ. ಈ ನಡುವೆ ಶೆಟ್ಟರ್ ಕಾಂಗ್ರೆಸ್ ಸೇರಿದ್ದು ತಪ್ಪು, ಅವರು ಸ್ಪರ್ಧೆ ಮಾಡುವ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸೋಲುತ್ತಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿಕೆ ನೀಡಿದರು.

ಭವಿಷ್ಯದ ದೃಷ್ಟಿ ಇಟ್ಟುಕೊಂಡು ಈ ಬಾರಿ ಬಿಜೆಪಿ ಟಿಕೆಟ್ ಹಂಚಿಕೆ: ಬಿಜೆಪಿ ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಕ್ಷ, ಈ ಬಾರಿ ಚುನಾವಣೆಯಲ್ಲಿ ಸರ್ವೇ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ವೈದ್ಯರು, ಇಂಜಿನಿಯರ್, ವಕೀಲರು, ಸಮಾಜ ಸೇವಕರು ಹಾಗೂ ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡಲಾಗಿದೆ. ಬಿಜೆಪಿ ಉತ್ತರ ಪ್ರದೇಶ, ಗುಜರಾತ್ ಮಾದರಿಯಲ್ಲೇ ಮುಂದಿನ 40 ರಿಂದ 50 ವರ್ಷ ಭವಿಷ್ಯ ಗಮನದಲ್ಲಿಟ್ಟುಕೊಂಡು ಟಿಕೆಟ್ ಹಂಚಿಕೆ ಮಾಡಿದೆ ಎಂದರು.

ಆದರೆ, ಕಾಂಗ್ರೆಸ್ ಇಡೀ ದೇಶವನ್ನೇ ದಿವಾಳಿ ಮಾಡಿ, ಈಗ ಕರ್ನಾಟಕದಲ್ಲಿ ಅಧಿಕಾರ ಹಿಡಿಯಬೇಕು ಎಂಬ ಆಸೆಯಿಂದ ಪ್ರಯತ್ನ ಮಾಡುತ್ತಿದೆ. ಈ ನಡುವೆ ಜೆಡಿಎಸ್ ಅತಂತ್ರ ಫಲಿತಾಂಶ ಬರಲೆಂದು ಕಾಯುತ್ತಿದೆ. ಆದರೆ ರಾಜ್ಯದ ಜನ ಇದಕ್ಕೆ ಅವಕಾಶ ನೀಡದೇ, ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೋದಿ ಬ್ರಹ್ಮಾಸ್ತ್ರಗಳು ಕರ್ನಾಟಕದಲ್ಲಿ ಕೆಲಸ ಮಾಡುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.