ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಇಲ್ಲಿನ ದಕ್ಷಿಣ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ದೊಡ್ಡ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 6 ಜನರು ಸಾವನ್ನಪ್ಪಿದ್ದಾರೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಚಂದ್ರನಾಥ್ ಬಾನಿಕ್ ಅವರಿಗೆ ಸೇರಿದ ನಿವಾಸದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ದೊಡ್ಡ ಸ್ಫೋಟ ಉಂಟಾಗಿದೆ. ಸದ್ದು ಕೇಳಿದ ಜನರು ಸ್ಥಳಕ್ಕೆ ತಲುಪುವಷ್ಟರಲ್ಲಿ ಇಡೀ ಮನೆ ಬೆಂಕಿಯಿಂದ ಹೊತ್ತಿ ಉರಿದಿದೆ.
ತಕ್ಷಣವೇ ಜನರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಳಿಕ, ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ. ಅಗ್ನಿಶಾಮಕ ದಳ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ನಿರತವಾಗಿದೆ.
ಮೃತರಲ್ಲಿ ಮೂವರು ಮಕ್ಕಳು: ಲಭ್ಯವಿರುವ ಮಾಹಿತಿಯ ಪ್ರಕಾರ, ದುರ್ಘಟನೆಯಲ್ಲಿ ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ. ಒಟ್ಟು 6 ಸುಟ್ಟ ದೇಹಗಳನ್ನು ಮನೆಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವ ಕಾರಣ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ತೃಣಮೂಲ ಕಾಂಗ್ರೆಸ್ ಶಾಸಕ ಸಮೀರ್ ಅವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಅವರು ಕೂಡ ಆರು ಮಂದಿ ಸಾವಿಗೀಡಾದ ಬಗ್ಗೆ ದೃಢೀಕರಿಸಿದ್ದಾರೆ.
ಪಟಾಕಿ ಕಾರ್ಖಾನೆಗಳ ಸರಣಿ ಸ್ಫೋಟ: ಕಳೆದ ಎರಡು ವರ್ಷಗಳಿಂದ, ಪಶ್ಚಿಮಬಂಗಾಳದಲ್ಲಿ ಅಕ್ರಮ ಪಟಾಕಿ ಕಾರ್ಖಾನೆ ಅಥವಾ ಗೋದಾಮು ಸರಣಿ ಸ್ಫೋಟಗಳು ಸಂಭವಿಸುತ್ತಿವೆ. ಈ ವರ್ಷದ ಫೆಬ್ರವರಿಯಲ್ಲಿ, ನಾಡಿಯಾ ಜಿಲ್ಲೆಯ ಕಲ್ಯಾಣಿಯಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು.
2023 ರಲ್ಲಿ, ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಬಲಿಯಾಗಿದ್ದರು. ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯ ಬಡ್ಜ್ ಬಡ್ಜ್ ಮತ್ತು ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್ನಲ್ಲಿ ಇದೇ ರೀತಿಯ ಸ್ಫೋಟಗಳು ಸಂಭವಿಸಿ ಹಲವು ಜನರು ಸಾವನ್ನಪ್ಪಿದ್ದಾರೆ.
ಸರಣಿ ಸ್ಫೋಟಗಳು ಸಂಭವಿಸುತ್ತಿದ್ದರೂ, ಸರ್ಕಾರ ಮತ್ತು ಪೊಲೀಸ್ ಆಡಳಿತವು ಕಠಿಣ ಕ್ರಮ ಜಾರಿ ಮಾಡಿಲ್ಲ. ಅಕ್ರಮ ಪಟಾಕಿ ಘಟಕಗಳಿಗೆ ಎಚ್ಚರಿಕೆ, ಪೊಲೀಸರ ದಾಳಿ ನಡೆಸಿದರೂ, ಯಾವುದೇ ಪರಿಣಾಮ ಬೀರುತ್ತಿಲ್ಲ ಎಂಬ ಆರೋಪವೂ ಇದೆ.
ಇದನ್ನೂ ಓದಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ; ಮೂವರು ಮಕ್ಕಳು ಸೇರಿ 5 ಮಂದಿ ಸಜೀವ ದಹನ, ಕುಟುಂಬಸ್ಥರ ಆಕ್ರಂದನ
ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ : ಓರ್ವ ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ