ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ಜಾತಿ ಗಣತಿ ವರದಿ ಕುರಿತಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಜಾತಿ ಗಣತಿ ಬಗ್ಗೆ ಸಚಿವರಿಂದ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದು, ಚರ್ಚೆ ಅಪೂರ್ಣಗೊಂಡಿದ್ದರಿಂದ ಮುಂದಿನ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಸಮಗ್ರ ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳುವ ತೀರ್ಮಾನಕ್ಕೆ ಸರ್ಕಾರ ಮುಂದಾಗಿದೆ.
ಸಂಪುಟ ಸಭೆ ಮುಗಿದ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ''ಜಾತಿ ಗಣತಿ ಕುರಿತಂತೆ ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ, ಮುಂದಿನ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಆಯಾ ಸಚಿವರು ಸಂಪುಟ ಸಭೆಯಲ್ಲಿ ಅವರವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಚರ್ಚೆ ಪೂರ್ಣಗೊಳಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ'' ಎಂದರು.
ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ''ಕ್ಯಾಬಿನೆಟ್ ಮೀಟಿಂಗ್ನಲ್ಲಿ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ಜಾತಿಗಣತಿ ವರದಿ ಬಗ್ಗೆ ನಮ್ಮ ವಿರೋಧವಿಲ್ಲ. ಪರ, ವಿರೋಧ ಚರ್ಚೆಯಾಗಿದೆಯಷ್ಟೇ. ಇದೇ ತಿಂಗಳು 24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು'' ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ''ಇಂದಿನ ಸಭೆಯಲ್ಲಿ ಜಾತಿ ಗಣತಿ ಕುರಿತಂತೆ ಸೌಹಾರ್ದ ಹಾಗೂ ಆರೋಗ್ಯಕರ ಚರ್ಚೆ ನಡೆದಿದೆ. ಮಾಹಿತಿ ಕೊರತೆ ಹಿನ್ನೆಲೆಯಲ್ಲಿ ಇಲಾಖೆಗಳಿಗೆ ಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪೂರ್ಣ ಮಾಹಿತಿ ಲಭ್ಯವಾಗದ್ದರಿಂದ ಸೂಕ್ತ ನಿರ್ಣಯ ಕೈಗೊಳ್ಳಲು ಸಾಧ್ಯವಾಗಿಲ್ಲ. ಜಾತಿ ಗಣತಿ ಬಗ್ಗೆ ಯಾವ ಸಚಿವರೂ ವಿರೋಧ ವ್ಯಕ್ತಪಡಿಸಿಲ್ಲ. ಸೌಹಾರ್ದ ಚರ್ಚೆ ನಡೆಸಲಾಗಿದೆ'' ಎಂದು ವಿವರಿಸಿದರು.
ಇದನ್ನೂ ಓದಿ: ರಾಜ್ಯ ಸರ್ಕಾರದ ಜಾತಿಗಣತಿಯನ್ನು ಜೈನ ಸಮಾಜ ಒಪ್ಪುವುದಿಲ್ಲ: ಗುಣಧರನಂದಿ ಮಹಾರಾಜರು - GUNADHARANANDI MAHARAJ