ವಿಜಯಪುರ : ಸಿಂದಗಿ ಮತಕ್ಷೇತ್ರದ ಉಪ ಚುನಾವಣಾ( Sidhagi By election result) ಫಲಿತಾಂಶದಲ್ಲಿ ನಮ್ಮ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ. ಮತದಾರರ ತೀರ್ಪಿಗೆ ನಾವು ತಲೆಬಾಗಬೇಕು ಎಂದು ಮಾಜಿ ಸಚಿವ ಎಂ ಬಿ ಪಾಟೀಲ( MB Patil) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿ ಸರ್ಕಾರ ಸಚಿವರನಿಟ್ಟು ಹಣದ ಹೊಳೆ ಹರಿಸಿ ಚುನಾವಣೆ ಗೆದ್ದಿದೆ. ಆದರೂ ಸೋಲಿಗೆ ತಲೆಬಾಗುತ್ತೇವೆ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದರು.
ಹಿಂದಿನ ಚುನಾವಣೆಗಳನ್ನು ಗಮನಿಸಿದರೆ ಮೂರು ಪಟ್ಟು ಹೆಚ್ಚಿನ ಮತಗಳನ್ನು ನಾವು ಈ ಬಾರಿ ಪಡೆದಿದ್ದೇವೆ. ಅಲ್ಲಿ ಸುಮಾರು 60 ಸಾವಿರದಷ್ಟು ಮತಗಳನ್ನು ಪಡೆದಿದ್ದೇವೆ. ಮುಂಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ 8 ವಿಧಾನ ಸಭಾ ಮತಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ (Siddaramaiah) ವಿರುದ್ದ ಬಿಜೆಪಿ ಹೋರಾಟ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯನವರು ದಲಿತರ ಬಗ್ಗೆ ಮಾತನಾಡಿಲ್ಲ. ಅವರಿಗೆ ಇರುವಷ್ಟು ದಲಿತರ ಬಗ್ಗೆ ಇರುವ ಕಾಳಜಿ ಬೇರೆ ಯಾರಿಗೂ ಇಲ್ಲ.
ದಲಿತರನ್ನು ಉಪಯೋಗಿಸಿಕೊಂಡು ರಾಜಕಾರಣ ಮಾಡಬಾರದು ಎಂದು ಹೇಳಿದ್ದಾರೆ. ಬಿಜೆಪಿಯವರು ಇದನ್ನು ರಾಜಕೀಯವಾಗಿ ಬಳಸಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.