ETV Bharat / state

ವಕೀಲರ ಸಮ್ಮೇಳನದಲ್ಲಿ ಹಣಕಾಸು ದುರ್ಬಳಕೆ ಆರೋಪ: ಎಫ್ಐಆರ್ ದಾಖಲು - FIR

author img

By ETV Bharat Karnataka Team

Published : Apr 18, 2024, 7:45 AM IST

ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ರಾಜ್ಯ ವಕೀಲರ ಪರಿಷತ್‌ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

case
ವಕೀಲರ ಸಮ್ಮೇಳನದಲ್ಲಿ ಹಣಕಾಸು ದುರ್ಬಳಕೆ ಆರೋಪ: ಎಫ್ಐಆರ್ ದಾಖಲು

ಬೆಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ವಕೀಲರ ಸಮ್ಮೇಳನದಲ್ಲಿ 50 ಲಕ್ಷ ರೂ. ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ರಾಜ್ಯ ವಕೀಲರ ಪರಿಷತ್‌ ಅಧ್ಯಕ್ಷ ಹಾಗೂ ಪರಿಷತ್‌ ಸದಸ್ಯರೊಬ್ಬರು ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಾಜ್ಯ ವಕೀಲರ ಪರಿಷತ್‌ ಸದಸ್ಯರೂ ಮತ್ತು ಹೈಕೋರ್ಟ್‌ನ ಹಿರಿಯ ವಕೀಲರೂ ಆದ ಎಸ್‌.ಬಸವರಾಜ್‌ ಅವರು ನೀಡಿದ ದೂರಿನ ಆಧಾರದ ಮೇಲೆ ಪರಿಷತ್ ಪದಾಧಿಕಾರಿಗಳ ವಿರುದ್ಧ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ರಾಜ್ಯ ವಕೀಲರ ಪರಿಷತ್‌ 2023ರ ಆಗಸ್ಟ್‌ 12 ಮತ್ತು 13ರಂದು ಎರಡು ದಿನಗಳ ಕಾಲ ಮೈಸೂರಿನಲ್ಲಿ ರಾಜ್ಯ ವಕೀಲರ ಸಮ್ಮೇಳನ ಆಯೋಜಿಸಿತ್ತು. ಈ ಸಮಯದಲ್ಲಿ ಸಮ್ಮೇಳನದ ಪ್ರತಿನಿಧಿ ವಕೀಲರಿಂದ ತಲಾ 1 ಸಾವಿರದಂತೆ ಒಟ್ಟು 1,16,33,000 ರೂ. ಮೊತ್ತವನ್ನು ದೇಣಿಗೆಯಾಗಿ ಸಂಗ್ರಹಿಸಲಾಗಿತ್ತು. ರಾಜ್ಯ ಸರ್ಕಾರ 1.8 ಲಕ್ಷ ರೂ. ಅನುದಾನ ನೀಡಿತ್ತು. ಮತ್ತು ರಾಜ್ಯ ವಕೀಲರ ಪರಿಷತ್‌ನಿಂದ 75 ರೂ. ಲಕ್ಷ ಬಿಡುಗಡೆಯಾಗಿತ್ತು. ಒಟ್ಟು ಮೊತ್ತ 3,30,33,000 ರೂ. ಸಂಗ್ರಹವಾಗಿತ್ತು. ಈ ಹಣ ಪರಿಷತ್‌ನ ಬ್ಯಾಂಕ್‌ ಖಾತೆಗೆ ಜಮೆ ಆಗಿದ್ದು, ಆದರೆ ಬಳಕೆಯಲ್ಲಿ ದುರುಪಯೋಗ ನಡೆದಿದೆ' ಎಂದು ದೂರಿನಲ್ಲಿ ವಿವರಿಸಲಾಗಿದೆ.

'ಅಧ್ಯಕ್ಷರು ಮತ್ತು ಇತರರು ಸೇರಿಕೊಂಡು ಪರಿಷತ್‌ನ 50 ಲಕ್ಷ ರೂ. ಮೊತ್ತವನ್ನು ಬ್ಯಾಂಕ್‌ನಿಂದ ನಗದೀಕರಿಸಿಕೊಂಡಿದ್ದಾರೆ. ಸುಳ್ಳು ಲೆಕ್ಕಪತ್ರ ಸೃಷ್ಟಿಸಿ, ವಕೀಲರ ಸಮುದಾಯಕ್ಕೆ ಸೇರಿದ ಕೋಟ್ಯಂತರ ರೂಪಾಯಿಗಳನ್ನು, ನಕಲಿ ಬಿಲ್‌ ತಯಾರಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಸರ್ಕಾರಕ್ಕೆ ಸಲ್ಲಬೇಕಾದ ಜಿಎಸ್‌ಟಿ ಹಣವನ್ನು ಸಲ್ಲಿಸದೇ ಮೋಸ ಮಾಡುವ ಉದ್ದೇಶದಿಂದ ಪರಿಷತ್ತಿನ ಸಮುದಾಯಕ್ಕೆ ನಂಬಿಕೆ ದ್ರೋಹ ಎಸಗಿದ್ದಾರೆ' ಎಂದು ಬಸವರಾಜ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: ಹಗಲು ಫುಡ್ ಡೆಲಿವರಿ, ರಾತ್ರಿ ಬೈಕ್‌ ಚೋರಿ: ಇದುವರೆಗೂ ಕದ್ದ ಬೈಕ್​ಗಳು 84! - Bike Thief Arrested

ETV Bharat Logo

Copyright © 2024 Ushodaya Enterprises Pvt. Ltd., All Rights Reserved.