ETV Bharat / state

ರಾಮನಗರ ಜಿಲ್ಲೆಯವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ: ಡಿ.ಕೆ.ಸುರೇಶ್

author img

By

Published : Apr 10, 2023, 7:09 PM IST

ನನ್ನ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ನಾನು ಗಮನ ಹರಿಸಿದ್ದೇನೆ ಎಂದು ಡಿ.ಕೆ.ಸುರೇಶ್ ಹೇಳಿದರು.

MP DK Suresh
ಸಂಸದ ಡಿ.ಕೆ ಸುರೇಶ್

'ಚನ್ನಪಟ್ಟಣಕ್ಕೆ ಅಚ್ಚರಿಯ ಅಭ್ಯರ್ಥಿ ಘೋಷಣೆಯಾಗಲ್ಲ'

ರಾಮನಗರ : ಈ ಬಾರಿಯೂ ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆಗೆ ಮುಂದಾಗಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ. ಚುನಾವಣೆ ಕುರಿತು ಇಂದು ರಾಮನಗರದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್, ಈಗಾಗಲೇ ಕೆಪಿಸಿಸಿ ಅಧ್ಯಕ್ಷರು, ಸಿಎಲ್​ಪಿ ನಾಯಕರು ಅಭ್ಯರ್ಥಿಗಳ ಹೆಸರು ಕಳುಹಿಸಿದ್ದು ಮೂರು ದಿನಗಳಲ್ಲಿ ಚನ್ನಪಟ್ಟಣ ಅಭ್ಯರ್ಥಿಯ ಘೋಷಣೆಯಾಗುತ್ತದೆ. ಚನ್ನಪಟ್ಟಣಕ್ಕೆ ಅಚ್ಚರಿಯ ಅಭ್ಯರ್ಥಿಯೇನೂ ಘೋಷಣೆಯಾಗಲ್ಲ. ರಾಮನಗರ ಜಿಲ್ಲೆಯವರೇ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂದರು. ಈ ಬಾರಿ ಕೆಪಿಸಿಸಿ ಅಧ್ಯಕ್ಷರಿಗೆ 224 ಕ್ಷೇತ್ರಗಳ ಜವಾಬ್ದಾರಿ ಇರುವುದರಿಂದ ನನ್ನ ಲೋಕಸಭಾ ಕ್ಷೇತ್ರದ 8 ಕ್ಷೇತ್ರದಲ್ಲಿ ನಾನು ಗಮನ ಹರಿಸಿದ್ದೇನೆ ಎಂದು ಹೇಳಿದರು.

ಸಚಿವ ಮುನಿರತ್ನ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಅವರಿಗೆ ಏನಾಗಿದೆಯೋ ಗೊತ್ತಿಲ್ಲ, ಭ್ರಮೆಯಲ್ಲಿರಬೇಕು. ನಾನೇಕೆ ಅವರನ್ನು ಟಾರ್ಗೆಟ್ ಮಾಡಲಿ. ನಾನು ಎಲ್ಲೆಡೆ ಕೆಲಸ ಮಾಡುತ್ತಿದ್ದೇನೆ, ಅದು ಅವರಿಗೆ ಕಾಣುತ್ತಿಲ್ಲ ಎಂದರು. ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮನ ವಿಚಾರ ಕುರಿತು ಪ್ರತಿಕ್ರಿಯಿಸಿ, ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತೇನೂ ಇಲ್ಲ. ಕೆಪಿಸಿಸಿ ಅಧ್ಯಕ್ಷರು ಏನು ಉತ್ತರ ಕೊಡಬೇಕೋ ಕೊಟ್ಟಿದ್ದಾರೆ. ಹೈಕಮಾಂಡ್ ಆದೇಶ ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದು ನಾವೆಲ್ಲರೂ ಒಗ್ಗಟ್ಟಿನಿಂದ ಪ್ರಚಾರ ನಡೆಸಬೇಕಿದೆ. ಕಾಂಗ್ರೆಸ್ ಈಗಾಗಲೇ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಬಲಿಷ್ಠ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ರಾಮನಗರ ವಿಧಾನಸಭಾ ಕ್ಷೇತ್ರ ಈ ಹಿಂದಿನಿಂದಲೂ ಜೆಡಿಎಸ್ ಭದ್ರಕೋಟೆ. ಈ ಕ್ಷೇತ್ರ ಹಲವು ವರ್ಷಗಳಿಂದ ಕಾಂಗ್ರೆಸ್ ಶಾಸಕರನ್ನು ನೋಡಿಲ್ಲ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸಾಕಷ್ಟು ಕೆಲಸ ಮಾಡಿದ್ದಾರೆ. ಕನಕಪುರ ತಾಲೂಕಿಗೆ ಸೇರಿದ ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿ ಕೇಂದ್ರಗಳು ರಾಮನಗರ ವಿಧಾನಸಭಾ ವ್ಯಾಪ್ತಿಗೆ ಬರುತ್ತವೆ. ಇದರಿಂದ ಪ್ರತಿ ಬಾರಿ ಕೂಡ ಈ ಎರಡು ಹೋಬಳಿಯಿಂದ ಅತಿ ಹೆಚ್ಚು ಮತಗಳು ಜೆಡಿಎಸ್ ಅಭ್ಯರ್ಥಿಗಳಿಗೆ ವರವಾಗುತ್ತಿತ್ತು. ಏಕೆಂದರೆ ಹೋಬಳಿಯ ಸಾಕಷ್ಟು ಜನರು ಕಳೆದ ಮೂವತ್ತು ವರ್ಷಗಳಿಂದ‌ ಜೆಡಿಎಸ್​ನಲ್ಲೇ ಇದ್ದರು. ಆದರೆ ಈ ಸಲದ ಚುನಾವಣೆಯಲ್ಲಿ ಆ ಭಾಗದ ಸಾಕಷ್ಟು ಜನರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್​ ಬಲಪಡಿಸಿ ಡಿಕೆಶಿಗೆ ಬೆಂಬಲ‌ ನೀಡಲು ಬಂದಿದ್ದಾರೆ ಎಂದು ತಿಳಿಸಿದರು.

ಕಳೆದ ಐವತ್ತು ವರ್ಷಗಳಿಂದ ಜೆಡಿಎಸ್‌ನಲ್ಲಿ‌ ಸಕ್ರಿಯವಾಗಿ ಕೆಲಸ ಮಾಡಿದ್ದ ಮಾಜಿ ಜಿ.ಪಂ.ಸದಸ್ಯರಾದ ಭುಜಂಗಯ್ಯ, ವಿಎಸ್​ಎಸ್​ಎನ್ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ನೂರಾರು ಜನರು ಹಳೆ ಬೇರು, ಹೊಸ ಚಿಗುತು ಅನ್ನೋ ರೀತಿಯಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ ಎಂದರು.

ಇದೇ ವೇಳೆ ಮಾತನಾಡಿದ ಜೆಡಿಎಸ್ ತೊರೆದ ಮುಖಂಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎರಡು ಭಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಈ ಸಲ ನಮ್ಮವರೇ ಆದ ಒಕ್ಕಲಿಗ ಸಮುದಾಯದ ನಾಯಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದರು. ಇದೇ ಸಂದರ್ಭದಲ್ಲಿ ನೂರಾರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಇದನ್ನೂ ಓದಿ : ಬೊಂಬೆನಗರಿಯಲ್ಲಿ ಹೇಗಿದೆ ಎಲೆಕ್ಷನ್‌ ಹವಾ? ಹೆಚ್ಡಿಕೆ ಕೋಟೆಯಲ್ಲಿ ಕೈ, ಕಮಲ ಲೆಕ್ಕಾಚಾರವೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.