ETV Bharat / state

ನಾಮಪತ್ರ ಭರಾಟೆ: ಪ್ರೊ. ರಾಜೀವ್ ಗೌಡ, ಮನ್ಸೂರ್ ಅಲಿಖಾನ್ ಉಮೇದುವಾರಿಕೆ ಸಲ್ಲಿಕೆ - ELECTION NOMINATION SUBMISSION

author img

By ETV Bharat Karnataka Team

Published : Apr 3, 2024, 4:50 PM IST

Updated : Apr 3, 2024, 7:28 PM IST

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಗಳು ಇಂದು ತಮ್ಮ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಅದಕ್ಕೂ ಮುನ್ನ ರೋಡ್ ಶೋ ನಡೆಸಿ ಗಮನ ಸೆಳೆದರು.

ಪ್ರೊ. ರಾಜೀವ್ ಗೌಡ, ಮನ್ಸೂರ್ ಅಲಿಖಾನ್ ಉಮೇದುವಾರಿಕೆ ಸಲ್ಲಿಕೆ
ಪ್ರೊ. ರಾಜೀವ್ ಗೌಡ, ಮನ್ಸೂರ್ ಅಲಿಖಾನ್ ಉಮೇದುವಾರಿಕೆ ಸಲ್ಲಿಕೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜೀವ್ ಗೌಡ

ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜೀವ್​ಗೌಡ ಅವರು ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಶಾಸಕ ಎ ಸಿ ಶ್ರೀನಿವಾಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ವಾಜಿದ್ ಅವರು ಉಪಸ್ಥಿತರಿದ್ದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪ್ರೊ. ರಾಜೀವ್​ಗೌಡ ಅವರು, ನಮ್ಮ ನಡಿಗೆ ಅಭಿವೃದ್ಧಿಯ ಕಡೆಗೆ, ಬೆಂಗಳೂರು ಉತ್ತರದಲ್ಲಿ ಈ ಬಾರಿ ಕಾಂಗ್ರೆಸ್ ಬರಲಿದೆ. ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜನರ ಕಷ್ಟದ ಸಮಯದಲ್ಲಿ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ನಮಗೆ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ ಎಂದರು. ಬಿಜೆಪಿ ಸಂಸದರು ಜನರ ಜೊತೆ ಕಾಣಿಸಿಲ್ಲ. ನಾನು ಜನರ ಜೊತೆ ಕೆಲಸ ಮಾಡುತ್ತಿದ್ದೇನೆ. ಎಲ್ಲರೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೇಳುತ್ತಿದ್ದಾರೆ. ಅದಕ್ಕಾಗಿ ವೋಟ್ ಮಾಡುತ್ತೇವೆಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು.

congress leaders
ಸಂವಿಧಾನದ ಪೀಠಿಕೆ ಓದಿದ ಕಾಂಗ್ರೆಸ್ ನಾಯಕರು

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಕರ್ನಾಟಕದ ಬಗ್ಗೆ ಧ್ವನಿ ಎತ್ತಬೇಕಾದ ಸಂಸದರು ಧ್ವನಿ ಎತ್ತಲಿಲ್ಲ. ರಾಜ್ಯದ ಪರವಾಗಿ ಧ್ವನಿ ಎತ್ತುವ ಸಂಸದರು ಬೇಕಾಗಿದ್ದಾರೆ. ನನಗೆ ವಿಶ್ವಾಸವಿದೆ. ಜನರು ಕೈಬಿಡುವುದಿಲ್ಲ ಎಂದ ರಾಜೀವ್ ಗೌಡ, ಪೈಪೋಟಿ ಇರಲಿ, ಎದುರಿಸೋಣ ಎಂದು ಹೇಳಿದರು.

ಇದಕ್ಕೂ ಮುನ್ನ ನಗರದ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ನಡೆದ ಕಾಂಗ್ರೆಸ್​ನ ಬೃಹತ್ ಸಮಾವೇಶದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಸಲೀಮ್ ಅಹಮದ್, ಮತ್ತು ಇತರ ಕಾಂಗ್ರೆಸ್ ನಾಯಕರು ಸಂವಿಧಾನದ ಪೀಠಿಕೆ ಓದುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದರು.

ನಂತರ ಫ್ರೀಡಂ ಪಾರ್ಕ್​ನಿಂದ ಕೆಂಪೇಗೌಡ ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿವರೆಗೂ ರೋಡ್ ಶೋ ನಡೆಸಿ, ರಾಜೀವ್ ಗೌಡರಿಗೆ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ಮನ್ಸೂರ್ ಅಲಿಖಾನ್ ಅವರಿಂದ ನಾಮಪತ್ರ ಸಲ್ಲಿಕೆ: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಕೂಡ ಇಂದೇ ನಾಮಪತ್ರ ಸಲ್ಲಿಸಿದರು. ರಾಜೀವ್ ಗೌಡ ನಾಮಪತ್ರ ಸಲ್ಲಿಕೆ ನಂತರ ಬಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಕಾಂಗ್ರೆಸ್ ಅಭ್ಯರ್ಥಿಗೆ ಶುಭ ಕೋರಿದರು. ನಂತರ ಮನ್ಸೂರ್ ಅಲಿಖಾನ್ ಅವರ ನಾಮಪತ್ರ ಸಲ್ಲಿಕೆಗೆ ತೆರಳಿದರು. ಶಾಸಕ ರಿಜ್ವಾನ್ ಅರ್ಷದ್, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಈ ಸಂದರ್ಭದಲ್ಲಿ ಹಾಜರಿದ್ದರು.

ನಾಮಪತ್ರ ಸಲ್ಲಿಕೆ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮನ್ಸೂರ್ ಅಲಿಖಾನ್, ಬೆಂಗಳೂರು ಕೇಂದ್ರದಲ್ಲಿ ಸಂಸದ ಪಿ.ಸಿ. ಮೋಹನ್ ಏನು ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮುಖ ನೋಡಿ ಅವರು ಮತ ಕೇಳುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ. ನಮ್ಮ ಸರ್ಕಾರ ಜನಪರ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರು ತಮ್ಮ ನಾಯಕರ ಜೊತೆ ರೋಡ್ ಶೋ ನಡೆಸಿದರು.

ಇದನ್ನೂ ಓದಿ : ದಿಂಗಾಲೇಶ್ವರ ಶ್ರೀ ಚುನಾವಣೆಗೆ ಸ್ಪರ್ಧಿಸಿದ್ರೆ ಏನು ಡ್ಯಾಮೇಜ್ ಆಗಲಿದೆ ಅನ್ನೋದು ಹೇಳೋಕಾಗಲ್ಲ: ಸಂತೋಷ್ ಲಾಡ್ - Minister Santosh Lad

Last Updated :Apr 3, 2024, 7:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.