ETV Bharat / state

ರೈತರ ಆತ್ಮಹತ್ಯೆಗೆ ಕಾರಣ, ಪರಿಹಾರ ಕುರಿತು ಅಧ್ಯಯನ ನಡೆಸಲು ಸಿಎಂ ಸೂಚನೆ - CM Siddaramaiah

author img

By ETV Bharat Karnataka Team

Published : May 23, 2024, 7:57 PM IST

ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ಸಿಎಂ ಸಿದ್ದರಾಮಯ್ಯ ಸಭೆ
ಸಿಎಂ ಸಿದ್ದರಾಮಯ್ಯ ಸಭೆ (ETV Bharat)

ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಇದಕ್ಕೆ ಕಾರಣ ಹಾಗೂ ಪರಿಹಾರ ಏನು ಎಂದು ಅಧ್ಯಯನ ನಡೆಸಲು ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಎಲ್ಲಾ ಜಿಲ್ಲೆಗಳಿಂದ ಮಾಹಿತಿ ಪಡೆದುಕೊಂಡರು. ರಾಜ್ಯದಲ್ಲಿ 2023-24 ರಲ್ಲಿ 842 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 90 ಮನವಿಗಳು ತಿರಸ್ಕೃತವಾಗಿದೆ. 132 ಡಿಬಿಟಿಗೆ ಬಾಕಿಯಾಗಿವೆ. 62 ಉಪವಿಭಾಗಾಧಿಕಾರಿಗಳ ಹಂತದಲ್ಲಿ ಬಾಕಿ ಇವೆ. ಉಳಿದ ರೈತರ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ಸಿಎಂಗೆ ಅಧಿಕಾರಿಗಳು ಸಿದ್ದರಾಮಯ್ಯಗೆ ಮಾಹಿತಿ ನೀಡಿದರು.

ವಿಸ್ತೃತ ಮಾಹಿತಿ ಪಡೆದುಕೊಂಡ ಸಿಎಂ, ಇದರಲ್ಲಿ ಬಹಳ ಪ್ರಕರಣಗಳು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ನಿರೀಕ್ಷೆಯಲ್ಲಿರುವುದರಿಂದ ವಿಳಂಬವಾಗಿದೆ. ಈ ಪ್ರಕರಣಗಳಲ್ಲಿಯೂ ತ್ವರಿತವಾಗಿ ಪರಿಹಾರ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮುಂದುವರೆದು ರೈತರ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಬೇಕೆಂದು ಸೂಚಿಸಿದರು. ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಇದಕ್ಕೆ ಕಾರಣ ಹಾಗೂ ಪರಿಹಾರ ಏನು ಎಂದು ಅಧ್ಯಯನ ನಡೆಸಲು ತಿಳಿಸಿದರು.

ರಸಗೊಬ್ಬರ ಲಭ್ಯತೆ ಬಗ್ಗೆ ನಿರಂತರವಾಗಿ ಮಾಹಿತಿ ಒದಗಿಸಬೇಕು. ಡಿಸಿ, ಸಿಇಒಗಳು ಜವಾಬ್ದಾರಿ ತೆಗೆದುಕೊಳ್ಳಬೇಕು. ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಜಿಲ್ಲಾ ಬ್ಯಾಂಕ್​​ಗಳೊಂದಿಗೆ ಸಮನ್ವಯ ಸಾಧಿಸಿ, ಕ್ರಮ ಕೈಗೊಳ್ಳಬೇಕು. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕ್​​ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಸಿಎಂ ಹೇಳಿದರು.

ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದು, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ಖಾತರಿ ಪಡಿಸಲು, ಕಲುಷಿತ ನೀರು ಪೂರೈಕೆ ಪ್ರಕರಣಗಳನ್ನು ತಡೆಯಲು ಸಿಎಂ ತಾಕೀತು ಮಾಡಿದರು.

ಇನ್​​ಪುಟ್ ಸಬ್ಸಿಡಿ ಪ್ರಗತಿಗೆ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಸಬ್ಸಿಡಿ ವಿಚಾರದಲ್ಲಿ ವಿಳಂಬ ಸರಿಯಲ್ಲ, ಮುಂದಿನ ಒಂದು ವಾರದೊಳಗೆ ಇನ್‌ಪುಟ್‌ ಸಬ್ಸಿಡಿ ಶೇ.100 ರಷ್ಟು ಪೂರ್ಣಗೊಳಿಸಬೇಕು. ಬರ ಪರಿಹಾರ ಕಾಮಗಾರಿಗಳು ಮತ್ತು ಇತರ ಕಾರ್ಯಗಳ ಬಿಲ್ಲುಗಳ ಪಾವತಿಯನ್ನು ಪ್ರತಿ 15 ದಿನಕ್ಕೊಮ್ಮೆ ಮಾಡುವಂತೆ ಸೂಚಿಸಿದರು.

ಈ ಬಾರಿ ಕರ್ನಾಟಕದಲ್ಲಿ ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಕೃಷ್ಣಾ ನದಿ, ಭೀಮಾನದಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮೊದಲಾದ ಕಡೆ ಸಾವು ನೋವಿನ ಪ್ರಕರಣಗಳು ಹೆಚ್ಚಾಗಿವೆ. ಸಾವು ನೋವಿನ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುವ ಜಿಲ್ಲೆಗಳಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಅಧಿಕಾರಿಗಳು ನೀಡಿದ ಮಾಹಿತಿ: ಪ್ರಸ್ತುತ ಮುಂಗಾರು ಹಂಗಾಮಿಗೆ 82.4 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 2024-25 ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಅಂದರೆ ಮೇ 17 ರ ವರೆಗೆ 2.95 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯಲ್ಲಿ 68,600 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ.23 ರಷ್ಟು ಸಾಧನೆಯಾಗಿದೆ. 2024 ರ ಮುಂಗಾರು ಹಂಗಾಮಿಗೆ ಸಹಾಯಧನದಡಿ 5,52,350 ಕ್ವಿಂಟಾಲ್‌ ಬಿತ್ತನೆ ಬೀಜಕ್ಕೆ ಬೇಡಿಕೆ ಇದ್ದು, 9,01,397 ಕ್ವಿಂಟಾಲ್‌ ಬಿತ್ತನೆ ಬೀಜ ಲಭ್ಯವಿದೆ. ಮೇ 22 ರ ವರೆಗೆ 5492.44 ಕ್ವಿಂಟಾಲ್‌ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. 14,608.49 ಕ್ವಿಂಟಾಲ್‌ ಬಿತ್ತನೆ ಬೀಜ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಲಭ್ಯವಿದೆ. ಬೇಡಿಕೆಗೆ ತಕ್ಕಂತೆ ಸಂಬಂಧಿಸಿದ ಸಂಸ್ಥೆಗಳಿಂದ ಬಿತ್ತನೆ ಬೀಜ ಪೂರೈಕೆ ಮಾಡಲಾಗುತ್ತಿದೆ. ಏಪ್ರಿಲ್‌ 1, 2024 ರಿಂದ 3.22 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ಮಾರಾಟವಾಗಿದ್ದು, ಒಟ್ಟು 14,86,067 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಹಾವೇರಿ ಜಿಲ್ಲೆಯಲ್ಲಿ ಮಳೆ ಪ್ರಾರಂಭವಾಗಿದ್ದರಿಂದ ಏಕಾಏಕಿ ರೈತರು ರಸಗೊಬ್ಬರ ಪಡೆಯಲು ಬಂದಿದ್ದರಿಂದ ನೂಕುನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ವಿವರಿಸಿದರು.

ಜೀವನೋಪಾಯ ನಷ್ಟ ಪರಿಹಾರಕ್ಕೆ 2800 ರೂ. ನಂತೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 460 ಕೋಟಿ ರೂ. ಗಳನ್ನು 20 ಲಕ್ಷ ರೈತರಿಗೆ ಒದಗಿಸಲಾಗುತ್ತಿದೆ. ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 826 ಕೋಟಿ ರೂ. ಲಭ್ಯವಿದೆ ಎಂದು ಸಿಎಂಗೆ ತಿಳಿಸಿದರು.

ಇದನ್ನೂ ಓದಿ: ಪೊಲೀಸರಿಗೆ ಶರಣಾಗದಿದ್ದಲ್ಲಿ ಏಕಾಂಗಿಯಾಗುವೆ: ಕುಟುಂಬದಿಂದಲೇ ಹೊರಹಾಕುವುದಾಗಿ ಪ್ರಜ್ವಲ್​​ಗೆ ಎಚ್ಚರಿಕೆ ನೀಡಿದ ದೇವೇಗೌಡ - DEVEGOWDA wrote letter to Prajwal

ETV Bharat Logo

Copyright © 2024 Ushodaya Enterprises Pvt. Ltd., All Rights Reserved.