ETV Bharat / state

ನೇರ ಪಾವತಿ ಪಡೆಯುತ್ತಿರುವ 11,133 ಪೌರ ಕಾರ್ಮಿಕರ ಸೇವೆ ಖಾಯಂ: ಎಂ.ಕೋಟೆ ಶಿವಣ್ಣ

author img

By

Published : Mar 14, 2023, 9:15 AM IST

M Kote Shivanna
ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಎಂ.ಕೋಟೆ ಶಿವಣ್ಣ ಸಭೆ

ರಾಜ್ಯದಲ್ಲಿ ಮೊದಲ ಹಂತದಲ್ಲಿ ನೇರಪಾವತಿ ಪಡೆಯುತ್ತಿರುವ 11,133 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುತ್ತಿದೆ.-ಎಂ.ಕೋಟೆ ಶಿವಣ್ಣ.

ಮೈಸೂರು: ಮೊದಲ‌ ಹಂತದಲ್ಲಿ ರಾಜ್ಯದಲ್ಲಿ ನೇರ ಪಾವತಿ ಅಡಿ ಕೆಲಸ ಮಾಡುತ್ತಿರುವ 11,113 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುತ್ತಿದ್ದು, 2ನೇ ಹಂತದಲ್ಲಿ 12,867 ಪೌರ ಕಾರ್ಮಿಕರನ್ನು ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಕೋಟೆ ಶಿವಣ್ಣ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಕುಂದುಕೊರತೆ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. 2ನೇ ಹಂತದ ಪೌರ ಕಾರ್ಮಿಕರ ಖಾಯಮಾತಿಗೆ ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆಯಲಾಗಿದೆ. ಇದು ಒಂದು ಐತಿಹಾಸಿಕ ನಿರ್ಧಾರವಾಗಿದೆ. ಮುಖ್ಯಮಂತ್ರಿಗಳು ಪೌರ ಕಾರ್ಮಿಕರ ಖಾಯಂಗೆ ಎಷ್ಟೇ ಅನುದಾನ ಅಗತ್ಯವಿದ್ದರೂ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.

ಮಾಸ್ಟರ್ ಹೆಲ್ತ್ ಚೆಕ್‌ಅಪ್: ಹೊರಗುತ್ತಿಗೆಯ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಗುತ್ತಿಗೆ ಆದಾರವನ್ನು ತೆಗೆದು ನೇರಪಾವತಿಯ ಯೋಜನೆಯಡಿಗೆ ತರುವ ಉದ್ದೇಶ ಹೊಂದಲಾಗಿದೆ. ಮುಖ್ಯಮಂತ್ರಿಗಳು ರಾಜ್ಯದಲ್ಲಿರುವ ಪೌರ ಕಾರ್ಮಿಕರಿಗೆ ನೇರಪಾವತಿ ಮಾಡುವ ಸಂಬಂಧ ಹಾಗೂ ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ನಾನು ಸಹ ಇದ್ದು ಈಗಾಗಲೇ 3 ವರದಿಗಳನ್ನು ನೀಡಲಾಗಿದೆ. ಪೌರ ಕಾರ್ಮಿಕರಿಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಪ್ರತಿ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಾಸ್ಟರ್ ಹೆಲ್ತ್ ಚೆಕ್‌ಅಪ್ ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ವಿವಿಧ ಇಲಾಖೆಗಳು, ಬಸ್ ಸ್ಟಾಂಡ್‌ಗಳು ಹಾಗೂ ಖಾಸಗಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸರ್ವೇ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸರ್ವೇ ಮಾಲಾಗುತ್ತಿದೆ. ರಾಜ್ಯದಲ್ಲಿ ಪೌರ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆಯುವಲ್ಲಿ ಹಿಂದೆ ಉಳಿದಿದ್ದಾರೆ. ಇವರ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಎಸ್​​ಎಸ್​​ಎಲ್​​ಸಿಯಿಂದ ಪದವಿ ಶಿಕ್ಷಣದವರೆಗೆ ಉತ್ತಮ ಅಂಕ ಪಡೆದ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿ ಜಿಲ್ಲೆಯಲ್ಲಿ ಸನ್ಮಾನ ಮಾಡಲಾಗಿದೆ ಎಂದರು.

ವಿಶ್ರಾಂತಿ ಗೃಹ ನಿರ್ಮಿಸಲು ಯೋಜನೆ: ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಅಗತ್ಯ ಜಾಗ ಗುರುತಿಸಲಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಲು ನನ್ನನ್ನು ಒಳಗೊಂಡಂತೆ ಗುಜರಾತ್‌ಗೆ 15 ಜನರ ತಂಡ ಭೇಟಿ ನೀಡಿ ವರದಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಪೌರ ಕಾರ್ಮಿಕರನ್ನು ಒಳಗೊಂಡಂತೆ ಅಧ್ಯಯನ ನಡೆಸಲು ಸಿಂಗಾಪುರಕ್ಕೆ ಭೇಟಿ ನೀಡಲಾಗಿತ್ತು. ಪೌರ ಕಾರ್ಮಿಕರಿಗೆ ಸ್ವಚ್ಚತಾ ಪರಿಕರಗಳನ್ನು ನೀಡಲಾಗುತ್ತಿದೆ. ಆದರೆ ಇದರ ಬಳಕೆ ಸರಿಯಾಗಿ ಆಗುತ್ತಿಲ್ಲ. ಆದ್ದರಿಂದ ಪೌರ ಕಾರ್ಮಿಕರಿಗೆ ಅನುಕೂಲವಾಗಿರುವ ಪ್ರದೇಶವಾರು ಸ್ವಚ್ಚತಾ ಪರಿಕರಗಳನ್ನು ನೀಡಲು ಎಕ್ಸ್ಪರ್ಟ್ ಕಮಿಟಿಯಿಂದ ವರದಿ ಪಡೆದು ಪರಿಕರಗಳ ತಯಾರಿಕೆಗೆ ಕಾರ್ಯಾದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

2000ನೇ ಇಸವಿಯಲ್ಲಿಯೇ ಮ್ಯಾನುಯಲ್ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಜಾರಿಗೆ ಬಂದಿದ್ದರೂ, ರಾಜ್ಯದಲ್ಲಿ ಇನ್ನೂ 7070 ಮ್ಯಾನುಯಲ್ ಸ್ಕ್ಯಾವೆಂಜರ್​​ಗಳಿದ್ದಾರೆ. ಇವರಲ್ಲಿ 2000 ಮ್ಯಾನುಯಲ್ ಸ್ಕ್ಯಾವೆಂಜರ್​​ಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಉಳಿದವರ ಸರ್ವೇ ಮಾಡಿ ಪುನರ್ವಸತಿ ಕಲ್ಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ಹಿಂದೆ ಪೌರ ಕಾರ್ಮಿಕರಿಗೆ ತಿಂಡಿ ವ್ಯವಸ್ಥೆಗೆ ತಲಾ 20 ರೂ ನೀಡಲಾಗುತ್ತಿತ್ತು. ಇದನ್ನೂ 35 ರೂ. ಗಳಿಗೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಹಾಗೂ ಪ್ರತಿಷ್ಟಿತ ಖಾಸಗಿ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲಾಗುತ್ತಿದೆ. ಆಯೋಗದಲ್ಲಿ 350 ಪ್ರಕರಣಗಳಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಾತನಾಡಿ "ಪೌರ ಕಾರ್ಮಿಕರ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ದೊರೆಯದೆ ಇದ್ದಲ್ಲಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ನಿಯಮಾನುಸಾರ ಪರಿಗಣಿಸಲಾಗುವುದು. ಪೌರಕಾರ್ಮಿಕರಿಗೆ ಸಕಾಲದಲ್ಲಿ ಸಂಬಂಳ ಹಾಗೂ ಇ.ಎಫ್​ ಮತ್ತು ಪಿ.ಎಫ್​ಗಳನ್ನು ಪಾವತಿ ಮಾಡಬೇಕು. ಪೌರ ಕಾರ್ಮಿಕರಿಗೆ ಎಲ್ಲಾ ಪುರಸಭೆ, ನಗರಸಭೆಗಳ ವ್ಯಾಪ್ತಿಯಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ತಪಾಸಣೆ: ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಚೀಟಿಗಳನ್ನು ನೀಡಬೇಕು. ಅವರಿಗೆ ಆರೋಗ್ಯ ಕಾರ್ಡ್​ಗಳನ್ನು ನೀಡುವ ವ್ಯವಸ್ಥೆ ಮಾಡಬೇಕು. ಅಂಬೇಡ್ಕರ್ ಭವನ, ಬಾಬು ಜಗನ್‌ ಜೀವನ್ ರಾಮ್ ಭವನಗಳಲ್ಲಿ ಪೌರ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಸಮಾರಂಭಗಳನ್ನು ಮಾಡಲು ಸಮುದಾಯ ಭವನಗಳನ್ನು ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಪುರಸಭೆ ನಗರಸಭೆಗಳಿಗೆ ಭೇಟಿ ನೀಡಿ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳು ದೊರೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಪೌರ ಕಾರ್ಮಿಕರಿಗೆ ನೀಡಿರುವ ಸುರಕ್ಷತಾ ಪರಿಕರಗಳನ್ನು ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ ಪೌರಕಾರ್ಮಿಕರಿಗೆ ನಿಗದಿತವಾಗಿ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಈ ಸಂಬಂಧ ಪ್ರತಿಷ್ಠಿತ ಆಸ್ಪತ್ರೆಗಳನ್ನು ಟೈ ಅಪ್ ಮಾಡಿಕೊಳ್ಳಲಾಗಿದೆ. 158 ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಆಯ್ಕೆ ಮಾಡಿದ್ದು, ಇವರಲ್ಲಿ 60 ಜನರಿಗೆ ಸ್ವತಃ ನಿವೇಶನ ಇಲ್ಲ. ಇವರನ್ನು ಆಶ್ರಯ ಮನೆ ಯೋಜನೆಯಡಿ ಪರಿಗಣಿಸಲಾಗುತ್ತಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇದ್ದ 205 ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಅಹ್ವಾನಿಸಿದ್ದು, ಇದರಲ್ಲಿ 170 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಪೌರ ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.