ETV Bharat / state

ವಿಧಾನಸಭೆ ಚುನಾವಣೆ 2023.. ರಾಮನಗರದಲ್ಲಿ ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

author img

By

Published : Apr 17, 2023, 9:47 AM IST

Updated : Apr 17, 2023, 10:33 AM IST

HD Kumaraswamy, DK Shivakumar, Nikhil Kumaraswamy
ಹೆಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ

ವಿಧಾನಸಭೆ ಚುನಾವಣೆ 2023-ಮಾಜಿ ಸಿಎಂ ಹೆಚ್​​ಡಿಕೆ, ಡಿಕೆಶಿ, ನಿಖಿಲ್ ಕುಮಾರಸ್ವಾಮಿ, ಹೆಚ್.ಸಿ ಬಾಲಕೃಷ್ಣ, ಎ.ಮಂಜುನಾಥ್, ಇಕ್ಬಾಲ್ ಹುಸೇನ್, ಗಂಗಾಧರ್ ಸೇರಿದಂತೆ ಹಲವು ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಿಖಿಲ್ ಕುಮಾರಸ್ವಾಮಿ ..

ರಾಮನಗರ: ರೇಷ್ಮೆನಗರಿ ನಗರಿ ರಾಮನಗರ ಜಿಲ್ಲೆಯಲ್ಲಿ ಇಂದು ನಾಮಪತ್ರಗಳ ಭರಾಟೆ ಹರಿದು ಬರಲಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಖಿಲ್ ಕುಮಾರಸ್ವಾಮಿ, ಹೆಚ್.ಸಿ. ಬಾಲಕೃಷ್ಣ, ಎ.ಮಂಜುನಾಥ್, ಇಕ್ಬಾಲ್ ಹುಸೇನ್, ಗಂಗಾಧರ್ ಸೇರಿದಂತೆ ಹಲವು ನಾಯಕರು ಅಭಿಮಾನಿಗಳೊಂದಿಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಿಂದ ಹೆಚ್​​ಡಿಕೆ: ಮಾಜಿ ಸಿಎಂ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು(ಏ.17)ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಎಂ.ಸಿ ಅಶ್ವಥ್​ ತಿಳಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೃಹತ್ ಜನಸ್ತೋಮದ ನಡುವೆ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ತೆರಳಿ ಕುಮಾರಸ್ವಾಮಿ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಲಿದ್ದಾರೆ. ಹೀಗಾಗಿ ತಾಲೂಕಿನಾದ್ಯಂತ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಏ.19ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಕುಮಾರಸ್ವಾಮಿ ಅವರು ಸುಣ್ಣಘಟ್ಟ ಕಾರ್ಯಕ್ರಮದಲ್ಲಿ ಪ್ರಕಟಿಸಿದ್ದರು. ಇದೀಗ ಪ್ರಕ್ರಿಯೆ ದಿನ ಬದಲಾಗಿದೆ. ನಿಗದಿಗಿಂತ ಎರಡು ದಿನ ಮೊದಲೇ ನಾಮಪತ್ರ ಸಲ್ಲಿಕೆ ಗೊತ್ತುಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಂಚರತ್ನ ಕಾರ್ಯಕ್ರಮ: ಜನಪ್ರಿಯ ಮತ್ತು ಜನಪರ ಘೋಷಣೆಗಳಿಂದ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನ‌ ಇಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

3ನೇ ಬಾರಿ ಸಿಎಂ ಆಗೋದು ಖಚಿತ: ಈ ಬಾರಿ ಫಲಿತಾಂಶದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಅಶ್ವಥ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಚನ್ನಪಟ್ಟಣ ಕ್ಷೇತ್ರದಲ್ಲಿ ಇದೊಂದೇ ಅವಧಿಯಲ್ಲಿ 1,500 ಕೋಟಿ ರೂ.ಗಳಿಗಿಂತ ಅಧಿಕ ಅಭಿವೃದ್ಧಿ ಕೆಲಸಗಳು ಆಗಿವೆ. ಕುಮಾರಸ್ವಾಮಿ ಅವರು ಜನಮನ ಮುಟ್ಟುವ ರೀತಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು 21 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದು, ಈ ಬಾರಿ ಗೆಲುವಿನ ಅಂತರ ಮತ್ತಷ್ಟು ಹೆಚ್ಚಳದ ವಿಶ್ವಾಸ ಕ್ಷೇತ್ರದಾದ್ಯಂತ ಕಂಡು ಬಂದಿದೆ. ನಾಮಪತ್ರ ಸಲ್ಲಿಕೆಗೆ ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಮಾಜಿ ಶಾಸಕ ಎಂ.ಸಿ ಅಶ್ವಥ್ ಮನವಿ ಮಾಡಿದ್ದಾರೆ.

ಕಾಂಗ್ರೆಸ್​ನಿಂದ ಗಂಗಾಧರ್ ನಾಮಪತ್ರ ಸಲ್ಲಿಕೆ: ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸರಳವಾಗಿ ಅದ್ಧೂರಿ ಮೆರವಣಿಗೆಯಿಲ್ಲದೆ ಕಾಂಗ್ರೆಸ್ ಮುಖಂಡರೊಂದಿಗೆ ಮಾನಪತ್ರ ಸಲ್ಲಿಸಲಿದ್ದಾರೆ.

ಮಾಗಡಿಯಲ್ಲಿ ಮಾಜಿ ಹಾಗೂ ಹಾಲಿ ಶಾಸಕರಿಂದ ನಾಮಪತ್ರ: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲೂ ಕೂಡ ನಾಮಪತ್ರ ಭರಾಟೆ ಜೋರಾಗಿರಲಿದೆ. ಹಾಲಿ ಶಾಸಕ ಎ.ಮಂಜುನಾಥ್ ತಮ್ಮ ಬೆಂಬಲಿಗರೊಂದಿಗೆ ಕ್ಷೇತ್ರದಲ್ಲಿ ಭಾರಿ ಮೆರವಣಿಗೆ ನಡೆಸಿ ಜೆಡಿಎಸ್ ಪಕ್ಷದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ. ಅದರಂತೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಬಾಲಕೃಷ್ಣ ಕೂಡ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಕನಕಪುರದಲ್ಲೂ ನಾಮಪತ್ರ ಭರಾಟೆ: ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಕನಕಪುರ ಕ್ಷೇತ್ರದಲ್ಲಿ ಕೂಡ ಸೋಮವಾರ ನಾಮಪತ್ರ ಸಲ್ಲಿಕೆ ಜೋರಾಗಿದೆ. ಕಾಂಗ್ರೆಸ್​​ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ. ಅದರಂತೆ ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಕೂಡ ಇಂದೇ ನಾಮಪತ್ರ ಸಲ್ಲಿಕೆ ಮಾಡಲು ಸಜ್ಜಾಗಿದ್ದು, ಅವರು ಕೂಡ ಕ್ಷೇತ್ರದ ತಮ್ಮ ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೆಯೇ ಜೆಡಿಎಸ್ ಅಭ್ಯರ್ಥಿ ನಾಗರಾಜು ಕೂಡ ಕನಕಪುರ ತಾಲೂಕಿನ ಕಚೇರಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆಂಬ ಮಾಹಿತಿ ಸಿಕ್ಕಿದೆ.

ರೇಷ್ಮೆನಗರಿಯಲ್ಲಿ ನಿಖಿಲ್ ನಾಮಪತ್ರ: ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಯುವ ನಾಯಕ‌ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅನಿತಾ ಕುಮಾರಸ್ವಾಮಿ ಸೇರಿದಂತೆ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನಾಡ ದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ತಾಲೂಕು ಕಚೇರಿಗೆ ಮೆರವಣಿಗೆ ಮೂಲಕ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಕೂಡ ಇಂದೇ ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಗ್ರಾಮದೇವತೆ ದರ್ಶನ ಪಡೆದು ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

Last Updated :Apr 17, 2023, 10:33 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.