ETV Bharat / state

ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸುತ್ತೇವೆ.. ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್

author img

By

Published : Jul 12, 2023, 4:33 PM IST

M Laxman spoke at the press conference.
ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಟಿ ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಸದಸ್ಯ ವೇಣುಗೋಪಾಲ್ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ: ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್ ಆರೋಪ.

ಮೈಸೂರು: ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ನೀಡುವ ಮೂಲಕ ಶಾಂತಿ ಕದಡಲು ಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇವೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಟಿ ನರಸೀಪುರದ ವೇಣುಗೋಪಾಲ್ ನಾಯಕ್ ಕೊಲೆ ಕೇಸಿನ ವಿಚಾರದಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಾಂತಿ ಕದಡಲು ಮುಂದಾಗಿರುವ ಆರೋಪದಲ್ಲಿ ಪ್ರಕರಣ ದಾಖಲಿಸುತ್ತೇವೆ ಎಂದರು.

ಆತ ಕರಾವಳಿ ಭಾಗದಲ್ಲಿ ಶಾಂತಿ ಕದಡಲು ಪ್ರಯತ್ನ ಮಾಡಿದ ರೀತಿಯಲ್ಲಿ ಇಲ್ಲಿ ಸಾಧ್ಯವಿಲ್ಲ. ಕೊಲೆ ಪ್ರಕರಣದ ನಾಲ್ಕನೇ ಆರೋಪಿ, ಬಿಜೆಪಿ ಪಾಲಿಕೆ ಸದಸ್ಯನ ತಮ್ಮನಾಗಿದ್ದು, ಈತನೇ ರಾತ್ರೋರಾತ್ರಿ ಚಕ್ರವರ್ತಿ ಸೂಲಿಬೆಲೆಯನ್ನು ಕರೆಸಿಕೊಂಡಿದ್ದಾನೆ. ಇಲ್ಲಿ ಸೂಲಿಬೆಲೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಎಂ ಲಕ್ಷ್ಮಣ್ ಆಗ್ರಹಿಸಿದರು.

ಕೊಲೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ: ಟಿ ನರಸೀಪುರದಲ್ಲಿ ನಡೆದ ಯುವ ಬ್ರಿಗೇಡ್ ಸದಸ್ಯ ವೇಣುಗೋಪಾಲ್ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ವರ್ಚಸ್ಸು ದಿನೇ ದಿನೇ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡಲು, ಕೇಂದ್ರ ನಾಯಕರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ನಾಯಕರು ಸುಖಾಸುಮ್ಮನೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್​ ದೂರಿದರು.

ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಆರೋಪ ನಡೆಯುತ್ತಿದೆ ಎಂದು ಆರೋಪಿಸಿದ ಲಕ್ಷ್ಮಣ್, ಬಿಜೆಪಿ ಅವಧಿಯಲ್ಲಿ ನೂರಾರು ಕೊಲೆಗಳಾಗಿವೆ. ಆದರೆ ಕೆಲವರಿಗೆ ಮಾತ್ರ ಪರಿಹಾರ ನೀಡಿದ್ದಾರೆ ಎಂದು ಆರೋಪಿಸಿದ ಲಕ್ಷ್ಮಣ್, ಟಿ ನರಸೀಪುರ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಇದು ನಾಚಿಕೆಗೇಡಿನ ಸಂಗತಿ. ಇದರ ವಿರುದ್ಧ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಲಕ್ಷ್ಮಣ್​ ಹೇಳಿದರು.

ಚಕ್ರವರ್ತಿ ಸೂಲಿಬೆಲೆ ಅವರು, ಸಚಿವ ಮಹಾದೇವಪ್ಪ ಪುತ್ರನ ಜೊತೆ ಆರೋಪಿಗಳು ಫೋಟೋ ತೆಗೆಸಿಕೊಂಡಿರುವ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ. ಕೊಲೆ ಆರೋಪಿಗಳಲ್ಲಿ ಒಬ್ಬ ಬಿಜೆಪಿ ಪಾಲಿಕೆ ಸದಸ್ಯನ ತಮ್ಮ ಇರುವುದು ಎಂಬುದರ ಬಗ್ಗೆ ತನಿಖೆ ಮಾಡಲಿ ಎಂದು ಆಗ್ರಹಿಸಿದರು.

ಸಿ ಟಿ ರವಿ ಒಬ್ಬ ರೌಡಿ ಶೀಟರ್ : ಸಿ ಟಿ ರವಿ ಒಬ್ಬ ರೌಡಿ ಶೀಟರ್ ಆಗಿದ್ದು, ನಾಲ್ಕು ಜನರ ಮೇಲೆ ಕಾರು ಹತ್ತಿಸಿ ಕೊಂದ ಆರೋಪ ಇದೆ. ಅವರನ್ನು ಬಿಜೆಪಿ ಸತ್ಯಶೋಧನಾ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಇದರ ಜೊತೆಗೆ ಸಂಸದ ಪ್ರತಾಪ್ ಸಿಂಹ ಮೇಲೆ ಹಲವಾರು ಆರೋಪಗಳು ಇವೆ. ಅವರನ್ನು ಸಹ ಸತ್ಯಶೋಧನಾ ಸಮಿತಿಯ ಸದಸ್ಯನಾಗಿ ಮಾಡಲಾಗಿದೆ. ಇಂತಹ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳಿಂದ ಯಾವ ರೀತಿ ಸತ್ಯಶೋಧನೆ ಮಾಡಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರರು ಟೀಕಿಸಿದರು. ಇದೇ ವೇಳೆ ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡುತ್ತಿರುವುದು ಜೆಡಿಎಸ್ ಬದುಕಿದೆ ಎಂದು ತೋರಿಸಲು ಅಷ್ಟೇ ಎಂದು ಲಕ್ಷ್ಮಣ್ ವ್ಯಂಗ್ಯವಾಡಿದರು.

ಇನ್ನು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಕನ್ನಡವನ್ನು ವ್ಯಂಗ್ಯ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮರಾಠಿ ಮಿಶ್ರಿತ ಕನ್ನಡದಲ್ಲಿ ಮಾತನಾಡುತ್ತಾರೆ. ಯು ಟಿ ಖಾದರ್ ಸ್ಪೀಕರ್ ಆಗಿರುವುದನ್ನು ಸಹಿಸಿಕೊಳ್ಳದ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದರು.

ಇದನ್ನೂಓದಿ:'ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂಗಳ ಹತ್ಯೆಗಳಾಗುತ್ತವೆ': ಶ್ರೀರಾಮುಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.