ಶಿವಮೊಗ್ಗ: ಸರ್ವಸ್ಪರ್ಶಿ-ಸರ್ವವ್ಯಾಪಿ ತಂಡದ ಮೂಲಕ ಹಾಗೂ ಪೇಜ್ ಪ್ರಮುಖರ ಸಹಾಯದೊಂದಿಗೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬೆಂಬಲಿಗರನ್ನು ಗೆಲ್ಲಿಸಲು ಬಿಜೆಪಿ ಸರ್ವಸನ್ನದ್ಧವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ತಳಪಾಯವೆನಿಸಿದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಈಗಾಗಲೇ ಹಲವು ಕ್ರಮಗಳನ್ನು ಜಿಲ್ಲಾ ಬಿಜೆಪಿ ಕೈಗೊಂಡಿದೆ. ಜಿಲ್ಲೆಯ 271 ಗ್ರಾಮ ಪಂಚಾಯತ್ಗಳ ಪೈಕಿ 200ಕ್ಕೂ ಹೆಚ್ಚು ಗ್ರಾ. ಪಂ.ಗಳಲ್ಲಿ ಬಿಜೆಪಿ ಬೆಂಬಲಿಗರು ಗೆಲ್ಲಲಿದ್ದಾರೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರತಿ ಗ್ರಾಮ ಪಂಚಾಯತ್ನ ವಾರ್ಡ್ಗಳಲ್ಲಿ ಕುಟುಂಬ ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಪಂಚರತ್ನ ತಂಡವನ್ನು ರಚಿಸಿದ್ದು, ಈ ತಂಡವು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಚುನಾವಣಾ ಸಿದ್ಧತೆ ಬಗ್ಗೆ ಸಲಹೆ-ಸೂಚನೆ ನೀಡಲಿದೆ ಎಂದರು.
ಗ್ರಾಮ ಪಂಚಾಯತ್ ಗೆಲುವಿಗಾಗಿ ಪಕ್ಷ ಕಾರ್ಯತಂತ್ರಗಳನ್ನು ಹೆಣೆದಿದ್ದು, ಡಿಸೆಂಬರ್ 2ರಂದು ಜಿಲ್ಲೆಯ ಎರಡು ಕಡೆ ಗ್ರಾಮ ಸ್ವರಾಜ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ನಂತರ 11 ಗಂಟೆಗೆ ಪೆಸಿಟ್ ಕಾಲೇಜಿನ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಸಚಿವರಾದ ಮಾಧುಸ್ವಾಮಿ ಹಾಗೂ ಸಂಸದರಾದ ಬಿ.ವೈ.ರಾಘವೇಂದ್ರ, ಜಿ.ಎಂ.ಸಿದ್ದೇಶ್ವರ, ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ನಾರಾಯಣಸ್ವಾಮಿ, ಜಿ.ಎಸ್.ಬಸವರಾಜ್ ಸೇರಿದಂತೆ ಇತರರು ಭಾಗವಹಿಲಿದ್ದಾರೆ ಎಂದರು.
ಹಾಗೆಯೇ ಡಿಸೆಂಬರ್ 2ರ ಮಧ್ಯಾಹ್ನ 3 ಗಂಟೆಗೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕುಮುದ್ವತಿ ಕಾಲೇಜಿನ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ ಎಂದು ಮೇಘರಾಜ್ ಮಾಹಿತಿ ನೀಡಿದರು.