ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ 15 ಜೋಡಿಗಳು
ಧಾರ್ಮಿಕ ದತ್ತಿ ಇಲಾಖೆಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನೇರವೇರಿಸಿತು. ಸಾಮೂಹಿಕ ವಿವಾಹದಲ್ಲಿ 15 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಡವರ ಮದುವೆ ಖರ್ಚಿನ ಹೊರೆ ಕಡಿಮೆ ಮಾಡುವ ಸಲುವಾಗಿ ಸರ್ಕಾರ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅಯೋಜಿಸಿದೆ. ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಲಾಗುತ್ತಿದೆ. ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ಇಂದು ಬೆಳಗ್ಗೆ 9 ರಿಂದ 9:50ರವರೆಗಿನ ಕನ್ಯಾ ಲಗ್ನದಲ್ಲಿ 15 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ದೇವಸ್ಥಾನದ ಆಡಳಿತ ಮಂಡಳಿಯಿಂದ ಮದುವೆ ಖರ್ಚಿಗಾಗಿ ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ನಗದು ಹಣ ಹಾಗೂ 40 ಸಾವಿರ ಮೌಲ್ಯದ ಚಿನ್ನದ ತಾಳಿ ಕೊಡಲಾಗಿದೆ. ಈ ಸಂದರ್ಭ ಶಾಸಕರಾದ ಟಿ.ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ಅಪರ ಜಿಲ್ಲಾಧಿಕಾರಿ ವಿಜಯ ಈ ರವಿಕುಮಾರ್, ತಹಶೀಲ್ದಾರ್ ಮೋಹನಕುಮಾರಿ ನವಜೋಡಿಗಳಿಗೆ ಶುಭ ಹಾರೈಸಿದರು.