ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ, ಕಲ್ಲು ಎಸೆದ ಜೆಡಿಎಸ್ ಕಾರ್ಯಕರ್ತರು.. ಪೊಲೀಸರಿಂದ ಲಾಠಿಚಾರ್ಜ್​

author img

By

Published : Oct 1, 2022, 12:17 PM IST

Updated : Oct 1, 2022, 12:30 PM IST

ramnagar protest

ಚನ್ನಪಟ್ಟಣದಲ್ಲಿ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ರಾಜಕೀಯ ಜೋರಾಗಿದೆ. ಬೈರಾಪಟ್ಟಣ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ತೆರಳಿದ್ದು, ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ ಹಾಗೂ ಕಲ್ಲನ್ನು ಜೆಡಿಎಸ್ ಕಾರ್ಯಕರ್ತರು ಎಸೆದಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

ರಾಮನಗರ: ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಚನ್ನಪಟ್ಟಣಕ್ಕೆ ಹಣ ಬಿಡುಗಡೆ ಮಾಡಿರುವುದೇ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ. ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸದೇ ಕಾಮಗಾರಿ ಹೇಗೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ‌ ಕ್ಷೇತ್ರಕ್ಕೆ 50 ಕೋಟಿ: ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮುಖ್ಯಮಂತ್ರಿಗಳು ತಮ್ಮ ಸ್ವ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿದ್ದರು. ಇಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್​ ನಾರಾಯಣ್ ಹಾಗೂ ವಿಧಾನ‌ ಪರಿಷತ್ ಶಾಸಕರಾದ ಸಿ.ಪಿ. ಯೋಗೇಶ್ವರ್ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲು ಸಿದ್ಧತೆ ಮಾಡಿಕೊಂಡಿದ್ದರು.

ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ತಾಲೂಕಿನ ರಾಂಪುರ ಗ್ರಾಮದಲ್ಲಿ ಮೊದಲು‌ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜುಗೊಳಿಸಿ ಉಳಿದಂತೆ ವಿವಿಧ ಗ್ರಾಮಗಳ ಕಾಂಕ್ರೀಟ್ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿತ್ತು. ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದ ಜನರ ಗಮನ ಸೆಳೆಯುವ ಉದ್ದೇಶದಿಂದ ಮುಖ್ಯಮಂತ್ರಿಗಳಿಗೆ ಒತ್ತಡ ತಂದು ಸಿಎಂ ವಿಶೇಷ ಅನುದಾನದಲ್ಲಿ ಸಿಪಿವೈ ಹಣ‌ ಬಿಡುಗಡೆ ಮಾಡಿಸಿಕೊಂಡು ಬಂದು‌ ಕಾರ್ಯಕ್ರಮ ನಡೆಸಲು ಸಜ್ಜಾಗಿದ್ದರು.

ಪೂರ್ವ ನಿಯೋಜಿತ ‌ಕಾರ್ಯಕ್ರಮದಂತೆ ರಾಂಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆಗೆ ಪೂಜೆ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥ್​ ನಾರಾಯಣ್, ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ಸೇರಿದಂತೆ‌ ಹಲವು ನಾಯಕರು ಆಗಮಿಸಲಿದ್ದಾರೆ.

ramnagar protest
ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಇದನ್ನೂ ಓದಿ: ಪುರಸಭೆ ಸಾಮಾನ್ಯ ಸಭೆಯಲ್ಲಿ ಕೋಲಾಹಲ: ಜೆಡಿಎಸ್​ ಕಾಂಗ್ರೆಸ್​ ಸದಸ್ಯರ ಮಧ್ಯೆ ಬಿಗ್​ ಫೈಟ್​

ಇತ್ತ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ವಿಶೇಷ ಅನುದಾನ 50 ಕೋಟಿ ಬಿಡುಗಡೆ ಮಾಡಿ, ಸ್ಥಳೀಯ ಶಾಸಕ ಹೆಚ್.ಡಿ.ಕುಮಾರಸ್ವಾಮಿ ರವರೊಂದಿಗೆ ಸಮಾಲೋಚನೆ ನಡೆಸಿ ಅವರ ಒಪ್ಪಿಗೆ ಪಡೆದು ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟವಾಗಿ ಸಿಎಂ ಸೂಚನೆ ನೀಡಿದ್ದಾರೆ. ಆದರೆ ವಿಧಾನ ಪರಿಷತ್ ಸದಸ್ಯ ಶ್ರೀ.ಸಿ.ಪಿ.ಯೋಗೇಶ್ವರ್ ಮುಖ್ಯಮಂತ್ರಿಗಳು ನೀಡಿರುವ ಆದೇಶವನ್ನು ಧಿಕ್ಕರಿಸಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಪ್ರತಿಭಟನೆಗೆ ಮುಂದಾದ ದಳ ಕಾರ್ಯಕರ್ತರು ವಶಕ್ಕೆ: ಇತ್ತ ರಾಂಪುರ ಗ್ರಾಮದಲ್ಲಿ ಪ್ರತಿಭಟನೆಗೆ ಮುಂದಾದ ಜೆಡಿಎಸ್ ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ. ಸಿಪಿವೈ ಹಾಗೂ ಸಚಿವರ ವಿರುದ್ಧ ಘೋಷಣೆ ಕೂಗಿದ 20 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಯಕ್ರಮವನ್ನ ಜಿಲ್ಲಾಡಳಿತದ ಗಮನಕ್ಕೂ ತರದೆ ಆಹ್ವಾನ ಪತ್ರಿಕೆಯಲ್ಲಿ ನೆಪ ಮಾತ್ರಕ್ಕೆ ಕುಮಾರಸ್ವಾಮಿ ಅವರನ್ನು ಅಧ್ಯಕ್ಷತೆ ಎಂದು ತೋರಿಸಿ ತಾಲ್ಲೂಕಿನ ರಾಂಪುರ, ಪಟ್ಲು, ಬೈರಾಪಟ್ಟಣ, ಅಕ್ಕೂರು ಹೊಸಹಳ್ಳಿ ಮತ್ತು ಕೋಡಂಬಳ್ಳಿ ಗ್ರಾಮಗಳಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡುವುದಾಗಿ ತಾಲೂಕು ಆಡಳಿತವನ್ನು ದುರ್ಬಳಕೆ ಮಾಡಿಕೊಂಡು ಗುದ್ದಲಿ ಪೂಜೆ ಮಾಡಲು ಹೊರಟಿದ್ದಾರೆ ಎಂದು ಇಂದು ರಾಂಪುರ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮವನ್ನು ಜೆಡಿಎಸ್ ಮುಖಂಡರು ಖಂಡಿಸಿದ್ದಾರೆ. ಜೆಡಿಎಸ್ ಅಧ್ಯಕ್ಷ ಜಯಮುತ್ತು ಪ್ರತಿಭಟನೆಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಖಂಡಿಸಿ ರಾಂಪುರ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಡಿಗಲ್ಲು ಸಮಾರಂಭದಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಶಾಸಕ, ಮಾಜಿ ಸಚಿವರ ಸಮ್ಮುಖದಲ್ಲೇ ಹೊಡೆದಾಟ

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಪ್ರಾರಂಭ: ಅಭಿವೃದ್ಧಿ ವಿಷಯದಲ್ಲಿ ಕ್ಷೇತ್ರದಲ್ಲಿ ರಾಜಕೀಯ ರಂಗಿನಾಟ ಶುರುವಾಗಿದೆ. ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಕ್ಷೇತ್ರದಲ್ಲಿ ಹೆಸರಿಗಾಗಿ ನಾಯಕರ ನಡುವೆ ಹಗ್ಗ ಜಗ್ಗಾಟ ಶುರುವಾಗಿದೆ.‌ ಒಂದು ವೇಳೆ ಕಾರ್ಯಕ್ರಮ ನಡೆದು ಕಾಮಗಾರಿ‌ ಪ್ರಾರಂಭವಾದರೆ ಸಿಪಿವೈ ಅವರಿಗೆ ಕ್ಷೇತ್ರದಲ್ಲಿ ಹೆಸರು ಬರಲಿದೆ. ಇದು ಜೆಡಿಎಸ್ ಪಕ್ಷದವರಿಗೆ ನುಂಗಲಾರದ ತುತ್ತಾಗಿದೆ. ಹೀಗಾಗಿ, ಹೇಗಾದ್ರು ಮಾಡಿ ಕಾರ್ಯಕ್ರಮ ನಡೆಯದಂತೆ ನೋಡಿಕೊಂಡರೆ ಕ್ಷೇತ್ರದಲ್ಲಿ ಸ್ಥಳೀಯ ಶಾಸಕ ಹೆಚ್ ಡಿ ಕುಮಾರಸ್ವಾಮಿ ಶಕ್ತಿ ಪ್ರದರ್ಶನ ಮಾಡಿದಂತೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Last Updated :Oct 1, 2022, 12:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.