ETV Bharat / state

ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿಯಿಂದ ಕಪೋಲಕಲ್ಪಿತ ಆರೋಪ: ಸಿಎಂ

author img

By ETV Bharat Karnataka Team

Published : Feb 23, 2024, 7:03 AM IST

ರಾಜ್ಯ ಸರ್ಕಾರದ ಬಗ್ಗೆ ಕಪೋಲಕಲ್ಪಿತ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.​

CM Siddaramaiah
ಸಿಎಂ ಸಿದ್ದರಾಮಯ್ಯ

ಬೆಂಗಳೂರು: "ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದೆ. ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, "ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು, ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕು ಎನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ" ಎಂದು ಸ್ಪಷ್ಟಪಡಿಸಿದ್ದಾರೆ.

"ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ" ಎಂದಿದ್ದಾರೆ.

ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:

  • ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10
  • ನಿವ್ವಳ ವಾರ್ಷಿಕ ಆದಾಯದ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5
  • ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ

ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:

  • ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10
  • ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ
  • ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ

"ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ. ಚುನಾವಣಾ ದೃಷ್ಟಿಯಿಂದ ಕೇವಲ ಕೋಮು ಧ್ರುವೀಕರಣದತ್ತಲೇ ಗಮನಹರಿಸುತ್ತಿರುವ ಬಿಜೆಪಿ ನಾಯಕರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಸಮಾಜದಲ್ಲಿನ ಶಾಂತಿ, ಸಾಮರಸ್ಯವನ್ನು ಕದಡಲು ಇಂತಹ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಅನೈತಿಕ ಹಾದಿ ತುಳಿದಿರುವ ಬಿಜೆಪಿ ನಾಯಕರು ತಮ್ಮ ಸಾರ್ವಜನಿಕ ವರ್ತನೆಗೆ ತಾವೇ ನಾಚಿಕೆ ಪಡಬೇಕಿದೆ. ಕರ್ನಾಟಕದ ಸಾಮರಸ್ಯವನ್ನು ಕದಡುವ ದ್ರೋಹದ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ಇವರ ಈ ಸಂಚನ್ನು ಕನ್ನಡಿಗರು ನಿಷ್ಕ್ರಿಯಗೊಳಿಸಬೇಕಿದೆ" ಎಂದಿದ್ದಾರೆ.

"ಸಮಾಜದಲ್ಲಿ ತಪ್ಪು ಮಾಹಿತಿ ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ. ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ. ಇದೆಲ್ಲವನ್ನೂ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದು, ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ‌" ಎಂದು ವಾಗ್ದಾಳಿ ನಡೆಸಿದ್ದಾರೆ.

"ಪಕ್ಷದ ರಾಜ್ಯಾಧ್ಯಕ್ಷರಾಗಲು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹರುಡುವ ಸಾಮರ್ಥ್ಯ ಹೊಂದಿರಬೇಕು ಎನ್ನುವಂತಹ ಅಸ್ವಸ್ಥ ನಿಲುವಿಗೆ ಬಿಜೆಪಿ ಇಂದು ಬಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇದೇ ಕಾರಣಕ್ಕಾಗಿ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದಂತೆ ಕಾಣುತ್ತಿದೆ. ಅವರ ಜೊತೆ ಇತರ ನಾಯಕರು ಕೂಡಾ ಸುಳ್ಳಿನಲ್ಲಿ ಪೈಪೋಟಿ ನೀಡುತ್ತಿರುವಂತೆ ವರ್ತಿಸುತ್ತಿರುವುದು ಕರ್ನಾಟಕದ ದುರಂತವೇ ಸರಿ. ಇಂತಹ ದುಷ್ಟತನದ ಹುನ್ನಾರಗಳನ್ನು ಅರ್ಥಮಾಡಿಕೊಳ‍್ಳುವಷ್ಟು ಕನ್ನಡಿಗರು ಪ್ರಬುದ್ಧರಾಗಿದ್ದಾರೆ. ಮೋದಿ ಆಳ್ವಿಕೆಯಲ್ಲಿ ಡಾಲರ್‌ ಎದುರು ರೂಪಾಯಿ ಕುಸಿಯುತ್ತಿರುವಂತೆ ಓರ್ವ ನಾಯಕನಾಗಿ ವಿಜಯೇಂದ್ರ ಅವರ ವಿಶ್ವಾಸಾರ್ಹತೆಯೂ ಕುಸಿಯುತ್ತಿರುವುದು ಸ್ಪಷ್ಟವಾಗಿದೆ" ಎಂದಿದ್ದಾರೆ.

ಇದನ್ನೂ ಓದಿ: ಜಗತ್ತಿನ ಸುಳ್ಳು ಬಿಜೆಪಿಯವರ ಬಾಯಲ್ಲಿ ಸಿಗುತ್ತದೆ: ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.