ETV Bharat / state

ಚನ್ನಗಿರಿ ಪೊಲೀಸ್​ ಠಾಣೆ ಧ್ವಂಸ ಪ್ರಕರಣ: 25 ಆರೋಪಿಗಳನ್ನು ಬಂಧಿಸಿದ ಪೊಲೀಸರು - police station vandalism case

author img

By ETV Bharat Karnataka Team

Published : May 26, 2024, 7:14 PM IST

ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ, ವಾಹನಗಳ ಜಖಂ ಮಾಡಿರುವ ಪ್ರಕರಣದಲ್ಲಿ 25 ಮಂದಿ ಆರೋಪಿಗಳನ್ನ ಬಂಧಿಸಲಾಗಿದೆ.

25 ಆರೋಪಿಗಳನ್ನ ಬಂಧಿಸಿದ ಪೊಲೀಸರು
25 ಆರೋಪಿಗಳನ್ನ ಬಂಧಿಸಿದ ಪೊಲೀಸರು (ETV Bharat)

ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಪ್ರಕರಣ ಸಂಬಂಧ 25 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ವಿಚಾರಣೆಗೆ ಕರೆತಂದ ವೇಳೆ ಆದಿಲ್​ ಎಂಬ ವ್ಯಕ್ತಿ ಸಾವನ್ನಪ್ಪಿದ ಕಾರಣ ಕೋಪಗೊಂಡ ಸಂಬಂಧಿಕರು ಹಾಗೂ ಉದ್ರಕ್ತ ಗುಂಪು ಪೊಲೀಸ್ ಠಾಣೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸರ ಮೇಲೆ ದಾಳಿ ಮತ್ತು ಸಾರ್ವಜನಿಕ ಸ್ವತ್ತುಗಳನ್ನು ಧ್ವಂಸಗೊಳಿಸಿದ್ದಕ್ಕಾಗಿ ಚನ್ನಗಿರಿ ಠಾಣೆಯಲ್ಲಿ 6 ಪ್ರಕರಣಗಳು ದಾಖಲಾಗಿದ್ದವು. ಈ 6 ಪ್ರಕರಣಗಳ ಪೈಕಿ 4 ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಘಟನೆ ಹಿನ್ನೆಲೆ ನಿಗಾ ವಹಿಸಿರುವ ಪೊಲೀಸ್​ ಇಲಾಖೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ.

ಕಾನೂನು, ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದರೆ ಕ್ರಮ: ಚನ್ನಗಿರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಧಾರ್ಮಿಕ ನಿಂದನೆ, ವ್ಯಕ್ತಿ ನಿಂದನೆಗಳತಂಹ ಪೋಸ್ಟ್​ಗಳು, ಪ್ರಚೋದನಕಾರಿ ಹೇಳಿಕೆಗಳು, ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಳ್ಳಬಾರದು ಎಂದು ಎಂದು ಪೊಲೀಸ್​ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಪೋಸ್ಟ್​ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಘಟನೆ ಬಗ್ಗೆ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, "ಈ ರೀತಿ ಘಟನೆ ಚನ್ನಗಿರಿ ಇತಿಹಾಸದಲ್ಲೇ ಮೊದಲು, ಆರಕ್ಷಕರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತನಿಖೆ ಆಗದೆ ಪೊಲೀಸ್​ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದರಿಂದ ಪೊಲೀಸರ ಧೈರ್ಯ ಕುಸಿದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು" ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ: ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳಿಂದ ಡ್ರಿಲ್, ಚುರುಕುಗೊಂಡ ತನಿಖೆ - Anjali murder case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.