ETV Bharat / state

ಕರಾವಳಿಯಲ್ಲಿ ಕಾಂಗ್ರೆಸ್​ ಬೃಹತ್ ಸಮಾವೇಶ: ಮುಗ್ಗರಿಸಿದ ಕಾಂಗ್ರೆಸ್ ಗದ್ದುಗೆ ಏರಲು ಸಿದ್ದತೆ

author img

By

Published : Nov 23, 2022, 9:09 PM IST

kn_kwr
ಕರಾವಳಿಯಲ್ಲಿ ಕಾಂಗ್ರೆಸ್​ ಬೃಹತ್ ಸಮಾವೇಶ

ನಾಳೆ ಕುಮಟಾದ ಮಣಕಿ ಮೈದಾನದಲ್ಲಿ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕಾರವಾರ: ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಇದ್ದು ರಾಜಕೀಯ ಪಕ್ಷಗಳು ಅಧಿಕಾರದ ಗದ್ದುಗೆ ಏರಲು ಸಿದ್ಧತೆಗೆ ಮುಂದಾಗಿವೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಾಳಯ ಮುಗ್ಗರಿಸಲು ಕಾರಣವಾಗಿದ್ದ ಹೊನ್ನಾವರದ ಯುವಕ ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಿಬಿಐಬಿ ರಿಪೋರ್ಟ್ ಸಲ್ಲಿಕೆಯನ್ನೇ ಬಿಜೆಪಿ ವಿರುದ್ಧ ಚುನಾವಣಾ ಅಸ್ತ್ರವನ್ನಾಗಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಜನಜಾಗೃತಿ ಸಮಾವೇಶದ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಲು ಕಾಂಗ್ರೆಸ್ ಮುಂದಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಅದರಲ್ಲೂ ಉತ್ತರಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚುವಂತಾಗಿತ್ತು. ಹೊನ್ನಾವರದ ಯುವಕ ಪರೇಶ್ ಮೇಸ್ತಾ ಸಾವು ಪ್ರಕರಣದಿಂದ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕೇವಲ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಂಡಿತ್ತು.

ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿದ್ದ ಜಿಲ್ಲೆಯಲ್ಲಿ ಪರೇಶ್ ಮೇಸ್ತಾ ಪ್ರಕರಣವನ್ನ ಹಿಂದೂ ಕಾರ್ಯಕರ್ತನ ಹತ್ಯೆ ಎಂದೇ ಬಿಂಬಿತವಾಗಿತ್ತು. ಆದರೆ ಕಳೆದ ಸುಮಾರು ನಾಲ್ಕೂವರೆ ವರ್ಷಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಇದೀಗ ಪರೇಶ್ ಮೇಸ್ತಾನದ್ದು ಕೊಲೆಯಲ್ಲ ಸಹಜ ಸಾವು ಎಂದು ಬಿ ರಿಪೋರ್ಟ್ ಸಲ್ಲಿಸಿದೆ.

ಇದೇ ಪ್ರಕರಣವನ್ನ ಮುಂದಿಟ್ಟುಕೊಂಡು ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಮಾಡಲು ನಾಳೆ ಕುಮಟಾದ ಮಣಕಿ ಮೈದಾನದಲ್ಲಿ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಮ್ಮಿಕೊಂಡಿದೆ. ಈಗಾಗಲೇ ಸಮಾವೇಶದ ಭರದ ಸಿದ್ಧತೆಗಳು ನಡೆಯುತ್ತಿದ್ದು ಪಕ್ಷದ ಹಿರಿಯ ಮುಖಂಡರುಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ನಾಳೆ ಕುಮಟಾದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಜಿಲ್ಲೆಯ ಕರಾವಳಿಯ ಕಾರವಾರ, ಕುಮಟಾ ಹಾಗೂ ಭಟ್ಕಳ ವಿಧಾನಸಭಾ ಕ್ಷೇತ್ರಗಳನ್ನೇ ಗುರಿಯಾಗಿಸಿಕೊಂಡು ಸಮಾವೇಶ ಆಯೋಜಿಸಲಾಗುತ್ತಿದ್ದು, ಪ್ರತಿ ಕ್ಷೇತ್ರದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಬೆಂಬಲಿಗರು ಸಮಾವೇಶದಲ್ಲಿ ಸೇರಲಿದ್ದಾರೆ.

ಇನ್ನು ಕಾಂಗ್ರೆಸ್ ಜನಜಾಗೃತಿ ಸಮಾವೇಶದ ಕುರಿತು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ್​ ನಾಯಕ್ ಟೀಕೆ ವ್ಯಕ್ತಪಡಿಸಿದ್ದು, ಪರೇಶ್ ಮೇಸ್ತಾ ಪ್ರಕರಣದಲ್ಲಿ ಸಾಕ್ಷ್ಯನಾಶಪಡಿಸಿದ ಬಳಿಕ ಕಾಂಗ್ರೆಸ್ ಸಿಬಿಐಗೆ ಹಸ್ತಾಂತರಿಸಿದೆ. ಪರೇಶ್ ಪ್ರಕರಣದಲ್ಲಿ ಬಿ ರಿಪೋರ್ಟ್ ಬರಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದ್ದು, ಕಾಂಗ್ರೆಸ್‌ನದ್ದು ಜನರಲ್ಲಿ ಗೊಂದಲ ಮೂಡಿಸುವ ಸಮಾವೇಶ ಅಂತಾ ಟೀಕಿಸಿದ್ದಾರೆ.

ಚುನಾವಣೆಗೆ ಮೂರ್ನಾಲ್ಕು ತಿಂಗಳು ಬಾಕಿಯಿರುವಾಗಲೇ ಸಮಾವೇಶದ ಮೂಲಕ ರಾಜಕೀಯ ಚಟುವಟಿಕೆ ಆರಂಭಿಸಿರುವ ಕಾಂಗ್ರೆಸ್‌ಗೆ ಇದು ಎಷ್ಟರಮಟ್ಟಿಗೆ ಸಹಕಾರಿಯಾಗಲಿದೆ, ಪರೇಶ್ ಮೇಸ್ತಾ ಪ್ರಕರಣ ಕಾಂಗ್ರೆಸ್‌ಗೆ ಗೆಲುವು ತಂದುಕೊಡುತ್ತಾ ಅನ್ನೋದನ್ನ ಕಾದು ನೋಡಬೇಕು.

ಇದನ್ನೂ ಓದಿ: ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಬಿಜೆಪಿ ತಯಾರಿ ನಡೆಸುತ್ತಿದೆ : ಎನ್​ ಚೆಲುವರಾಯಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.