ಬೆಂಗಳೂರು: ಮೆಟ್ರೋ ಕಾಮಗಾರಿ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಗಾಯಗೊಂಡು ಆಟೋ ಚಾಲಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ 12 ಗಂಟೆ ಸುಮಾರಿಗೆ ನಗರದ ಕೋಗಿಲು ಕ್ರಾಸ್ ಬಳಿ ಸಂಭವಿಸಿದೆ.
ಲಾರಿಯಲ್ಲಿ ಸಾಗಿಸುತ್ತಿದ್ದ ವಯಾಡಕ್ಟ್ (ಬೃಹತ್ ತಡೆಗೋಡೆ) ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಖಾಸಿಂ ಸಾಬ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳದಿದ್ದರಿಂದ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಡರಾತ್ರಿ ಏರ್ಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿಗೆ ಬಳಸಲು ವಯಾಡಕ್ಟ್ ಕೊಂಡೊಯ್ಯುತ್ತಿದ್ದ ಲಾರಿ ತಿರುವು ಪಡೆಯುವಾಗ ಅವಘಡ ಸಂಭವಿಸಿದೆ. ಅವಘಡದ ಮುನ್ಸೂಚನೆ ಅರಿತ ಪ್ರಯಾಣಿಕ ತಕ್ಷಣ ಆಟೋದಿಂದ ಇಳಿದಿದ್ದಾರೆ. ಆದರೆ ಖಾಸೀಂ ಸಾಬ್ ಇಳಿಯುವಷ್ಟರಲ್ಲಿ ವಯಾಡೆಕ್ಟ್ ಉರುಳಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿಡ್ಲಘಟ್ಟ ಮೂಲದ ಖಾಸೀಂ ಸಾಬ್ ಕುಟುಂಬ ಬೆಂಗಳೂರಿನಲ್ಲಿ ವಾಸವಿತ್ತು ಎಂದು ಸಹ ಚಾಲಕರು ಮಾಹಿತಿ ನೀಡಿದ್ದಾರೆ.
ಕ್ರೇನ್ ತರಿಸಿ ವಯಾಡಕ್ಟ್ ತೆರವು: ಅವಘಡವನ್ನು ಕಂಡ ಜನ ಕೂಡಲೇ ರಕ್ಷಣೆಗೆ ದಾವಿಸಿದ್ದರು. ಆದರೆ ಬೃಹದಾಕಾರದ ವಯಾಡಕ್ಟ್ ತೆರವುಗೊಳಿಸಲು ಕ್ರೇನ್ ಇರದ ಕಾರಣ ಪ್ರಯತ್ನ ವಿಫಲವಾಗಿದೆ. ಇದರಿಂದ ಆಕ್ರೋಶಗೊಂಡ ಜನ ಕಲ್ಲು ತೂರಾಟ ಸಹ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಎರಡು ಗಂಟೆಗಳ ಬಳಿ ಕ್ರೇನ್ ತರಿಸಿ ವಯಾಡಕ್ಟ್ ತೆರವುಗೊಳಿಸಿ ಮೃತದೇಹವನ್ನು ಹೊರ ತೆಗೆಯಲಾಗಿದೆ. ರಸ್ತೆಯಲ್ಲಿ ಸಂಚಾರ ನಿರ್ಬಂಧಿಸದೇ, ಭದ್ರತಾ ಕ್ರಮಗಳು ಇಲ್ಲದಿರುವುದರಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೀದರ್: ಜಡ್ಜ್ ಮನೆ ಕಳ್ಳತನ ಪ್ರಕರಣ, ಮೂವರು ಆರೋಪಿಗಳ ಬಂಧನ