ETV Bharat / state

'ನೀರು ಉಳಿಸಿ ಬೆಂಗಳೂರು ಬೆಳೆಸಿ' ಅಭಿಯಾನಕ್ಕೆ ಚಾಲನೆ: ನೀರಿನ ಸಮರ್ಪಕ ಬಳಕೆಗೆ ಆ್ಯಪ್ ಬಿಡುಗಡೆ

author img

By ETV Bharat Karnataka Team

Published : Mar 14, 2024, 5:16 PM IST

ಎಲ್ಲೆಲ್ಲಿ ನೀರಿನ ಅಭಾವವಿದೆಯೋ ಅಲ್ಲಿ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ಪರಿಸ್ಥಿತಿಯಲ್ಲಿ ನೀರಿನ ಸಮರ್ಪಕ ಬಳಕೆಗೆ ಎಲ್ಲರೂ ಎಚ್ಚರಿಕೆಯಿಂದ ಜವಾಬ್ದಾರಿ ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

apps-launched-by-dcm-dk-shivakumar-for-bengaluru-water-crisis
ನೀರು ಉಳಿಸಿ ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಚಾಲನೆ: ನೀರಿನ ಸಮರ್ಪಕ ಬಳಕೆಗೆ ಆ್ಯಪ್ ಬಿಡುಗಡೆ

ಬೆಂಗಳೂರು: ''ಬರ ಪರಿಸ್ಥಿತಿಯಲ್ಲಿ ನೀವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಸಮರ್ಪಕವಾಗಿ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದು ಆಯೋಜಿಸಿದ್ದ ಬಿಡಬ್ಲ್ಯೂಎಸ್ಎಸ್​​ಬಿ ವತಿಯಿಂದ ಆರಂಭಿಸಿರುವ ''ನೀರು ಉಳಿಸಿ ಬೆಂಗಳೂರು ಬೆಳೆಸಿ'' ಅಭಿಯಾನಕ್ಕೆ ಚಾಲನೆ ನೀಡಿದ ಶಿವಕುಮಾರ್ ಅವರು, ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ ಹಾಗೂ ಜಲಸ್ನೇಹಿ ಆ್ಯಪ್​​ಗಳನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ''ಬೆಂಗಳೂರು ನಗರ ಈ ವರ್ಷ ಮಳೆ ಇಲ್ಲದೆ ತತ್ತರಿಸುತ್ತಿದೆ. ಬೆಂಗಳೂರಿನಲ್ಲಿ 6,900 ಕೊಳವೆ ಬಾವಿಗಳು ಬತ್ತಿದ್ದು, ಉಳಿದ 7 ಸಾವಿರ ಕೊಳವೆ ಬಾವಿಗಳು ಜೀವಂತವಾಗಿವೆ. ಹೀಗಾಗಿ, ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಹೊಸ ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಕು. ಆ ಕೊಳವೆಬಾವಿಗಳ ನೀರನ್ನು ಸರಿಯಾಗಿ ನಿಯಂತ್ರಿಸಿ ಸದ್ಬಳಕೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ'' ಎಂದರು.

''ಇಂದು ನಾಲ್ಕು ಆ್ಯಪ್​​ಗಳನ್ನು ಪರಿಚಯಿಸುತ್ತಿದ್ದು, ಯಾರೇ ಹೊಸ ಕೊಳವೆಬಾವಿ ಕೊರೆಯುವಾಗ ಬಿಡಬ್ಲ್ಯೂಎಸ್ಎಸ್​​ಬಿಯಿಂದ ಅನುಮತಿ ಪಡೆಯಬೇಕಾಗಿದೆ. ಹೆಚ್ಚುವರಿ ನೀರನ್ನು ಸರ್ಕಾರ ಯಾರಿಗೆ ಹಂಚಿಕೆ ಮಾಡಬೇಕು ಎಂದು ತೀರ್ಮಾನಿಸಲು ಹಾಗೂ ನೀರಿನ ಸಮರ್ಪಕ ಬಳಕೆಗೆ ಈ ಆ್ಯಪ್ ತರಲಾಗಿದೆ'' ಎಂದು ತಿಳಿಸಿದರು.

''ಕಳೆದ ಹತ್ತು ವರ್ಷಗಳಿಂದ ನೀರಿನ ದರ ಏರಿಕೆ ಮಾಡಿಲ್ಲ. ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ದಿನದಿಂದಲೇ ಬಿಡಬ್ಲ್ಯೂಎಸ್ಎಸ್​​ಬಿಗೆ ಶಕ್ತಿ ತುಂಬಲು ತೀರ್ಮಾನಿಸಿದ್ದೇನೆ. ಲೋಕಸಭೆ ಚುನಾವಣೆ ನಂತರ ನಾವು ನಮ್ಮದೇ ಆದ ತೀರ್ಮಾನ ಮಾಡಲಿದ್ದೇವೆ. ದೂರದೃಷ್ಟಿಯಿಂದ ನಾವು ಈ ತೀರ್ಮಾನ ಮಾಡುತ್ತೇವೆ'' ಎಂದು ಹೇಳಿದರು.

''ನಾವು ಬೆಂಗಳೂರಿನ ಕುಡಿಯುವ ನೀರಿಗಾಗಿ ''ನಮ್ಮ ನೀರು ನಮ್ಮ ಹಕ್ಕು'' ಹೋರಾಟ ಮಾಡಿಕೊಂಡು ಬಂದಿದ್ದೇವೆ. ನೀರನ್ನು ಉಳಿಸಿ, ಮುಂದಿನ ಪೀಳಿಗೆ ಕಣ್ಣೀರು ತಪ್ಪಿಸಲು ಶ್ರಮಿಸುತ್ತಿದ್ದೇವೆ. ಜಲ ರಕ್ಷಣೆಗಾಗಿ ಜನರಲ್ಲಿ ಅರಿವು ಮೂಡಿಸಬೇಕು. ಈ ಹಿನ್ನೆಲೆಯಲ್ಲಿ ನಮ್ಮ ಅಧಿಕಾರಿಗಳು ಹಗಲು-ರಾತ್ರಿ ಬೆಂಗಳೂರಿನ ಖಾಸಗಿ ಟ್ಯಾಂಕರ್​​ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರದಿಂದ ರಿಯಾಯಿತಿ ದರ ನಿಗದಿ ಮಾಡಲಾಗಿದೆ. ಆ ಮೂಲಕ ನೀರಿನ ಪೂರೈಕೆ ಹೆಸರಲ್ಲಿ ನಡೆಯುತ್ತಿದ್ದ ದಂಧೆಗೆ ಕಡಿವಾಣ ಹಾಕಲಾಗಿದೆ'' ಎಂದರು.

''ನಾವು ನೀರಿನ ಅಭಾವ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಚುನಾವಣೆ ಇದೆ ಎಂಬ ಕಾರಣಕ್ಕೆ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ರಾಜಕೀಯ ಮಾಡಲಾಗುತ್ತಿದೆ. ನಾವು ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಚುನಾವಣೆ ನೀತಿ ಸಂಹಿತೆ ಏನೇ ಬರಲಿ, ಕುಡಿಯುವ ನೀರಿನ ವಿಚಾರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಿ'' ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯವರು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.