ETV Bharat / state

ರಾಜ್ಯಸಭೆ ಮತದಾನದ ವೇಳೆಗೆ ಬರುತ್ತೇನೆ ಎಂದಿದ್ದರು, ವಿಧಿ ಅವರನ್ನು ನಮ್ಮಿಂದ ದೂರ ಮಾಡಿದೆ: ಡಿ ಕೆ ಶಿವಕುಮಾರ್

author img

By ETV Bharat Karnataka Team

Published : Feb 25, 2024, 6:30 PM IST

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳೂರಿನ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ, ಶಾಸಕ ರಾಜಾ ವೆಂಕಟಪ್ಪ ನಾಯಕ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

Etv Bharat
Etv Bharat

ಬೆಂಗಳೂರು: ರಾಜ್ಯಸಭೆ ಚುನಾವಣೆ ಮತದಾನದ ವೇಳೆಗೆ ಬರುತ್ತೇನೆಂದು ಹೇಳಿದ್ದ, ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ವಿಧಿ ನಮ್ಮಿಂದ ದೂರ ಮಾಡಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದರು. ನಂತರ ಮಾತನಾಡಿದ ಅವರು, ನನ್ನ ಜೀವನದ ದುಃಖದ ದಿನ. ಮೂರ್ನಾಲ್ಕು ದಿನಗಳ ಹಿಂದೆ ನಾನು, ಜಿ.ಸಿ ಚಂದ್ರಶೇಖರ್, ಸೋಮಶೇಖರ್ ಅವರ ಜತೆಗೂಡಿ ಆಸ್ಪತ್ರೆಗೆ ಬಂದು ರಾಜಾ ವೆಂಕಟಪ್ಪ ನಾಯಕ ಅವರ ಆರೋಗ್ಯ ವಿಚಾರಿಸಿದ್ದೆನು. ಅವರು ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಅವರು ಕಾಗದದ ಮೇಲೆ ಬರೆದು ನನ್ನ ಜತೆ ಮಾತನಾಡಿದ್ದರು. ರಾಜ್ಯಸಭೆ ಮತದಾನದ ವೇಳೆಗೆ ಬರುತ್ತೇನೆ ಎಂದು ಹೇಳಿದ್ದರು.

ಅವರು ವಾಪಸ್ ಬರುತ್ತಾರೆ ಎಂದು ಭಾವಿಸಿದ್ದೆ. ಆದರೆ ಇಂದು ಮಧ್ಯಾಹ್ನ ಭಗವಂತ ಅವರನ್ನು ಕರೆದುಕೊಂಡಿದ್ದಾನೆ. ನಾವು ಮಾಡಿದ ಸಮೀಕ್ಷೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಇವರೇ ಮೊದಲ ಅಭ್ಯರ್ಥಿ ಎಂದು ಕೂಡ ವರದಿ ಬಂದಿತ್ತು. ವಿಧಿಲೀಲೆ ಅವರನ್ನು ನಮ್ಮಿಂದ ದೂರ ಮಾಡಿದೆ ಎಂದರು.

ಬಹಳ ಸರಳತೆಯ ನಾಯಕರಾಗಿದ್ದ ಅವರು ಯಾರ ಮನಸ್ಸನ್ನು ನೋಯಿಸುತ್ತಿರಲಿಲ್ಲ. ಆ ಮೂಲಕ ಜನರ ಮನ ಗೆದ್ದಿದ್ದರು. ನನಗೆ ಆತ್ಮೀಯ ಸ್ನೇಹಿತರು ಆಗಿದ್ದರು. ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಕ್ಷೇತ್ರದ ಜನರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟ್ಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ನಮ್ಮ ಕುಟುಂಬದ ಆತ್ಮೀಯರಾಗಿ, ಚಿಕ್ಕಂದಿನಿಂದ ನನ್ನ ಮಾರ್ಗದರ್ಶಕರಾಗಿದ್ದ ಅವರು ನಮ್ಮನ್ನು ಅಗಲಿರುವ ವಿಚಾರ ನಂಬಲು ಅತೀವ ಕಷ್ಟವಾಗುತ್ತಿದೆ. ಬ್ರಿಟಿಷರೊಂದಿಗೆ ಹೋರಾಡಿ ವೀರ ಮರಣ ಹೊಂದಿದ ಸುರಪುರ ಸಂಸ್ಥಾನದ ದೊರೆ ನಾಲ್ಕನೇ ರಾಜಾ ವೆಂಕಟಪ್ಪ ನಾಯಕ ಅವರ ಕುಟುಂಬದಿಂದ ಬಂದಿದ್ದರು. ಜನರ ಪ್ರೀತಿಯ ನಾಯಕ ನಮ್ಮ ಕಲ್ಯಾಣ ಕರ್ನಾಟಕ ಭಾಗಕ್ಕೆ ಬಹು ದೊಡ್ಡ ಶಕ್ತಿಯಾಗಿದ್ದರು.

ಅವರ ಈ ಅಕಾಲಿಕ ಅಗಲಿಕೆ, ನಮ್ಮ ಭಾಗದ ಜನತೆಗೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ದೊರಕುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂಓದಿ:ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.