ETV Bharat / state

ಕ್ಯಾಂಟರ್ ಡ್ರೈವರ್ ಸಾವು ಪ್ರಕರಣ: ಯಾವುದೇ ರಾಜಕೀಯ ಒತ್ತಡ ಇಲ್ಲ: ಎಸ್​ಪಿ ಕಾರ್ತಿಕ್ ರೆಡ್ಡಿ

author img

By

Published : Apr 4, 2023, 7:09 PM IST

ಕ್ಯಾಂಟರ್ ಡ್ರೈವರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ. ಆರೋಪಿಯನ್ನು ಹುಡುಕಲು ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಎಸ್​ಪಿ ಕಾರ್ತಿಕ್​ ರೆಡ್ಡಿ ಹೇಳಿದ್ದಾರೆ.

satanur-canter-driver-death-case-sp-karthik-reddys-reaction
ಸಾತನೂರ ಕ್ಯಾಂಟರ್ ಡ್ರೈವರ್ ಸಾವು ಪ್ರಕರಣ: ಯಾವುದೇ ರಾಜಕೀಯ ಒತ್ತಡ ಇಲ್ಲ-ಎಸ್​ಪಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ

ಎಸ್​ಪಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ

ರಾಮನಗರ: ಜಾನುವಾರು ರಕ್ಷಣೆ ವೇಳೆ ಕ್ಯಾಂಟರ್​​ ಚಾಲಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುನೀತ್​ ಕೆರೆಹಳ್ಳಿ ತಲೆಮರಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ಪ್ರಕರಣದಲ್ಲಿ ಇದುವರೆಗೂ ಯಾವುದೇ ರಾಜಕೀಯ ಒತ್ತಡ ಬಂದಿಲ್ಲ ಎಂದು ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ‘‘ಮಾರ್ಚ್​ 31 ರಂದು ರಾತ್ರಿ 11:30 ಸುಮಾರಿಗೆ ಪ್ರಕರಣ ನಡೆದಿದ್ದು, ಈ ಪ್ರಕರಣ ಕುರಿತು ಸಾತನೂರು ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿವೆ. ಅಕ್ರಮ ಹಸು ಸಾಗಣೆ ಬಗ್ಗೆ ಪುನೀತ್ ಕೆರೆಹಳ್ಳಿ ಕೊಟ್ಟ ದೂರಿನ ಮೇಲೆ ಒಂದು ಎಫ್ಐಆರ್ ದಾಖಲಾಗಿದೆ. ಕ್ಯಾಂಟರ್ ಡ್ರೈವರ್ ಹಾಗೂ ಮೃತ ವ್ಯಕ್ತಿ ಕುಟುಂಬಸ್ಥರು ನೀಡಿದ ದೂರಿನ ಮೇಲೆ ಎರಡು ಎಫ್ಐಆರ್ ದಾಖಲಾಗಿದ್ದು, ಮೂರು ಕೇಸ್​ಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಸದ್ಯ ಪುನೀತ್ ಕೆರೆಹಳ್ಳಿ ತಲೆಮರೆಸಿಕೊಂಡಿದ್ದಾನೆ. ಈಗಾಗಲೇ ನಾಲ್ಕು ತಂಡಗಳನ್ನ ರಚನೆ ಮಾಡಿ ಆರೋಪಿಗೆ ಹುಡುಕಾಟ ನಡೆಸುತ್ತಿದ್ದೇವೆ. ಅಲ್ಲದೇ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪ್ರಕರಣದಲ್ಲಿ ಯಾವುದೇ ರಾಜಕೀಯ ಒತ್ತಡ ಇಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ‌. ನಿನ್ನೆ ಐಜಿಯವರು ಸ್ಥಳ ಪರಿಶೀಲನೆ ಮಾಡಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ. ಪ್ರಕರಣದಲ್ಲಿ ಯಾವುದೇ ರೀತಿಯ ರಾಜಕೀಯ ಒತ್ತಡ ಇದುವರೆಗೂ ಬಂದಿಲ್ಲ’’ ಎಂದು ಎಸ್​​ಪಿ ಕಾರ್ತಿಕ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಎಂದು ದೂರು ದಾಖಲಿಸಿದ ಕುಟುಂಬಸ್ಥರು

ಪ್ರಕರಣವೇನು? : ಕನಕಪುರ ತಾಲೂಕಿನ ಸಾತನೂರು ಸಮೀಪ ಗೋವುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾರನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿ ಸಾತನೂರು ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದರು. ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರು ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವೇಳೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ವಾಹನ ತಡೆದಿತ್ತು.

ಈ ವೇಳೆ ವಾಹನದಲ್ಲಿದ್ದ ಇದ್ರೀಸ್ ಪಾಷಾ ಮತ್ತೊಬ್ಬರು ತಪ್ಪಿಸಿಕೊಂಡಿದ್ದರು. ಅವರನ್ನು ಬೆನ್ನಟ್ಟಿದ್ದ ಪುನೀತ್ ಕೆರೆಹಳ್ಳಿ ತಂಡ ಥಳಿಸಿ ಹತ್ಯೆ ಮಾಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂದರ್ಭ ವಾಹನದಿಂದ ಇಳಿದು ಇದ್ರೀಸ್ ಪಾಷಾ ಅವರು ಓಡಿಹೋಗಿದ್ದರು. ಘಟನೆ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಇದ್ರೀಸ್ ಶವ ಪತ್ತೆಯಾಗಿತ್ತು.

ಇದ್ರೀಸ್ ಪಾಷಾ ಸಾವಿನ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಶೀಘ್ರವೇ ಪುನೀತ್ ಕೆರೆಹಳ್ಳಿ ಬಂಧಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ : ಸಾತನೂರು ಜಾನುವಾರು ಸಾಗಿಸುತ್ತಿದ್ದವನ ಕೊಲೆಗೆ ಬಿಜೆಪಿ ಸರ್ಕಾರದ ಅಸಹನೆ, ಅಸಹಿಷ್ಣುತೆ ಕಾರಣ: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.