ETV Bharat / bharat

ಕೆಫೆ ಸ್ಫೋಟ ಕೇಸ್: ಪ್ರಮುಖ ಆರೋಪಿ, ಸಹ ಸಂಚಕೋರ ಇಬ್ಬರೂ ಶಿವಮೊಗ್ಗದವರು; ಸ್ನೇಹಿತರು, ಪರಿಚಯಸ್ಥರ ವಿಚಾರಣೆ - Cafe Blast Case

author img

By PTI

Published : Apr 5, 2024, 8:23 PM IST

NIA identifies key accused, co-conspirator in Rameshwaram Cafe blast case
ಕೆಫೆ ಸ್ಫೋಟದ ಪ್ರಮುಖ ಆರೋಪಿ, ಸಹ ಸಂಚುಕೋರನ ಗುರುತು ಪತ್ತೆ; NIAನಿಂದ ಸ್ನೇಹಿತರು, ಪರಿಚಯಸ್ಥರ ವಿಚಾರಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಸಹ ಸಂಚುಕೋರನನ್ನು ಗುರುತಿಸಲಾಗಿದೆ. ಆರೋಪಿಗಳ ಕಾಲೇಜು ಮತ್ತು ಶಾಲಾ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್ಐಎ ತಿಳಿಸಿದೆ.

ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ನಡೆದ​ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಹತ್ವದ ಮಾಹಿತಿ ಬಹಿರಂಗಪಡಿಸಿದೆ. ಈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂದು ತನಿಖಾ ಸಂಸ್ಥೆ ಗುರುತಿಸಿದೆ.

ಇಬ್ಬರೂ ತೀರ್ಥಹಳ್ಳಿಯವರು: ಬೆಂಗಳೂರಿನ ಬ್ರೂಕ್‌ಫೀಲ್ಡ್‌ನ ಐಟಿಪಿಎಲ್ ರಸ್ತೆಯಲ್ಲಿರುವ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದರು. ಈ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್, ಅಬ್ದುಲ್ ಇಬ್ಬರೂ ಕೂಡ ಶಿವಮೊಗ್ಗದ ತೀರ್ಥಹಳ್ಳಿಯವರಾಗಿದ್ದಾರೆ. ತಲೆಮರೆಸಿಕೊಂಡಿರುವ ಇವರ ಪತ್ತೆ ಹಚ್ಚುವ ಮತ್ತು ಬಂಧಿಸುವ ನಿಟ್ಟಿನಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ಇದಲ್ಲದೆ, ಪ್ರಮುಖ ಆರೋಪಿಗಳಿಗೆ ಸ್ಫೋಟಕ ಸಾಮಗ್ರಿ ಪೂರೈಸಿದ ಚಿಕ್ಕಮಗಳೂರಿನ ಕಳಸಾ ನಿವಾಸಿ ಮುಝಮ್ಮಿಲ್ ಶರೀಫ್ ಎಂಬಾತನನ್ನು ಮಾರ್ಚ್ 26ರಂದು ಬಂಧಿಸಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಈತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಸಾಕ್ಷ್ಯಗಳು ಮತ್ತು ಮಾಹಿತಿಗಳನ್ನು ಸಂಗ್ರಹಿಸಲು ಎನ್‌ಐಎ ತಲೆಮರೆಸಿಕೊಂಡಿರುವ ಮತ್ತು ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ ಎಂದೂ ವಕ್ತಾರರು ತಿಳಿಸಿದ್ದಾರೆ.

ಇದು ಭಯೋತ್ಪಾದಕ ಘಟನೆಯಾಗಿರುವುದರಿಂದ ಸಾಕ್ಷಿಗಳ ಗುರುತಿನ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗುವುದರ ಜತೆಗೆ ಅವರನ್ನು ಅಪಾಯಕ್ಕೆ ತಳ್ಳಬಹುದು. ಅಲ್ಲದೇ, ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೂ ಅಡ್ಡಿಯಾಗಿವೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರವನ್ನು ಎನ್‌ಐಎ ಕೋರಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ಕೆಫೆ ಸ್ಫೋಟ: ಇಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ; ಎನ್ಐಎ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.