ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ರೈತರಿಂದ ವಿಧಾನಸೌಧಕ್ಕೆ ಪಾದಯಾತ್ರೆ

author img

By

Published : Sep 23, 2021, 7:53 PM IST

Ramnagar

ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿ ಉದ್ದೇಶಿತ ಮೇಕೆದಾಟು ಅಣೆಕಟ್ಟು ಕಾರ್ಯ ಆರಂಭಿಸುವಂತೆ ಒತ್ತಾಯಿಸಿ ರೈತ ಸಂಘಟನೆ ವತಿಯಿಂದ ಪಾದಯಾತ್ರೆ ಶುರುವಾಗಿದೆ.

ರಾಮನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರೈತರು ರಸ್ತೆಗಿಳಿದಿದ್ದಾರೆ. ಕನಕಪುರ ತಾಲೂಕಿನ ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳುವ ಮೂಲಕ ಯೋಜನೆ ಜಾರಿಗೆ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಶಿವಗಿರಿ ಕ್ಷೇತ್ರದ ಅನ್ನದಾನ ಸ್ವಾಮೀಜಿ ಚಾಲನೆ ನೀಡಿದರು.

ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಪಾದಯಾತ್ರೆ

ಈ ಪಾದಯಾತ್ರೆ ಮೇಕೆದಾಟಿನಿಂದ ಪ್ರಾರಂಭಗೊಂಡು ಹೆದ್ದಾರಿ ಮೂಲಕ ಸುಮಾರು 95 ಕಿ.ಮೀ. ಸಂಚರಿಸಿ ನಂತರ 4ನೇ ದಿನಕ್ಕೆ ಬೆಂಗಳೂರಿಗೆ ತಲುಪಿ ವಿಧಾನಸೌಧ ತಲುಪಲಿದೆ. ಮೇಕೆದಾಟು ಜಾರಿಯಾದರೆ ಹಳೆ ಮೈಸೂರು ಪ್ರಾಂತ್ಯದ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ರಾಮನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ನಮ್ಮ ನೀರನ್ನು ಉಪಯೋಗಿಸಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ರಾಜ್ಯ ಸರ್ಕಾರ ಯೋಜನೆ ಜಾರಿಗೊಳಿಸಲು ಮೀನಮೇಷ ಏಣಿಸುತ್ತಿರುವುದೇಕೆ ಅನ್ನೋದೇ ಗೊತ್ತಾಗುತ್ತಿಲ್ಲ. ಆದಷ್ಟು ಬೇಗ ಈ ಯೋಜನೆ ಜಾರಿಯಾಗಬೇಕು ಎಂದು ರೈತರು ಆಗ್ರಹಿಸಿದರು.

ಯೋಜನೆ ಜಾರಿಯಾದರೆ 450 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾಗಲಿದೆ. ಇದರಿಂದ ಎರಡು ರಾಜ್ಯಗಳಿಗೂ ಪ್ರಯೋಜನವಿದೆ. ತಮಿಳುನಾಡು ಯೋಜನೆಗೆ ಯಾಕೆ ಕ್ಯಾತೆ ತೆಗೆಯುತ್ತಿದೆಯೋ ಗೊತ್ತಿಲ್ಲ. ಯೋಜನೆ ಜಾರಿಯಾಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತಲೇ ಇರುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.