ನಾವು ಮಾಡಿದ ಕಾರ್ಯಗಳಿಂದ ಬೇರೆಯವರು ಪ್ರಚಾರ ಪಡೆಯುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

author img

By

Published : Sep 18, 2022, 2:20 PM IST

MLA Priyank Kharge speak in gurumathakal

ಮಲ್ಲಿಕಾರ್ಜುನ ಖರ್ಗೆಯವರ ಅವಧಿಯಲ್ಲಾದ ಅನೇಕ ಜನಪರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಇವೆ. ಆದರೆ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳ ಬೆಳವಣಿಗೆಗೆ ಸಹಕಾರ ನೀಡುತ್ತಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಗುರುಮಠಕಲ್: ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯವರ ದೂರದೃಷ್ಟಿಯ ಪರಿಣಾಮದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ಆಗಿವೆ. ಇದರ ಪ್ರಸಿದ್ಧಿಯನ್ನು ಬೇರೆಯವರು ಪಡೆಯುತ್ತಿದ್ದಾರೆ ಎಂದು ಚಿತ್ತಾಪೂರ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಸಹಕಾರ ಇಲ್ಲ: ಪಟ್ಟಣದ ಸರ್ಕ್ಯೂಟ್ ಹೌಸ್​ನಲ್ಲಿ ಆಯೋಜಿಸಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಕನಸನ್ನು ಕಂಡವರು ಮಲ್ಲಿಕಾರ್ಜುನ ಖರ್ಗೆಯವರು. ಅವರ ಅವಧಿಯಲ್ಲಾದ ಅನೇಕ ಜನಪರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಇವೆ. ಆದರೆ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳ ಬೆಳವಣಿಗೆಗೆ ಸಹಕಾರ ನೀಡುತ್ತಿಲ್ಲ. ನಂಜುಂಡಪ್ಪ ವರದಿ ಪ್ರಕಾರ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಕೆಕೆಆರ್ ಡಿಬಿಗೆ ನಿಗದಿಪಡಿಸಿದ ಪೂರ್ತಿ ವಿಶೇಷ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಶಾಸಕ ಪ್ರಿಯಾಂಕ್ ಖರ್ಗೆ

ಅಭಿವೃದ್ಧಿಗೆ ಆದ್ಯತೆ: ಗುರುಮಠಕಲ್ ಮತಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷವು ಬಲಹೀನವಾಗಿಲ್ಲ. ಇಂದಿಗೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಮ್ಮ ಸಂಪರ್ಕದಲ್ಲಿದ್ದಾರೆ. ಮೂಲ ಕಾಂಗ್ರೆಸಿಗರನ್ನು ಯಾವತ್ತೂ ಕೈ ಬಿಡುವ ಪ್ರಶ್ನೆ ಇಲ್ಲ. ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ 3-4 ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಪೂರ್ವ ವೈಭವವನ್ನು ನೀಡಲಾಗುವುದು. ಪ್ರಸಕ್ತ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕದ ಅನೇಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ಇದನ್ನೂ ಓದಿ: ಚಿತ್ತಾಪುರ ಮತಕ್ಷೇತ್ರವನ್ನು ಬಿಜೆಪಿ ನಾಯಕರು ಟಾರ್ಗೆಟ್ ಮಾಡಿದ್ದಾರೆ: ಶಾಸಕ ಪ್ರಿಯಾಂಕ್ ಖರ್ಗೆ

ಚುನಾವಣೆಯಲ್ಲಿ ಗುರುಮಠಕಲ್ ಮತಕ್ಷೇತ್ರದಿಂದ ಖರ್ಗೆ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ. ಗುರುಮಠಕಲ್ ಮತಕ್ಷೇತ್ರದ ಜನತೆಯ ಜೊತೆ ಇಂದಿಗೂ ಖರ್ಗೆ ಕುಟುಂಬ ಅವಿನಾಭಾವ ಸಂಬಂಧವನ್ನು ಹೊಂದಿದೆ. ಮತಕ್ಷೇತ್ರದ ಜನರ ಆಶೀರ್ವಾದ ಸದಾ ನಮ್ಮ ಮೇಲಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.