ETV Bharat / bharat

300ಕ್ಕೂ ಹೆಚ್ಚು ಸ್ಥಾನ ಗೆದ್ದು 'ಇಂಡಿಯಾ' ಮೈತ್ರಿಕೂಟ ಸರ್ಕಾರ ರಚಿಸಲಿದೆ: ಉತ್ತರ ಪ್ರದೇಶದಲ್ಲಿ ಡಿಕೆಶಿ ಹೇಳಿಕೆ - DK Shivakumar in Lucknow

author img

By ETV Bharat Karnataka Team

Published : May 16, 2024, 6:35 PM IST

ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ ವಿಚಾರವಾಗಿ ಪ್ರಧಾನ ಮಂತ್ರಿಗಳು ಮಾಡುತ್ತಿರುವ ಆರೋಪ ಆಧಾರರಹಿತವಾಗಿದೆ. ಮುಸಲ್ಮಾನರಿಗೆ ಕಳೆದ 30 - 40 ವರ್ಷಗಳಿಂದ ಮೀಸಲಾತಿ ನೀಡಲಾಗಿದೆ. ರಾಜಕೀಯ ಉದ್ದೇಶಕ್ಕೆ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಲಖನೌನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Karnataka DCM DK Shivakumar Addresses Press Conference in Lucknow
ಉತ್ತರ ಪ್ರದೇಶದ ಲಖನೌನಲ್ಲಿ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. (ETV Bharat)

ಬೆಂಗಳೂರು/ಲಖನೌ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟವು 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, 'ಇಂಡಿಯಾ' ಮೈತ್ರಿಕೂಟ 300 ಸ್ಥಾನ ದಾಟಿದರೆ, ಬಿಜೆಪಿಯ ಎನ್​ಡಿಎ 200 ಸ್ಥಾನದ ಆಸುಪಾಸಿನಲ್ಲಿರಲಿದೆ. ಈ ಬಾರಿ ಕೇಂದ್ರದಲ್ಲಿ ನಮ್ಮ ಮೈತ್ರಿಕೂಟ ಸರ್ಕಾರ ರಚಿಸುವುದು ಖಚಿತ ಎಂದು ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆಯು ಜನರನ್ನು ಪ್ರಮುಖವಾಗಿ ಕಾಡುತ್ತಿರುವ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ಕರ್ನಾಟಕ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು ಎಂದು ಅವರು ತಿಳಿಸಿದರು.

ಅದರಂತೆ, ಕರ್ನಾಟಕದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಮೂಲಕ 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಅಲ್ಲದೇ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ 'ಇಂಡಿಯಾ' ಮೈತ್ರಿಕೂಟ ರಚನೆಯಾಯಿತು. ತೆಲಂಗಾಣ ಚುನಾವಣೆಯಲ್ಲೂ ನಾವು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಆ ಪೈಕಿ ಬಹುತೇಕ ಜಾರಿಯಾಗಿವೆ. ಕೆಲವು ಜಾರಿ ಪ್ರಕ್ರಿಯೆಯಲ್ಲಿವೆ ಎಂದು ವಿವರಿಸಿದರು.

ಕೇಂದ್ರದಲ್ಲೂ ಕಾಂಗ್ರೆಸ್ ಗ್ಯಾರಂಟಿ: ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಂದರೆ ಅಧಿಕಾರಿಕ್ಕೆ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕಾಂಗ್ರೆಸ್ ಘೋಷಿಸಿದೆ. ಐದು ನ್ಯಾಯ ಯೋಜನೆಗಳ ಮೂಲಕ ಒಟ್ಟಾರೆ 25 ಗ್ಯಾರಂಟಿಗಳನ್ನು ಪ್ರಕಟಿಸಿದ್ದು, ಮಹಾಲಕ್ಷ್ಮೀ ಯೋಜನೆ ಮೂಲಕ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ ಒಂದು ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, ರೈತರ ಸಾಲ ಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ, ನರೇಗಾ ಕೂಲಿ 400 ರೂ.ಗೆ ಏರಿಕೆ, ನಗರ ಪ್ರದೇಶದಲ್ಲೂ ಉದ್ಯೋಗ ಖಾತ್ರಿ, 25 ಲಕ್ಷ ವರೆಗಿನ ಆರೋಗ್ಯ ವಿಮೆ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈ ಗ್ಯಾರಂಟಿ ಕಾರ್ಡ್​ಗೆ ಸಹಿ ಹಾಕಿದ್ದು, ನಾವು ಪ್ರಣಾಳಿಕೆಯಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ. ನಾವು ಬಸವಣ್ಣನ ನಾಡಿನಿಂದ ಬಂದಿದ್ದು, ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದರು. ಇದೇ ವೇಳೆ, ಕರ್ನಾಟಕದ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲೂ ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಖರ್ಗೆ ಘೋಷಿಸಿದ್ದು, ಈ ಯೋಜನೆಗಳನ್ನು ನಾವು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮೋದಿ ಅವರು ಮಂಗಳಸೂತ್ರದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ 25 ಸಾವಿರ ಇತ್ತು. ಈಗ 10 ವರ್ಷಗಳ ನಂತರ ಅದು 75 ಸಾವಿರಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಮಹಿಳೆಯರು ಮಂಗಳಸೂತ್ರ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿಗಳ ಹೇಳಿಕೆ ನಿಜಕ್ಕೂ ಖಂಡನೀಯ ಎಂದು ಅವರು ಕಿಡಿಕಾರಿದರು.

ಕೊಟ್ಟ ಮಾತು ಉಳಿಸಿಕೊಳ್ಳದ ಬಿಜೆಪಿ: ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಜನಸಾಮಾನ್ಯರ ಹಸಿವು ನೀಗಿಸಲು, ಅವರ ಸಂಕಷ್ಟಗಳಿಗೆ ಪರಿಹಾರ ನೀಡಲು ಇಂತಹ ಒಂದೇ ಒಂದು ಯೋಜನೆ ನೀಡಿದ್ದೀರಾ ಎಂದು ಪ್ರಧಾನಮಂತ್ರಿ ಮತ್ತು ಅವರ ಪಕ್ಷದ ನಾಯಕರು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಕೇಳಬಯಸುತ್ತೇನೆ. ಜನರ ಕಷ್ಟಗಳಿಗೆ ಪರಿಹಾರ ನೀಡಲು ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಿವಕುಮಾರ್ ಟೀಕಿಸಿದರು.

ಮುಸ್ಲಿಮರ ಮೀಸಲಾತಿ ಬಗ್ಗೆ ಮೋದಿ ಸುಳ್ಳು ಆರೋಪ: ಮುಸ್ಲಿಮರ ಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪ್ರಧಾನ ಮಂತ್ರಿಗಳು ಮುಸ್ಲಿಂ ಮೀಸಲಾತಿ ವಿಚಾರವಾಗಿ ಮಾಡುತ್ತಿರುವ ಆರೋಪ ಆಧಾರರಹಿತವಾಗಿದೆ. ಮುಸಲ್ಮಾನರಿಗೆ ಕಳೆದ 30 - 40 ವರ್ಷಗಳಿಂದ ಮೀಸಲಾತಿ ನೀಡಲಾಗಿದೆ. ರಾಜಕೀಯ ಉದ್ದೇಶಕ್ಕೆ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವೆಲ್ಲರೂ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲ ವರ್ಗದ ಜನರ ರಕ್ಷಣೆ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ಹೀಗಾಗಿ ನಾವು ಎಲ್ಲ ವರ್ಗದ ಜನರ ರಕ್ಷಣೆ ಮಾಡಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಇದೇ ವೇಳೆ , ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ಪ್ರಕರಣ ಇಡೀ ದೇಶವೇ ತಲೆತಗ್ಗಿಸುಂವತೆ ಮಾಡಿದೆ. ಬಿಜೆಪಿ ಸ್ನೇಹಿತರು, ಎನ್​ಡಿಎ ಮೈತ್ರಿಕೂಟದ ಪಕ್ಷದ ಸಂಸದನಿಂದ ಈ ಕೃತ್ಯ ನಡೆದಿದ್ದು, ಈ ಪ್ರಕರಣದಲ್ಲಿ ಮೋದಿ ಅವರು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದ್ದಾರೆ. ಕೇಂದ್ರ ಸರ್ಕಾರ ಆತನಿಗೆ ಪಾಸ್ ಪೋರ್ಟ್ ವಿತರಣೆ ಮಾಡಿದೆ. ನಾವು ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದು, ಆತನನ್ನು ಬಂಧಿಸುತ್ತೇವೆ ಎಂದು ಸ್ಪಷ್ಪಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್​ ಬಜೆಟ್​ನಲ್ಲಿ ಶೇ. 15ರಷ್ಟು ಹಣವನ್ನು ಮುಸ್ಲಿಂ ಸಮುದಾಯಕ್ಕೆ ಮೀಸಲಿಡಲು ಯೋಜಿಸಿದೆ : ನರೇಂದ್ರ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.