ಬೆಳಗಾವಿ: ಸೈಬರ್ ವಂಚಕರ ಬೆದರಿಕೆಗೆ ಹೆದರಿ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗುಜರಾತ ರಾಜ್ಯದ ಸೂರತ್ನ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಬಂಧಿತ ಆರೋಪಿ. ಆರೋಪಿ ವಿರುದ್ಧ ಅಪರಾಧ ಸಂಖ್ಯೆ 32/2025 ಕಲಂ 66(ಡಿ) ಐಟಿ ಕಾಯ್ದೆ ಮತ್ತು ಕಲಂ 108, 308(2), 319(2), 03(5) ಬಿಎನ್ಎಸ್ ಅಡಿ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೀಡಿ ಗ್ರಾಮದ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾಗಿದ್ದ ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ನಜರತ್ (78) ಅವರು ಮಾರ್ಚ್ 27ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ಲೇವಿಯಾ ನಿದ್ರೆ ಮಾತ್ರೆ ಸೇವಿಸಿ ಮೃತಪಟ್ಟಿದ್ದರೆ, ಡಿಯಾಗೋ ಚಾಕುವಿನಿಂದ ತಮ್ಮ ಕುತ್ತಿಗೆಗೆ ಚುಚ್ಚಿಕೊಂಡು, ಮನೆಯ ಹಿಂದಿನ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.
ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇ ಪದೆ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, 'ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ಇದರ ಬಗ್ಗೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ ಎಂದು ಬೆದರಿಸುತ್ತಿದ್ದಾರೆ' ಎಂದು ಡಿಯಾಗೋ ಡೆತ್ನೋಟ್ ಬರೆದಿಟ್ಟಿದ್ದರು.
ಇದರಿಂದ ಹೆದರಿದ ಡಿಯಾಗೋ 50 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಸೈಬರ್ ವಂಚಕರ ಖಾತೆಗಳಿಗೆ ವರ್ಗಾಯಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಮತ್ತಷ್ಟು ಹಣ ನೀಡುವಂತೆ ಪೀಡಿಸಿದ್ದರು. ಹೆಚ್ಚಿನ ಹಣ ನೀಡಲು ಸಾಧ್ಯವಾಗದ ಹಿನ್ನೆಲೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಡಿಯಾಗೋ ಅವರ ಎಸ್ಬಿಐ ಖಾತೆಯಿಂದ ಬಾಲಾಜಿ ಇಂಡಸ್ಟ್ರೀಸ್ ಹೆಸರಿನಲ್ಲಿ ಐಡಿಎಫ್ಸಿ ಬ್ಯಾಂಕ್ ಖಾತೆಗೆ ಆನ್ಲೈನ್ ಮೂಲಕ 6.10 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಳ್ಳಲಾಗಿತ್ತು. ಈ ಖಾತೆಗೆ ಲಿಂಕ್ ಇದ್ದ ಮೊಬೈಲ್ ಸಂಖ್ಯೆಯನ್ನು ಬಳಸಿ ಹಣವನ್ನು ಆರೋಪಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ. ಮೊಬೈಲ್ ಸಂಖ್ಯೆ ಪತ್ತೆ ಹಚ್ಚಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೃತ್ಯಕ್ಕೆ ಬಳಸಿದ 2 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದಾರೆ.
ಘಟನೆ ಹಿನ್ನೆಲೆ: ನಿಮ್ಮ(ದಂಪತಿಯ) ಫೋಟೋ ಐಡಿ ಬಳಸಿ ಬೇರೆಯವರು ಸೈಬರ್ ವಂಚನೆ ಮಾಡಿದ್ದಾರೆ ಎಂದು ಡಿಯಾಗೋ ನಜರತ್ ಅವರಿಗೆ ಕರೆ ಬಂದಿತ್ತು. ಇದಾದ ಬಳಿಕ ಮತ್ತೊಬ್ಬ ವ್ಯಕ್ತಿಗೆ ಕರೆ ವರ್ಗಾವಣೆ ಮಾಡಿದ್ದರು. ಸೈಬರ್ ವಂಚನೆ ಸರಿಪಡಿಸಲು ಈ ವೇಳೆ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಸೈಬರ್ ವಂಚಕರಿಗೆ ಹಲವು ಸಲ ದಂಪತಿ ಸುಮಾರು 50 ಲಕ್ಷ ರೂ. ಹಣ ಹಾಕಿದ್ದಾರೆ. ಇದಾದ ಬಳಿಕ ಡಿಯಾಗೋ ಅವರು ಆ ವಂಚಕರಿಗೆ ಕರೆ ಮಾಡಿದ್ದಾರೆ. ಆದರೆ, ಅವರು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೆಸೇಜ್ ಹಾಕಿದ್ದಾರೆ. ಇದಾದ, ಬಳಿಕವೂ ಕರೆ ಸ್ವೀಕರಿಸದ ಕಾರಣ ಮಾರ್ಚ್ 27ರಂದು ಡೆತ್ ನೋಟ್ ಬರೆದಿಟ್ಟು ಡಿಯಾಗೋ ದಂಪತಿ ಆತ್ಮಹತ್ಯೆ ಮಾಡಿಕೊಂಡಿತ್ತು.
ಇದನ್ನೂ ಓದಿ: ಸೈಬರ್ ವಂಚಕರಿಂದ ಬೆದರಿಕೆ: ಬೆಳಗಾವಿಯಲ್ಲಿ ವೃದ್ಧ ದಂಪತಿ ಆತ್ಮಹತ್ಯೆ - ELDER COUPLE DIED