ತುಮಕೂರು: ಭವಿಷ್ಯದಲ್ಲಿ ಅಂತರ್ ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ತುಮಕೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ‘ಅಂತರ್ಜಲ ಚೇತನ’ ಎಂಬ ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ.
ಸರ್ಕಾರ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಡಾ. ರವಿಶಂಕರ್ ಗುರೂಜಿ ಅವರ ಸಂಸ್ಥೆಯು ಗ್ರಾಮೀಣಾಭಿವೃದ್ಧಿ ಯೋಜನೆಯೊಂದಿಗೆ ಎಂಒಯು ಜೊತೆ ಟೈಅಪ್ ಮಾಡಿಕೊಂಡು ತುಮಕೂರು, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಅಂತರ್ಜಲ ಚೇತನ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.
ಮೇ 5 ರಂದು ಸಂಸ್ಥೆಯ ತಾಂತ್ರಿಕ ಅಧಿಕಾರಿಗಳು ತುಮಕೂರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಸಮಗ್ರ ಅಂತರ್ಜಲ ಅಭಿವೃದ್ಧಿಯ ಬಗ್ಗೆ ಕಾರ್ಯಯೋಜನೆ ರೂಪಿಸಲಿದ್ದಾರೆ. ಈ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೆತ್ತಿಕೊಳ್ಳಲು ಸರ್ಕಾರ ಈಗಾಗಲೇ ನಿರ್ಧರಿಸಿದೆ.
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಡಾ. ರವಿಶಂಕರ್ ಗುರೂಜಿ ಅವರ ಸಂಸ್ಥೆಯು ಸ್ಯಾಟಲೈಟ್ ಮ್ಯಾಪ್ ಮೂಲಕ ಅಂತರ್ ಜಲದ ಮೂಲವನ್ನು ಗುರುತಿಸಿ, ಅಂತರ್ ಜಲ ಯಾವ ಸ್ಥಳದಲ್ಲಿ ಲಭ್ಯವಿದೆ ಎಂಬ ಮಾಹಿತಿ ಪಡೆಯಲಿದೆ. ಅಲ್ಲದೇ ಅನೇಕ ವರ್ಷಗಳ ಹಿಂದೆ ನೀರಿನ ಹರಿವು ಇದ್ದಂತಹ, ಬತ್ತಿ ಹೋದ ಜಾಗಗಳನ್ನು ಪತ್ತೆ ಮಾಡಲಾಗುತ್ತದೆ.
ಅಲ್ಲದೇ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು, ಮುಖ್ಯವಾಗಿ ನೀರು ಇಂಗುವಂತಹ ಜಾಗದ ಮಾಹಿತಿ ಪಡೆದು ಪ್ರತಿ ಪಂಚಾಯಿತಿ ಮಟ್ಟದಲ್ಲಿ ಕ್ರಿಯಾ ಯೋಜನೆ ತಯಾರು ಮಾಡಿ, ನರೇಗಾ ಯೋಜನೆಯಡಿ ಇದನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದರ ಕ್ರಿಯಾ ಯೋಜನೆಯನ್ನು ಗ್ರಾಮ ಪಂಚಾಯಿತಿಗೆ ಕೊಡಲಾಗುವುದು. ಅವರು ತಾಲೂಕು ಪಂಚಾಯಿತಿಗೆ ಕಳುಹಿಸುತ್ತಾರೆ. ಜಿಲ್ಲಾ ಪಂಚಾಯಿತಿಯಲ್ಲಿ ಅನುಮೋದನೆ ಪಡೆದು ಕೆಲಸ ಆರಂಭಿಸಲಾಗುವುದು. ಅಲ್ಲದೇ ಜಾಬ್ ಕಾರ್ಡ್ ಹೊಂದಿದ್ದ ಫಲಾನುಭವಿಗಳಿಗೆ ಕೂಲಿ ಕೊಡಲಾಗುವುದು ಎಂದು ಈಟಿವಿ ಭಾರತ್ಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಡಾ. ರವಿಶಂಕರ್ ಗುರೂಜಿ ಅವರ ಸಂಸ್ಥೆಯ ಯೋಜನಾಧಿಕಾರಿ ಪಾಂಡುರಂಗ ತಿಳಿಸಿದ್ದಾರೆ.
ಈಗಾಗಲೇ ಆರ್ಟ್ ಆಫ್ ಲಿವಿಂಗ್ ಸ್ವಯಂ ಪ್ರೇರಿಯತವಾಗಿ ಈ ಕಾರ್ಯವನ್ನು 7 ವರ್ಷಗಳಿಂದ ನಡೆಸಿಕೊಂಡು ಬರುತ್ತಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಅನುಷ್ಟಾನಕ್ಕೆ ತರಲಾಗಿದ್ದು, ಅಂತರ್ ಜಲ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.