ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬಳಿಕ ಮೊದಲ ಬಾರಿಗೆ ವಿಜಯಪುರ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಿದ್ದರು. ಗುರುವಾರ ವಿಜಯೇಂದ್ರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರ ಬೆಂಬಲ ವ್ಯಕ್ತವಾಯಿತು.
ಜನಾಕ್ರೋಶ ಯಾತ್ರೆ ಹಿನ್ನೆಲೆಯಲ್ಲಿ ವಿಜಯಪುರ ನಗರದ ಶಿವಾಜಿ ವೃತ್ತದಿಂದ ದರ್ಬಾರ್ ಹೈಸ್ಕೂಲ್ ಮೈದಾನದವರೆಗೆ ಬೃಹತ್ ರ್ಯಾಲಿ ನಡೆಯಿತು. ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರ್ಯಾಲಿಗೆ ಚಾಲನೆ ನೀಡಿದರು. ಮೆರವಣಿಗೆ ಉದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ ಅವರು ಜನಾಕ್ರೋಶ ಜ್ಯೋತಿಯನ್ನು ವಿಜಯೇಂದ್ರ ಅವರಿಗೆ ಹಸ್ತಾಂತರ ಮಾಡುವ ಮೂಲಕ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಬಹಿರಂಗ ಸಮಾವೇಶಕ್ಕೆ ಚಾಲನೆ ನೀಡಿದರು.

ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಋಣಿ: ಈ ವೇಳೆ ಮಾತನಾಡಿದ ವಿಜಯೇಂದ್ರ, ''ಜನಾಕ್ರೋಶ ಯಾತ್ರೆಯಲ್ಲಿ 15 ರಿಂದ 20 ಸಾವಿರ ಜನರು ಭಾಗವಹಿಸಿದ್ದೀರಿ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ವೇದಿಕೆ ಮೇಲೆ ಎಲ್ಲರೂ ಕೂತಿದ್ದಾರೆಂದರೆ, ಅದಕ್ಕೆ ಕಾರಣವೇ ನಮ್ಮ ಪಕ್ಷದ ಕಾರ್ಯಕರ್ತರು. ಇಷ್ಟೊಂದು ಜನ ಅದ್ದೂರಿಯಾಗಿ ಸ್ವಾಗತ ಕೋರುತ್ತಾರೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಈ ವೇದಿಕೆಯ ಮೂಲಕ ಸಿಎಂಗೆ ಸವಾಲು ಹಾಕುವೆ, ಜನಾಕ್ರೋಶ ಈ ರಾಜ್ಯದ ಸರ್ಕಾರ ಹಾಗೂ ಸಿಎಂ ವಿರುದ್ದ ಎಂದು ತಿಳಿದುಕೊಳ್ಳಬೇಕು. ಇದನ್ನು ವಿಜಯಪುರಕ್ಕೆ ಬಂದು ನೋಡಿ'' ಎಂದು ಆಕ್ರೋಶ ಹೊರಹಾಕಿದರು.

ಹಿಂದುಳಿದ ಸಮುದಾಯಗಳ ನಿರ್ಲಕ್ಷ್ಯ: ''ಎಲ್ಲರಿಗೂ ನ್ಯಾಯ ಕೊಡುತ್ತೇವೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೇಳಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅಹಿಂದ ಹೆಸರು ಹೇಳಿಕೊಂಡು ಅಧಿಕಾರ ನಡೆಸುತ್ತಿರುವ ಸಿಎಂ ಬಳಿಕ ರಾಜ್ಯದಲ್ಲಿರುವ ಹಿಂದುಳಿದ ಸಮುದಾಯಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಮುಸ್ಲಿಮರ ಪರ ನಿಂತರು. ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ 4ರಷ್ಟು ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯ ನೀವು ರಾಜ್ಯದ ಮುಖ್ಯಮಂತ್ರಿಯೋ, ಮುಸ್ಲಿಂ ಮುಖ್ಯಮಂತ್ರಿಯೋ? ಪ್ರಧಾನಿ ಮೋದಿಯವರು ದೇಶದಲ್ಲಿ ತ್ರಿಬಲ್ ತಲಾಕ್ ಕಿತ್ತು ಹಾಕುವ ಕೆಲಸ ಮಾಡಿದ್ದಾರೆ. ಬಿಜೆಪಿ ಮುಸ್ಲಿಂ ವಿರೋಧಿಯಲ್ಲ'' ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ''ಪಕ್ಷ ದೊಡ್ಡದು, ಪಕ್ಷಕ್ಕೆ ಜಿಗಜಿಣಗಿ ಅನಿವಾರ್ಯವಲ್ಲ. ಜಿಗಜಿಣಗಿ ಇರದಿದ್ದರೂ ಪಕ್ಷ ಗಟ್ಟಿಗೊಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು'' ಎಂದು ಕರೆ ನೀಡಿದರು. ಇದೇ ವೇಳೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇದನ್ನೂ ಓದಿ: ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು: ಬಿ ವೈ ವಿಜಯೇಂದ್ರ