ETV Bharat / state

ಪಾಕ್ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬಳ್ಳಾರಿಯಲ್ಲಿ ನಾಸಿರ್ ಹುಸೇನ್ ನಾಮಫಲಕಕ್ಕೆ ಮಸಿ ಬಳಿಯಲು ಯತ್ನ

author img

By ETV Bharat Karnataka Team

Published : Feb 28, 2024, 3:21 PM IST

Updated : Feb 28, 2024, 4:49 PM IST

ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಸಂಬಂಧಿಸಿದಂತೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿತು.

BJP protests  pro Pakistan slogan  ಪಾಕಿಸ್ತಾನ ಪರ ಘೋಷಣೆ ಆರೋಪ  ಬಿಜೆಪಿ ಪ್ರತಿಭಟನೆ
ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಪಾಕ್ ಪರ ಘೋಷಣೆ ಆರೋಪ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ದಾವಣಗೆರೆ, ಚಾಮರಾಜನಗರ, ತುಮಕೂರು, ಬಳ್ಳಾರಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕೆಲವೆಡೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮಂಗಳೂರು-ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಯತ್ನ: ಮಲ್ಲಿಕಟ್ಟೆಯಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಾಕುವ ಸುಳಿವು ಅರಿತ ಪೊಲೀಸರು ಕಚೇರಿಗೆ ಬಿಗಿ ಭದ್ರತೆ ಒದಗಿಸಿ, ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಬಿಜೆಪಿಗರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಂತೆ ಕಚೇರಿ ಮುಂಭಾಗದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದರು.

ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್​ದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು. ನಾಸಿರ್ ಹುಸೇನ್ ರಾಜೀನಾಮೆಗೆ ಒತ್ತಾಯಿಸಿದರು. "ಕಾಂಗ್ರೆಸ್ ದೇಶ ವಿರೋಧಿ ಹಾಗೂ ದೇಶದ್ರೋಹಿಗಳ ಪಕ್ಷ. ಇವರು ಅಧಿಕಾರಕ್ಕೆ ಬಂದಾಗಲೆಲ್ಲ ಇಂತಹ ಘಟನೆಗಳು ಮರುಕಳಿಸುತ್ತವೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, "ರಾಜ್ಯಸಭಾ ಸದಸ್ಯರ ಹಿಂಬಾಲಕರು ವಿಧಾನಸೌಧದಲ್ಲಿ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದು ಅಕ್ಷಮ್ಯ ಅಪರಾಧ. ಇದು ಕಾಂಗ್ರೆಸ್ ಸರ್ಕಾರದ ಅಧೋಗತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ನಿರಂತರವಾಗಿ ಅಧಿಕಾರದಲ್ಲಿರಲು ಏನೂ ಬೇಕಾದರೂ ಮಾಡಬಹುದು ಎಂಬುದಕ್ಕೆ ನಿನ್ನೆ ನಡೆದ ಘಟನೆಯೇ ಸಾಕ್ಷಿ. ಇದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳುತ್ತಾರೆ" ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರಾಜಣ್ಣ ಕೊರವಿ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದಾವಣಗೆರೆ- ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು‌. ಬಳಿಕ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಅಮರ್ ಜವಾನ್ ಉದ್ಯಾನವನದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂತನ ರಾಜ್ಯಸಭಾ ಸದಸ್ಯ ಡಾ.ನಾಸೀರ್ ಹುಸೇನ್ ಹಾಗು ಅವರ ಬೆಂಬಲಿಗರ ನಡೆಯನ್ನು ಖಂಡಿಸಿದರು.

ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುವಾಗ ಪೊಲೀಸರು ಹಾಗು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಹೀಗಿದ್ದರೂ ಕೆಲವು ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಕಡೆ ಓಡಿ ಹೋಗಿ ಮುತ್ತಿಗೆ ಹಾಕಲು ಯತ್ನಿಸಿದರು. ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದರು.

ನಾಸಿರ್ ಹುಸೇನ್ ಫೋಟೋ ಸುಡಲು ಯತ್ನ: ಚಾಮರಾಜನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು‌. ಇಲ್ಲಿನ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದರು. ನಾಸಿರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದಾಗ ಮಧ್ಯಪ್ರವೇಶಿಸಿದ ಪೊಲೀಸರು ಭಾವಚಿತ್ರಗಳನ್ನು ವಶಕ್ಕೆ ಪಡೆಯಲು ಮುಂದಾದರು. ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದರು. 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ, ಹೈಡ್ರಾಮವೇ ನಡೆದು ಪೊಲೀಸ್ ವಾಹನದ ಮುಂದೆ ಬಿಜೆಪಿ ಮುಖಂಡರು ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ- ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಯತ್ನ: ನಗರದಲ್ಲಿ ನಾಸೀರ್ ಹುಸೇನ್ ಕಚೇರಿಗೆ ಮುತ್ತಿಗೆ ಹಾಕಿ, ನಾಮಫಲಕ ಕಿತ್ತು ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಇದೇ ವೇಳೆ ಫಲಕಕ್ಕೆ ಮಸಿ ಬಳಿಯಲು ಯತ್ನಿಸಲಾಯಿತು. ಪೊಲೀಸರು ಇದ್ಯಾವುದಕ್ಕೂ ಅವಕಾಶ ಕಲ್ಪಿಸದೇ ಮಸಿ ಬಣ್ಣದ ಡಬ್ಬಿಯನ್ನು ವಶಕ್ಕೆ ಪಡೆದರು.

ತುಮಕೂರಿನಲ್ಲಿ ಪ್ರತಿಭಟನೆ: ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ನಗರದ ಭದ್ರಮ್ಮ ಚೌಲ್ಟ್ರಿ ವೃತ್ತದಲ್ಲಿರುವ ಪಕ್ಷದ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಸಂಸದ ಜಿ.ಎಸ್.ಬಸವರಾಜ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಬಿಗಿ ಬಂದೋಬಸ್ತ್​ ವ್ಯವಸ್ಥೆ ಕಲ್ಪಿಸಿದ್ದರು. ಕೆಲವು ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.

ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ: ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್​ ಸರ್ಕಾರ ಹಾಗೂ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ನಾಸೀರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದಾಗ ಮಧ್ಯಪ್ರವೇಶಿಸಿದ ಪೊಲೀಸರ ಜೊತೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು. ಬೆಂಕಿ ಹಚ್ಚಬಾರದು ಎಂದು ಪೊಲೀಸರು ಸೂಚನೆ ನೀಡಿದ್ದು, ಪೊಲೀಸರ ವಿರುದ್ದ ಧಿಕ್ಕಾರ ಕೂಗಿದರು. ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಡುವ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಬೆಳಗಾವಿಯಲ್ಲಿ ಬೀದಿಗಿಳಿದ ಕಾರ್ಯಕರ್ತರು: ಕೃತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿಯೂ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲೇ ದೇಶ ವಿರೋಧಿ ಘೋಷಣೆ ಕೂಗಿರುವ ನೀಚರನ್ನು ತಕ್ಷಣವೇ ಬಂಧಿಸಬೇಕು. ಸಾಕ್ಷಿಗಳೆಲ್ಲವೂ ಕಣ್ಮುಂದೆ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪಾಕ್‌ ಪರ ಘೋಷಣೆ ಆರೋಪ: ಸಮಗ್ರ ತನಿಖೆಯ ಅಗತ್ಯವಿದೆ ಎಂದ ಪರಮೇಶ್ವರ್

Last Updated :Feb 28, 2024, 4:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.