ETV Bharat / state

ಕರಾವಳಿಯಲ್ಲಿ ಕಳೆಗಟ್ಟಿದ ಸುಗ್ಗಿ ಕುಣಿತ: ಗುಮ್ಮಟೆ ಪಾಂಗಿನ ಸದ್ದಿಗೆ ಸಂಪ್ರದಾಯಿಕ ನೃತ್ಯ

author img

By

Published : Mar 5, 2023, 1:35 PM IST

ಉತ್ತರ ಕನ್ನಡ ಭಾಗದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಆಚರಿಸಲಾಗುವ ಸುಗ್ಗಿ ಕುಣಿತಕ್ಕೆ ಚಾಲನೆ ದೊರೆತಿದೆ.

suggi dance
ಕರಾವಳಿಯಲ್ಲಿ ಕಳೆಗಟ್ಟಿದ ಸುಗ್ಗಿ ಕುಣಿತ

ಕರಾವಳಿಯಲ್ಲಿ ಕಳೆಗಟ್ಟಿದ ಸುಗ್ಗಿ ಕುಣಿತ

ಕಾರವಾರ: ಹೋಳಿ ಸಮೀಪಿಸುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಸುಗ್ಗಿ ಸಂಭ್ರಮ ಕಳೆಗಟ್ಟಿದೆ. ಜಿಲ್ಲೆಯ ವಿಶೇಷ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾಗಿರುವ ಹೋಳಿ ಸುಗ್ಗಿಯ ಮೆರುಗು ಎಲ್ಲೆಡೆಯೂ ಕಂಡು ಬರುತ್ತಿದೆ. ಬಗೆಬಗೆ ವೇಷಧಾರಿಗಳು, ಕೋಲಾಟ, ಗುಮಟೆ ಪಾಂಗಿನ ಸದ್ದಿನೊಂದಿಗೆ ಭಿನ್ನ, ವಿಭಿನ್ನ ತುರಾಯಿಗಳನ್ನು ಧರಿಸಿ ಸಮುದಾಯದ ಮನೆಗಳ ಬಳಿ ತೆರಳಿ ಕುಣಿಯುವ ಮೂಲಕ ತಮ್ಮ ಸಂಪ್ರದಾಯವನ್ನು ಮುಂದುವರೆಸಿದ್ದಾರೆ.

ಜಿಲ್ಲೆಯ ಹಾಲಕ್ಕಿ, ಕೋಮಾರಪಂಥ, ಗ್ರಾಮ ಒಕ್ಕಲಿಗ, ನಾಮಧಾರಿ, ಅಂಬಿಗ, ಗುನಗಿ ಸೇರಿದಂತೆ ಅನೇಕ ಸಮಾಜದವರು ಸಾಂಪ್ರದಾಯಿಕ ಕಲೆಯಾದ ಸುಗ್ಗಿ ಕುಣಿತವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಾರಂಭಿಸಿದ್ದಾರೆ. ಹಬ್ಬಕ್ಕೆ ಏಳು, ಒಂಬತ್ತು ದಿನಗಳ ಮುನ್ನ ಸುಗ್ಗಿ ಕಟ್ಟುವ ತಂಡ, ಬಳಿಕ ಊರೂರು ತಿರುಗಿ ತಮ್ಮ ಸಮಾಜದವರ ಮನೆಗಳ ಮುಂದೆ ಕುಣಿದು ಪ್ರದರ್ಶನ ನಡೆಸುತ್ತಿದ್ದಾರೆ.

ಈ ಬಾರಿಯೂ ಕೂಡಾ ಕಾರವಾರ ತಾಲೂಕಿನ ಗುನಗಿ ಸಮಾಜದ ಸುಗ್ಗಿ ಕುಣಿತಕ್ಕೆ ಚಾಲನೆ ಸಿಕ್ಕಿದ್ದು, ತಮ್ಮ ಸಮುದಾಯದವರು ಇರುವಲ್ಲಿಗೆ ತೆರಳಿ ಸುಗ್ಗಿ ಕುಣಿತವನ್ನು ಪ್ರದರ್ಶಿಸುತ್ತಿದ್ದಾರೆ. ತಾಲೂಕಿನ ಚೆಂಡಿಯಾ ಗ್ರಾಮದ ಕರಿ ದೇವರಿಗೆ ಪೂಜೆ ಮಾಡಿ ಹೊರಟಿರುವ ಸುಗ್ಗಿ ಕುಣಿತದ ತಂಡದವರು, ಮನೆ ಮನೆಗೆ ತೆರಳಿ ತಮ್ಮ ಕಲೆಯನ್ನ ಅನಾವರಣ ಮಾಡುತ್ತಾರೆ.

"ಹೋಳಿ ಹುಣ್ಣಿಮೆಗೂ ಏಳು ದಿನಗಳ ಮುಂಚೆ ಸುಗ್ಗಿ ಕುಣಿತವನ್ನು ಪ್ರಾರಂಭಿಸುವುದು ಗುನಗಿ ಸಮಾಜದವರಲ್ಲಿ ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ. ತಮ್ಮ ಜನಾಂಗದವರು ನೆಲೆಸಿರುವ ಮನೆಗಳ ಮುಂದೆ ಕುಣಿತ ಮಾಡುವುದರಿಂದ ಜನರಿಗೆ ಎದುರಾಗಿರುವ ಸಮಸ್ಯೆ, ತೊಂದರೆಗಳು ಬಗೆಹರಿಯುವುದರ ಜೊತೆಗೆ ಯಾವುದೇ ರೋಗಗಳು ಬರದಂತೆ ತಡೆಯುತ್ತದೆ ಎಂನ ನಂಬಿಕೆ ಇದೆ. ಇದು ಅನಾದಿ ಕಾಲದಿಂದಲೂ ನಡೆದುಕೊಂಡ ಬಂದ ಪ್ರಕ್ರಿಯೆಯಾಗಿದೆ. ಗುನಗಿ ಸಮಾಜದವರು ಕೊರೊನಾ ಸೇರಿದಂತೆ ಕೆಲ ಕಾರಣಗಳಿಂದ ಕಳೆದ ಕೆಲ ವರ್ಷಗಳಿಂದ ಸುಗ್ಗಿ ಆಡಿರಲಿಲ್ಲ. ಆದರೆ, ಈ ಬಾರಿ ಊರುರು ಸುತ್ತುತ್ತಾ ಸುಗ್ಗಿ ಆಡುತ್ತಿದ್ದಾರೆ" ಎನ್ನುತ್ತಾರೆ ಸಮುದಾಯದ ಹಿರಿಯರೊಬ್ಬರು.

ಇದನ್ನೂ ಓದಿ: ಕಾರವಾರ : ಸುಗ್ಗಿ ವೇಷದಾರಿಯಿಂದ ಕೊರೊನಾ ಜಾಗೃತಿ

"ಈ ಸುಗ್ಗಿ ಕುಣಿತಕ್ಕೆ ತನ್ನದೇ ಆದ ವಿಶೇಷತೆ ಇದೆ. ಇಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು, ತಲೆಗೆ ಬಣ್ಣ ಬಣ್ಣದ ತುರಾಯಿ, ಪೇಟವನ್ನ ಕಟ್ಟಿ, ಪೊಗಡೆ ವೇಷಭೂಷಣ ಧರಿಸಿ ಸುಗ್ಗಿ ಕುಣಿಯುವುದು ಎಲ್ಲರ ಮನ ಸೆಳೆಯುತ್ತದೆ. ಇದರೊಂದಿಗೆ ಗುಮಟೆ, ಜಾಗಟೆಯ ಸದ್ದು, ವಾದ್ಯಗಳ ಹಿಮ್ಮೇಳ ಸುಗ್ಗಿ ಕುಣಿತಕ್ಕೆ ಇನ್ನಷ್ಟು ಮೆರಗು ನೀಡುತ್ತದೆ. ಒಮ್ಮೆ ವೇಷತೊಟ್ಟು ಹಣೆಗೆ ಗಂಧವನ್ನ ಇಟ್ಟುಕೊಂಡು ಹೊರಟರೆ ಸುಗ್ಗಿ ಕುಣಿತ ಮುಗಿಸುವ ಏಳು ದಿನದವರೆಗೂ ವಾಪಸ್ ಮನೆಗೆ ತೆರಳುವಂತಿಲ್ಲ. ಜೊತೆಗೆ, ಸಮಾಜದ ಮನೆಯವರ ಅಂಗಳದಲ್ಲಿ ಸುಗ್ಗಿ ಕುಣಿತ ಮಾಡಿದಾಗ ಅವರು ನೀಡುವ ಹಣ, ಊಟ ತಿಂಡಿ ಸ್ವೀಕರಿಸುವ ಪ್ರತೀತಿ ಇದೆ. ಸುಗ್ಗಿ ಆಡುವ ತಂಡದವರು ಒಂದು ತಿಂಗಳ ಮೊದಲೇ ತಯಾರಿಯನ್ನ ಆರಂಭಿಸುತ್ತಾರೆ. ಸುಗ್ಗಿ ಆಡುವಾಗ ತಲೆಯ ಮೇಲೆ ಹೊರುವ ತುರಾಯಿಗಳು ಎಷ್ಟಿರಬೇಕು ಎಂದು ನಿಗದಿಪಡಿಸಿಕೊಂಡು ಬಳಿಕ ಅವುಗಳನ್ನ ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಇದಾದ ಬಳಿಕ ಕುಣಿತವನ್ನ ಪ್ರದರ್ಶನ ಮಾಡಲಾಗುತ್ತದೆ. ಹೋಳಿಯ ದಿನದಂದು ಕರಿ ದೇವರಿಗೆ ಪೂಜೆ ಸಲ್ಲಿಸಿ, ತುರಾಯಿಗಳನ್ನ ದೇವರಿಗೆ ಅರ್ಪಿಸಿದ ಬಳಿಕವೇ ಸುಗ್ಗಿ ಕುಣಿತವನ್ನ ಕೊನೆಗೊಳಿಸಲಾಗುತ್ತದೆ" ಎನ್ನುತ್ತಾರೆ ತಂಡದ ಜೋಗೀಂದ್ರ ಗುನಗಿ.

ಇದನ್ನೂ ಓದಿ: ಕರಾವಳಿಯಲ್ಲಿ ಸುಗ್ಗಿ ಸಂಭ್ರಮ: ಹಾರ ತುರಾಯಿ ತೊಟ್ಟು ವೇಷಧಾರಿಗಳ ಕುಣಿತ

ಜಾನಪದ ಕಲೆಗಳು ವಿನಾಶದ ಅಂಚಿನಲ್ಲಿರುವ ಈ ದಿನಗಳಲ್ಲಿ ತಲೆತಲಾಂತರಗಳಿಂದ ಬಂದಿರುವ ಸಾಂಪ್ರದಾಯಿಕ ಸುಗ್ಗಿ ಕುಣಿತದ ಕಲೆಯನ್ನು ಇಂದಿಗೂ ನಡೆಸಿಕೊಂಡು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಸುಗ್ಗಿಯಲ್ಲಿ ಮಕ್ಕಳು, ಯುವಕರೂ ಸಹ ಹಿರಿಯರೊಂದಿಗೆ ಒಟ್ಟಾಗಿ ಪಾಲ್ಗೊಳ್ಳುವುದರಿಂದ ಮುಂದಿನ ಪೀಳಿಗೆಗೂ ಆಚರಣೆಗಳನ್ನ ತಿಳಿಸಿ ಕೊಡುವಲ್ಲಿ ಸುಗ್ಗಿ ಕುಣಿತ ಸಹಕಾರಿಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.