ಬೆಳಗಾವಿ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಇಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಜತೆಗಿದ್ದರು.
ಇದಕ್ಕೂ ಮುನ್ನ ಮೃಣಾಲ್ ಹೆಬ್ಬಾಳ್ಕರ್ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಣ ಸವದಿ, ಅಶೋಕ ಪಟ್ಟಣ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿ ಮತ್ತಿತರರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಮೃಣಾಲ್ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗೋವು ಪೂಜೆ ನೆರವೇರಿಸಿದರು. ಸಚಿವರ ನಿವಾಸಕ್ಕೆ ಆಗಮಿಸಿದ್ದ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ಕಾರಂಜಿ ಮಠದ ಗುರುಸಿದ್ದ ಸ್ವಾಮೀಜಿ ಸೇರಿದಂತೆ 20ಕ್ಕೂ ಹೆಚ್ಚು ಮಠಾಧೀಶರು ಮೃಣಾಲ್ ಅವರಿಗೆ ಆಶೀರ್ವಾದ ಮಾಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬಸಮೇತ ಸುಳೇಭಾವಿಯಲ್ಲಿರುವ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, "ಮೃಣಾಲ್ ಹೆಬ್ಬಾಳ್ಕರ್ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾನೆ. ಹಟ್ಟಿಹೊಳಿಯಲ್ಲಿ ವೀರಭದ್ರೇಶ್ವರ ಹಾಗೂ ಸುಳೇಭಾವಿಯಲ್ಲಿ ಲಕ್ಷ್ಮಿಗೆ ಪೂಜೆ ಸಲ್ಲಿಸಿದ್ದೇವೆ. ಗುರುಗಳನ್ನು ಮನೆಗೆ ಕರೆದು ಪಾದ ಪೂಜೆ ಮಾಡಿದ್ದೇವೆ" ಎಂದು ಹೇಳಿದರು.
ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, "ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಕಾರ್ಯಕರ್ತರ ಶ್ರಮ ಈ ಬಾರಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರಿಯಾಗಲಿವೆ. ಪ್ರತಿ ವರ್ಗದ ಜನರ ಹತ್ತಿರ ಹೋಗಿದ್ದೇನೆ. ಬೆಳಗಾವಿ ಅಭಿವೃದ್ಧಿಯೇ ನನ್ನ ಕನಸು. ಈ ಬಾರಿ ಜನರು ಬೆಳಗಾವಿ ಯುವಕನ ಕೈ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ" ಎಂದು ತಿಳಿಸಿದರು.
ಇದನ್ನೂ ಓದಿ: ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸಾಥ್ - Prahlad Joshi Nomination